IT Raid: ಕಳ್ಳರ ಮನಸ್ಸು ಹುಳ್ಳುಳ್ಳಗೆ; ಲಕ್ಷ್ಮಿ ಹೆಬ್ಬಾಳ್ಕರ್ಗೆ ತಿರುಗೇಟು ಕೊಟ್ಟ ಸಿಎಂ ಬೊಮ್ಮಾಯಿ
2023ರ ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ತಮ್ಮ ತಮ್ಮ ಅಭ್ಯರ್ಥಿಗಳ ಪರ ರಾಜಕೀಯ ಪಕ್ಷಗಳು ಮತೆಬೇಟೆಗೆ ಇಳಿದಿದ್ದಾರೆ. ಇದೆ ವೇಳೆ ರಾಜಕೀಯ ನಾಯಕರ ನಡುವೆ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬರುತ್ತಿವೆ.
ಚುನಾವಣೆ ಸಂದರ್ಭದಲ್ಲಿಯೇ ವಿಪಕ್ಷಗಳ ಅಭ್ಯರ್ಥಿಗಳ ಮೇಲೆ ಐಟಿ, ಇಡಿ ಮತ್ತು ಲೋಕಾಯುಕ್ತ ದಾಳಿ ನಡೆಸಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡುತ್ತಿವೆ.

ಇಂದು (ಶನಿವಾರ) ದಿಢೀರ್ ಸುದ್ದಿಗೋಷ್ಠಿ ಕರೆದ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಮತ್ತು ಸಂಬಂಧಿಕರ ಮನೆಗಳ ಮೇಲೆ ಐಟಿ ಮತ್ತು ಲೋಕಾಯಕ್ತ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.
"ಚುನಾವಣಾ ಹೊಸ್ತಿಲಲ್ಲಿ ನನ್ನನ್ನು ಸೇರಿ ಸುಮಾರು 50 ಅಭ್ಯರ್ಥಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸುವ ಮುನ್ಸೂಚನೆ ಸಿಕ್ಕಿದೆ," ಎಂದು ಸಹೋದರ ಮತ್ತು ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಜೊತೆಗೂಡಿ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದರು.

"ಇನ್ನು ಒಂದೆರಡು ದಿನಗಳಲ್ಲಿ ಐಟಿ ದಾಳಿ ಮಾಡುವ ಮುನ್ಸೂಚನೆ ಸಿಕ್ಕಿದೆ. ಬಿಜೆಪಿ ಸರ್ಕಾರವಧಿಯಲ್ಲಿ ದೇಶದ ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದರೂ, ಈ ರೀತಿ ವಿಪಕ್ಷಗಳ ಹೆದರಿಸುವುದು ಸರ್ವೇಸಾಮಾನ್ಯವಾಗಿದೆ. ಇದೇ ಅವರಿಗೆ ತಿರುಗು ಬಾಣವಾಗುತ್ತದೆ," ಎಂದು ತಿಳಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, "ಐಟಿ ಮತ್ತು ಲೋಕಾಯುಕ್ತ ಸ್ವತಂತ್ರ ಸಂಸ್ಥೆಗಳು, ಅಕ್ರಮ ಹಣ ಸಂಪಾದಿಸಿದ ಯಾರನ್ನೂ ಬಿಡುವುದಿಲ್ಲ. ಕಳ್ಳರ ಮನಸ್ಸು ಹುಳ್ಳುಳ್ಳಗೆ," ಎಂದು ತಿರುಗೇಟು ನೀಡಿದರು.
ಬಸವರಾಜ ಬೊಮ್ಮಾಯಿಯೇ ಮುಂದಿನ ಸಿಎಂ ಅಭ್ಯರ್ಥಿ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, "ಕೇಂದ್ರ ಸಂಸದೀಯ ಮಂಡಳಿ ಮತ್ತು ಶಾಸಕರು ಮುಖ್ಯಮಂತ್ರಿ ಆಯ್ಕೆ ಮಾಡುತ್ತಾರೆ. ನಡ್ಡಾ ನನ್ನ ಮೇಲೆ ಬಹಳ ನಿರೀಕ್ಷೆ ಇಟ್ಟು ಒಳ್ಳೆಯ ಮಾತು ಹೇಳಿದ್ದಾರೆ. ಈ ಮುಂಚೆ ಅಮಿತ್ ಶಾ ಬಂದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ತಿಳಿಸಿದ್ದೆ. ನಮ್ಮ ಪಕ್ಷದಲ್ಲಿ ಸ್ಪಷ್ಟ ನಿಲುವಿದೆ," ಎಂದು ಹೇಳಿದರು.
ಪ್ರಿಯಾಂಕಾ ಗಾಂಧಿಗೆ ತಿರುಗೇಟು ನೀಡಿದ ಬೊಮ್ಮಾಯಿ
ಇನ್ನು ಪ್ರವಾಹದ ಸಂದರ್ಭದಲ್ಲಿ ರಾಜ್ಯಕ್ಕೆ ನರೇಂದ್ರ ಮೋದಿ ಬಂದಿರಲಿಲ್ಲ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಕ್ಕೆ ತಿರುಗೇಟು ಕೊಟ್ಟ ಸಿಎಂ ಬಸವರಾಜ ಬೊಮ್ಮಾಯಿ, "ಪ್ರವಾಹ ಬಂದಾಗ ರಾಜ್ಯಕ್ಕೆ ಹೆಚ್ಚಿನ ಹಣ ನೀಡಿದ್ದು, ಮೋದಿ ಸರ್ಕಾರ. ಪ್ರಿಯಾಂಕಾ ಗಾಂಧಿ ಕುಟುಂಬ ಸರ್ಕಾರವಿದ್ದಾಗ ಮನೆ ಬಿದ್ದರೆ ಕೇವಲ 2 ಸಾವಿರ ರೂಪಾಯಿ ಕೊಡುತ್ತಿದ್ದರು. ಅತಿವೃಷ್ಟಿ ಪರಿಹಾರವನ್ನು ನರೇಂದ್ರ ಮೋದಿ ಕಾಲದಲ್ಲಿ ಹೆಚ್ಚಿಸಲಾಗಿದೆ," ಎಂದರು.
ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ಬೆಂಬಲಿಸಿದ ಎಚ್ಡಿಕೆ
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಯನ್ನು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಬೆಂಬಲಿಸಿದ್ದು, "ಜೆಡಿಎಸ್ ಮತ್ತು ಕಾಂಗ್ರೆಸ್ಸಿಗರ ಮೇಲೆ ಐಟಿ ದಾಳಿ ಆಗುತ್ತದೆ. ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿರುವುದು ತಪ್ಪಿಲ್ಲ. ಬಿಜೆಪಿಯಲ್ಲಿ ಇಡಿ ಮೋರ್ಚಾ ಹಾಗೂ ಐಟಿ ಮೋರ್ಚಾ ಇದೆ," ಎಂದು ಹೇಳಿದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.












Click it and Unblock the Notifications