ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಭಯದಲ್ಲಿ ಐಟಿ, ಇಡಿ ದಾಳಿ ಮಾಡಿಸುತ್ತಿದ್ದಾರೆ: ಡಿಕೆಶಿ ಹೊಸ ಬಾಂಬ್
ಬೆಂಗಳೂರು, ಮಾರ್ಚ್23: ಚುನಾವಣಾ ಹೊತ್ತಲಿ ಪಕ್ಷಾಂತರ ಪರ್ವ ಜೋರಾಗಿದ್ದು, ಕಾಂಗ್ರೆಸ್ ಆಪರೇಷನ್ ಅಸ್ತಕ್ಕೆ ಸಾಲು ಸಾಲು ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗುತ್ತಿದ್ರೆ. ಇತ್ತ ಬಿಜೆಇ ನಾಯಕರನ್ನ ಹಿಡಿದಿಟ್ಟುಕೊಳ್ಳಲು ಸರ್ಕಸ್ ನಡೆಸುತ್ತಿದೆ.
ಈಗಾಗಲೇ ಸಚಿವ ನಾರಾಯಣ ಗೌಡ ಹಾಗೂ ಶಾಸಕ ಪೂರ್ಣಿಮಾ ಶ್ರೀನಿವಾಸ್ ಜೊತೆಗ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತು ಕತೆ ನಡೆಸಿದ್ದು, ಇಬ್ಬರ ನಾಯಕರ ಅಸಮಾಧಾನವನ್ನ ಶಮನಗೊಳಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಬಿಜೆಪಿ ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಭಯದಲ್ಲಿ ಐಟಿ, ಇಡಿ ದಾಳಿ ಮಾಡಿಸುತ್ತಿದ್ದಾರೆ. ಬಿಜೆಪಿ ಸಚಿವರುಗಳು ಹಣ ಮಾಡಿಲ್ಲವೇ? ಅವರ ಮನೆ ಮೇಲೆ ದಾಳಿ ಏಕಿಲ್ಲ? ಯಡಿಯೂರಪ್ಪ ಹಾಗೂ ಅವರ ಕುಟುಂಬದವರನ್ನು ನಿಯಂತ್ರಿಸಲು ಕೆಲವು ಅಧಿಕಾರಿಗಳನ್ನು ಬಿಟ್ಟಿದ್ದಾರೆ. ಅವರ ಮೂಲಕ ಯಡಿಯೂರಪ್ಪ ಅವರನ್ನು ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ನಾರಾಯಣ ಗೌಡ, ಪೂರ್ಣಿಮಾ ಅವರು ಕಾಂಗ್ರೆಸ್ ಹೋಗುವುದಿಲ್ಲ ಎಂದು ಯಡಿಯೂರಪ್ಪ ಕುರಿತು ಮಾತನಾಡಿ, ಈ ನಾಯಕರುಗಳು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಅವರಿಗೆ ಹೇಳಿದವರಾರು? ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದೇಕೆ? ಅವರು ಏನು ಮಾಡಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ ಎಂದರು.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಮಾತನಾಡಿ, ನಿನ್ನೆ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಮರಳಿದ್ದಾರೆ. ಅವರು ತೀರ್ಮಾನ ಮಾಡುತ್ತಾರೆ. ಅಮಾವಾಸೆ ನಂತರ ಚಂದ್ರ ಉದಯವಾಗಬೇಕಲ್ಲವೇ?' ಎಂದು ತಿಳಿಸಿದರು.
ಕೆಲವು ಕ್ಷೇತ್ರಗಳಲ್ಲಿ ಗೊಂದಲವಿದ ಕುರಿತು ಮಾತನಾಡಿ, ಯಾವುದೇ ಕ್ಷೇತ್ರದಲ್ಲಿ ಗೊಂದಲವಿಲ್ಲ. ನಾವು ಎಲ್ಲರನ್ನು ಕರೆದು ಮಾತನಾಡಿ, ರಾಜಿ ಮಾಡುತ್ತೇವೆ. ಎಲ್ಲರಿಗೂ ನಾವು ಅಧಿಕಾರ ಹಂಚುತ್ತೇವೆ. ಎಲ್ಲರಿಗೂ ಸಮಬಾಳು, ಸಮಪಾಲು ನೀಡುತ್ತೇವೆ ಎಂದು ತಿಳಿಸಿದರು.
