ಬಿಜೆಪಿಗೆ ಲಕ್ಷ್ಮಣ್ ಸವದಿ ಗುಡ್ ಬೈ:ನನ್ನ ಹೆಣ ಕೂಡಾ ಬಿಜೆಪಿಗೆ ಹೋಗಲ್ಲ ಎಂದ ಸವದಿ
ಬೆಂಗಳೂರು,ಏಪ್ರಿಲ್14: ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಘೋಷಣೆಯ ಬೆನ್ನಲ್ಲೇ ಬಂಡಾಯದ ಬೆಂಕಿ ಜೋರಾಗಿದೆ. ಈಗಾಗಲೇ ಸಾಲು ಸಾಲು ನಾಯಕರು ಬಿಜೆಪಿ ಗುಡ್ ಬೈ ಹೇಳಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇದೀಗ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಈ ಕುರಿತು ಲಕ್ಷಣ ಸವದಿ ಮಾತನಾಡಿ, ನಾನು ಅಥಣಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ನಾನು ಯಾವುದೇ ಕಂಡೀಷನ್ ಹಾಕಿಲ್ಲ, ಸರ್ಕಾರ ಬಂದಾಗ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ, ನೀರಾವರಿ ಯೋಜನೆ ಮುಗಿಸಿಕೊಡಲು ಮನವಿ ಮಾಡಿದ್ದೇನೆ ಎಂದು ಹೇಳಿದರು.

ನಾನು ನನ್ನ ಹೆಂಡತಿ,ಮಗನಿಗೆ ಯಾರಿಗೂ ನಾನು ಟಿಕೆಟ್ ಕೇಳಿಲ್ಲ. ಬಿಜೆಪಿ ನನಗೆ ಕೊಟ್ಟ ಮಾತು ತಪ್ಪಿದೆ. ನನಗೆ ವಿಧಾನ ಪರಿಷತ್ ಸದಸ್ಯರಾಗಿ ಮಾಡು ಅಂದವರು ಯಾರು? ಡಿಸಿಎಂ ಮಾಡಿ ಅಂದವರು ಯಾರು ? , ಡಿಸಿಎಂ ಸ್ಥಾನದಿಂದ ಕೆಳಗಿಳಿಸಿ ಎಂದವರು ಯಾರು? ಡಿಸಿಎಂ ಕೊಟ್ಟು ಕಿತ್ತುಕೊಂಡಾಗ ನೋವಾಯ್ತು ಎಂದು ಬೇಸರ ವ್ಯಕ್ತಪಡಿಸಿದಾರೆ.
ಬಿಜೆಪಿಯವರು ಕೊಟ್ಟ ಮಾತನ್ನು ತಪ್ಪಿದ್ರು. ಸಾರ್ವತ್ರಿಕ ಚುನಾವಣೆಯಲ್ಲಿ ನಿಮಗೆ ಟಿಕೆಟ್ ಕೊಡ್ತಿವಿ ಅಂತ ಮಾತು ಕೊಟ್ಟಿದ್ರು, ಯಾರು ಕೂಡಾ ಈ ಬಗ್ಗೆ ಮಾತನಾಡಿಲ್ಲ. ನಾನು ಯಾವುದೇ ಡಿಮ್ಯಾಂಡ್ ಇಟ್ಟಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಕ್ಷೇತ್ರದಲ್ಲಿ ಬಾಕಿ ಉಳಿರುವ ನೀರಾವರಿ ಯೋಜನೆ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ. ನಾನು ಒಂದು ಜಾತಿಗೆ ಸೀಮಿತನಾದವನಲ್ಲ, ಎಲ್ಲಾ ಜಾತಿಜನಾಂಗದ ನಾಯಕನಾಗಲು ಬಯಸುತ್ತೇನೆ ಎಂದು ಹೇಳಿದರು.

ಎಲ್ಲಾ ಜಿಲ್ಲೆಗಳಲ್ಲೂ ನನ್ನನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ನನ್ನ ಶಕ್ತಿ ಮೀರಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ. ನಾನು ನನ್ನ ಮಗನಿಗೆ ಟಿಕೆಟ್ ಕೇಳಿಲ್ಲ, ನನಗೆ ಪುತ್ರ ವ್ಯಾಮೋಹ ಇಲ್ಲ. ನಾನು ಅಥಣಿಯಿಂದ ಟಿಕೆಟ್ ಕೇಳಿದ್ದೇನೆ, ಅದಕ್ಕೆ ಒಪ್ಪಿಗೆಯಾಗಿದೆ ಎಂದು ಹೇಳಿದರು.
ಲಕ್ಷ್ಮಣ ಸವದಿ ಜತೆ ಇನ್ನು ಅನೇಕರು ಕಾಂಗ್ರೆಸ್ ಪಕ್ಷಕ್ಕೆ: ಡಿ.ಕೆ. ಶಿವಕುಮಾರ್
ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರ ನಿವಾಸದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಲಕ್ಷ್ಮಣ ಸವದಿ ಅವರ ಜತೆ ಶುಕ್ರವಾರ ಸಮಾಲೋಚನೆದ್ದು, ಹಲವು ಬಿಜೆಪಿ ನಾಯಕರಿಗೆ ಗಾಳ ಹಾಕಿದ್ದಾರೆ.
ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರುತ್ತಿದ್ದು, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರನ್ನು ಪಕ್ಷದ ಎಲ್ಲಾ ನಾಯಕರು ತುಂಬು ಹೃದಯದ ಸ್ವಾಗತ ಕೋರುತ್ತೇವೆ. ಲಕ್ಷ್ಮಣ ಸವದಿ ಅವರ ಜತೆಗೆ ಇನ್ನು ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಎಲ್ಲರನ್ನೂ ನಾವು ಒಮ್ಮತದಿಂದ ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದರು.












Click it and Unblock the Notifications