ಕಾಂಗ್ರೆಸ್ 4ನೇ ಗ್ಯಾರಂಟಿ; ಪ್ರತಿ ತಿಂಗಳು ನಿರುದ್ಯೋಗಿಗಳಿಗೆ 3,000
ಕರ್ನಾಟಕ ಕಾಂಗ್ರೆಸ್ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 4ನೇ ಭರವಸೆ ಘೋಷಣೆ ಮಾಡಿದೆ. ಯುವಸಬಲೀಕರಣಕ್ಕೆ ಯುವ ನಿಧಿ ಎಂಬ ಮಹತ್ವದ ಯೋಜನೆಯನ್ನು ಘೋಷಿಸುತ್ತಿದೆ.
ಬೆಂಗಳೂರು, ಮಾರ್ಚ್ 17; ಕರ್ನಾಟಕದ ವಿಧಾನಸಭೆ ಚುನಾವಣೆ ಗೆಲ್ಲಲು ತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷ ಈಗಾಗಲೇ ಜನರಿಗೆ 3 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಯುವಕರನ್ನು ಗಮನದಲ್ಲಿಟ್ಟುಕೊಂಡು 'ಯುವನಿಧಿ' ಎಂಬ 4ನೇ ಗ್ಯಾರಂಟಿಯನ್ನು ಈಗ ಪ್ರಕಟಿಸಿದೆ. ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ.
ಸೋಮವಾರ ಬೆಳಗಾವಿಯಲ್ಲಿ ಕರ್ನಾಟಕ ಕಾಂಗ್ರೆಸ್ನ ಯುವ ಕ್ರಾಂತಿ ಸಮಾವೇಶ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಈ ಸಮಾವೇಶದಲ್ಲಿಯೇ ಕಾಂಗ್ರೆಸ್ 4ನೇ ಗ್ಯಾರಂಟಿ 'ಯುವನಿಧಿ' ಘೋಷಣೆ ಮಾಡಿದೆ. ಈ ಮೂಲಕ ಚುನಾವಣೆಯಲ್ಲಿ ಯುವಕರ ಮತಗಳನ್ನು ಸೆಳೆಯಲು ಮುಂದಾಗಿದೆ.

ಕಾಂಗ್ರೆಸ್ ಪಕ್ಷ 'ಯುವನಿಧಿ' ಘೋಷಣೆಯಡಿ ನಿರುದ್ಯೋಗಿ ಪದವೀಧರಿಗೆ ತಿಂಗಳಿಗೆ 3 ಸಾವಿರ ರೂ. ಆರ್ಥಿಕ ಶಕ್ತಿಯನ್ನು, ಡಿಪ್ಲೊಮಾ ಪದವೀಧರಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳ ತನಕ ನೀಡಲಿದೆ. ಕಾಂಗ್ರೆಸ್ ಪಕ್ಷ ಯುವಸಬಲೀಕರಣಕ್ಕೆ ಮಹತ್ವದ ಯೋಜನೆಯನ್ನು ಘೋಷಿಸುತ್ತಿದೆ ಎಂದು ಯುವನಿಧಿ ಕಾರ್ಯಕ್ರಮ ಘೋಷಣೆ ಮಾಡಿದೆ.
#NewProfilePic pic.twitter.com/xPxdMLZ1st
— Karnataka Congress (@INCKarnataka) March 20, 2023
ಈ ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3000 ಆರ್ಥಿಕ ನೆರವು. ಹಾಗೂ ನಿರುದ್ಯೋಗಿ ಡಿಪ್ಲೊಮಾ ಪಧವೀಧರರಿಗೆ 1500 ನಿರುದ್ಯೋಗ ಭತ್ಯೆ ನೀಡುವ #YuvaNidhi ಯೋಜನೆಯನ್ನು ಘೋಷಿಸುತ್ತಿದ್ದೇವೆ. ಯುವ ಶಕ್ತಿಗೆ ಶಕ್ತಿ ತುಂಬಲು ಬದ್ಧವಾಗಿದ್ದೇವೆ ಎಂದು ಹೇಳಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ ಈಗಾಗಲೇ 3 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಅನ್ನಭಾಗ್ಯ ಯೋಜನೆಯಡಿ ಬಡಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವುದು 'ಅನ್ನಭಾಗ್ಯ'ವಾಗಿದೆ. ಕಾಂಗ್ರೆಸ್ ಪಕ್ಷದ ಮೊದಲ ಗ್ಯಾರಂಟಿ 'ಗೃಹ ಜ್ಯೋತಿ' ಆಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಕೊಡುವುದು ಈ ಘೋಷಣೆಯಾಗಿದೆ. ಕಾಂಗ್ರೆಸ್ನ ಗ್ಯಾರಂಟಿ 2 'ಗೃಹ ಲಕ್ಷ್ಮೀ' ಯೋಜನೆಯಾಗಿದೆ. ಈ ಘೋಷಣೆಯಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಯಜಮಾನನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತದೆ.

ಬೆಳಗಾವಿಯಲ್ಲಿ ಸಮಾವೇಶ; ಬೆಳಗಾವಿಯ ಸಿಪಿಇಡ್ ಮೈದಾನದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ 'ಯುವ ಕ್ರಾಂತಿ' ಸಮಾವೇಶ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಪ್ರಜಾಧ್ವನಿ ಸಮಾವೇಶವನ್ನು ಸಹ ಬೆಳಗಾವಿಯಿಂದಲೇ ಆರಂಭಿಸಿತ್ತು. ಸಮಾವೇಶದಲ್ಲಿ ಸಂಸದ ರಾಹುಲ್ ಗಾಂಧಿ ಪಾಲ್ಗೊಂಡಿದ್ದಾರೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸ್ವಾಗತಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ರಾಹುಲ್ ಗಾಂಧಿ ಜೊತೆ ಆಗಮಿಸಿದರು.
'ಯುವ ಕ್ರಾಂತಿ' ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಯುವಕರು ಬೆಳಗಾವಿಗೆ ಆಗಮಿಸಿದ್ದಾರೆ. ಸುಮಾರು 80 ಸಾವಿರ ಜನರು ಕುಳಿತುಕೊಳ್ಳಲು ಸಾಧ್ಯವಾಗುವಂತಹ ವೇದಿಕೆ ನಿರ್ಮಾಣ ಮಾಡಲಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ ಸೇರಿದಂತೆ ವಿವಿಧ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
'ಯುವಕ್ರಾಂತಿ' ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ನಾನು ಎಐಸಿಸಿ ಅಧ್ಯಕ್ಷನಾದ ನಂತರ ಮೊದಲ ಬಾರಿಗೆ ಬೆಳಗಾವಿಯ ಪವಿತ್ರ ಭೂಮಿಯ ಮೇಲೆ ಕಾಲಿಟ್ಟಿದ್ದೇನೆ. ಮಹಾತ್ಮಾ ಗಾಂಧೀಜಿ ಅವರು ಇದೇ ನೆಲದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿದ್ದರು. ತಾವೆಲ್ಲರೂ ಸೇರಿ ಈಗ ನನ್ನನ್ನು ಅದೇ ಸ್ಥಾನದಲ್ಲಿ ಕೂರಿಸಿದ್ದೀರಿ, ಅದಕ್ಕಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದು ಹೇಳಿದರು.












Click it and Unblock the Notifications