ಕೆಪಿಎಸ್ ಸಿ ಸೇರಿದಂತೆ ಅನೇಕ ಇಲಾಖೆ ನೇಮಕಾತಿ ನೆನೆಗುದಿಗೆ ಬಿದ್ದಿರುವ ಕುರಿತು ಮಾತನಾಡಿ, ಎಲ್ಲ ಅಭ್ಯರ್ಥಿಗಳು, ನಿರುದ್ಯೋಗಿಗಳಿಗೆ ಇಡೀ ಯುವ ಸಮೂಹಕ್ಕೆ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಅನ್ಯಾಯವಾಗುತ್ತಿದೆ. ರಾಜ್ಯಕ್ಕೆ ಭ್ರಷ್ಟಾಚಾರದ ರಾಜಧಾನಿ ಎಂಬ ಕಳಂಕವನ್ನು ರಾಜ್ಯಕ್ಕೆ ತಂದಿದ್ದಾರೆ. ಹೊಸ ವರ್ಷದ ಸಮಯದಲ್ಲಿ ಈ ಭ್ರಷ್ಟ ಸರ್ಕಾರದಿಂದ ರಾಜ್ಯಕ್ಕೆ ಮುಕ್ತಿ ಕೊಡಿಸಲು ಮಾಧ್ಯಮಗಳು ಸಹಕಾರ ನೀಡಬೇಕು. ಅಭ್ಯರ್ಥಿಗಳು ಈ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಿರುದ್ಯೋಗಿಗಳಿಗೆ ನೆರವಾಗುವ ಉದ್ದೇಶದಿಂದ ನಾವು ಯುವನಿಧಿ ಯೋಜನೆ ಮೂಲಕ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ, ಡಿಪ್ಲೋಮಾ ಮಾಡಿರುವವರಿಗೆ ಪ್ರತಿ ತಿಂಗಳು 1500 ನಿರುದ್ಯೋಗ ಭತ್ಯೆ ನೀಡಲು ತೀರ್ಮಾನಿಸಿದ್ದೇವೆ. ಇದರ ಜತೆಗೆ 200 ಯುನಿಟ್ ವಿದ್ಯುತ್, ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ, 10 ಕೆ.ಜಿ ಅಕ್ಕಿ ನೀಡುವ ಗ್ಯಾರಂಟಿ ಯೋಜನೆ ಪ್ರಕಟಿಸಿದ್ದೇವೆ. ಇದು ಹೇಗೆ ಸಾಧ್ಯವಾಗುತ್ತದೆ ಎಂಬ ಚರ್ಚೆಗೆ ಬೊಮ್ಮಾಯಿ, ಕಟೀಲ್ ಸಿದ್ಧರಿದ್ದರೆ ಮಾಧ್ಯಮಗಳ ವೇದಿಕೆ ಮುಂದೆ ಬಂದು ಚರ್ಚೆ ಮಾಡಲಿ. ಅವರ ಪ್ರಣಾಳಿಕೆ, 15 ಲಕ್ಷ ನೀಡುವ ಭರವಸೆ ಸೇರಿದಂತೆ ಎಲ್ಲದರ ಬಗ್ಗೆ ಚರ್ಚೆ ಮಾಡೋಣ ಎಂದು ತಿಳಿಸಿದರು.
ಇನ್ನು ಕೋಲಾರದ ಭಾಷಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿರುವ ಬಗ್ಗೆ ಮಾತನಾಡಿದ ಅವರು, 'ಇದು ರಾಜಕೀಯ ಪ್ರೋರಣೆಯಿಂದ ಆಗಿದೆ. ಭಾರತ ಜೋಡೋ ಯಾತ್ರೆ ಮೂಲಕ ಅವರಿಗೆ ಸಿಕ್ಕಿರುವ ಶಕ್ತಿಯನ್ನು ಸಹಿಸಲಾಗದೇ ಅದನ್ನು ಕುಗ್ಗಿಸಲು ಈ ರೀತಿ ಮಾಡಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಇದಕ್ಕೆ ಹೆದರುವುದಿಲ್ಲ.
ರಾಹುಲ್ ಗಾಂಧಿ ಅವರ ತಾತಾ ನೆಹರೂ ಅವರು ದೇಶಕ್ಕಾಗಿ 13 ವರ್ಷಗಳ ಕಾಲ ಜೈಲು ಸೇರಿದ್ದರು, ಅವರ ಅಜ್ಜಿ ಇಂದಿರಾ ಗಾಂಧಿ ಹಾಗೂ ತಂದೆ ರಾಜೀವ್ ಗಾಂಧಿ ಅವರು ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಪ್ರಧಾನಮಂತ್ರಿ ಹುದ್ದೆ ಸಿಕ್ಕರೂ ದೇಶದ ಆರ್ಥಿಕತೆ ಉಳಿಸಲು ಆ ಸ್ಥಾನ ತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅಧಿಕಾರ ತ್ಯಾಗ ಮಾಡಿದ್ದಾರೆ. ಜನರ ಪ್ರೀತಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಭವಿಷ್ಯಕ್ಕಾಗಿ ಇಡೀ ದೇಶ ಕಾಯುತ್ತಿದೆ ಎಂದು ತಿಳಿಸಿದರು.












Click it and Unblock the Notifications