Karnataka Elections: ಸುಡುಗಾಡಿನಿಂದ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ
ಬೆಳಗಾವಿ, ಏಪ್ರಿಲ್ 03: ಮೌಡ್ಯ ವಿರೋಧಿಯಾಗಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರು ಶೀಘ್ರವೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಚಾರವನ್ನು ಆರಂಭಿಸಲಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಮಾಢ್ಯಾಚರಣೆಗಳ ಕಡು ವಿರೋಧಿ ಆಗಿರುವ ಸತೀಶ್ ಜಾರಕಿಹೊಳಿ ಅವರು ಚುನಾವಣೆ ಪ್ರಚಾರಕ್ಕೆ ವಿನೂತನವಾಗಿ ಚಾಲನೆ ನೀಡಲಿದ್ದಾರೆ.
ಚುನಾವಣೆ ಪ್ರಚಾರಕ್ಕಾಗಿ ಎರಡು ವಾಹನಗಳನ್ನು ಖರೀದಿಸಿರುವ ಅವರು, ವಾಹನಗಳಿಗೆ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಶೀಘ್ರವೇ ಚುನಾವಣಾ ಪ್ರಚಾರ ಆರಂಭಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭಾನುವಾರ ಹೇಳಿದ್ದಾರೆ.

ಅಶುಭ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುತ್ತೀರಾ ಎಂಬ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿದ್ದಾರೆ.
'ಪ್ರತಿದಿನ ರಾಹುಕಾಲವಿದೆ. ಏಪ್ರಿಲ್ 13 ರಿಂದ 20 ರ ನಡುವೆ ರಾಹುಕಾಲ ಇದ್ದರೆ, ನಾನು ಖಂಡಿತವಾಗಿಯೂ ನನ್ನ ನಾಮಪತ್ರವನ್ನು ಆವಾಗಲೇ ಸಲ್ಲಿಸುತ್ತೇನೆ' ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
'ರಾಹುಕಾಲ ಅನ್ನೋದು ಕೇವಲ ಭ್ರಮೆ. ಒಂದು ವರ್ಗದ ಜನರು ನನ್ನನ್ನು ಹಿಂದೂ ವಿರೋಧಿ ಎಂದು ಆರೋಪಿಸುತ್ತಾರೆ. ಇದು ತಪ್ಪು ಎಂದು ಯಾರೂ ಹೇಳುತ್ತಿಲ್ಲ. ರಾಹುಕಾಲದಲ್ಲಿ ಹೊಸ ಪಯಣ ಆರಂಭಿಸುತ್ತೇನೆ. ಸ್ಮಶಾನಕ್ಕೆ ಪೂಜೆ ಸಲ್ಲಿಸುತ್ತಿದ್ದೇನೆ. ಕಳೆದ ಮೂರು ದಶಕಗಳಿಂದ ನಾನು ಅದನ್ನು ಮಾಡುತ್ತಿದ್ದೇನೆ. ಬಸವಣ್ಣ, ಬುದ್ಧ ಮತ್ತು ಅಂಬೇಡ್ಕರ್ ಈ ಮಾರ್ಗವನ್ನು ತೋರಿಸಿದ್ದಾರೆ' ಎಂದು ಯಮಕನಮರಡಿ ಶಾಸಕ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ 12 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದೂ ಸತೀಶ್ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಹಲವು ಕ್ಷೇತ್ರಗಳಲ್ಲಿ ಎಸ್ಸಿ / ಎಸ್ಟಿ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಸಂಪೂರ್ಣ ಹುರುಪಿನಿಂದ ಸಕ್ರಿಯವಾಗಿ ಚುನಾವಣೆ ಎದುರಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಚುನಾವಣಾ ಪೂರ್ವ ಸಿದ್ಧತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಲು ಎಲ್ಲರೂ ಸಹಕರಿಸಬೇಕು. ಈ ಚುನಾವಣೆಯು ಮೇ 10 ರಂದು ನಡೆಯಲಿದೆ. ಎಸ್ಟಿ ಸಮುದಾಯಕ್ಕೆ ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದ್ದಾರೆ.

ಮುಂಬರುವ 40 ದಿನಗಳು ಮಹತ್ವದ್ದಾಗಿದ್ದು, ಪಕ್ಷದ ಕಾರ್ಯಕರ್ತರು ಯಾವುದೇ ಒತ್ತಡ, ಆಮಿಷಗಳಿಗೆ ಮಣಿಯದೆ ಅತ್ಯಂತ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.
ಮೀಸಲಾತಿಯನ್ನು ಹೇಗೆ ಜಾರಿಗೆ ತರಬೇಕು ಎಂಬ ಬಗ್ಗೆ ಸ್ವತಃ ಬಿಜೆಪಿ ಶಾಸಕರಿಗೆ ತಿಳಿದಿಲ್ಲ, ಆದರೆ ಪಕ್ಷವು ಸುಳ್ಳಿನ ಆಧಾರದ ಮೇಲೆ ಚುನಾವಣೆಗಳನ್ನು ಗೆಲ್ಲಲು ಕೆಳಮಟ್ಟಕ್ಕೆ ಇಳಿದಿದೆ. ಅವರ ವಿರುದ್ಧ ಸೈನಿಕರಂತೆ ಹೋರಾಡಿ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಎಸ್ಸಿ / ಎಸ್ಟಿಗಳಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಡಳಿತದಲ್ಲಿ ಎರಡೂ ಸಮುದಾಯದವರಿಗೆ ವಿದೇಶ ಪ್ರವಾಸಕ್ಕೆ ಅವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡಲು ವಿದ್ಯಾಸಿರಿ ವಿದ್ಯಾರ್ಥಿ ವಿದ್ಯಾರ್ಥಿವೇತನ ಯೋಜನೆಯನ್ನು ಪರಿಚಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಗ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಪಕ್ಷ ನೀಡಿರುವ ಸವಲತ್ತುಗಳ ಬಗ್ಗೆ ಜನರ ಮನೆ ಬಾಗಿಲಿಗೆ ತೆರಳಿ ತಿಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ಸಾಮಾನ್ಯರ ಬದುಕನ್ನು ಕಟ್ಟುವ ಭರವಸೆಯನ್ನು ಜನರಲ್ಲಿ ಮೂಡಿಸಬೇಕು ಎಂದೂ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.












Click it and Unblock the Notifications