Do or Die Congress: ಕಾಂಗ್ರೆಸ್ ಗೆ ಇದು ಮಾಡು ಇಲ್ಲವೇ ಮಡಿ ಚುನಾವಣೆ: ಬಸವರಾಜ ಬೊಮ್ಮಾಯಿ
ಹಾವೇರಿ, ಮೇ3: ಕಾಂಗ್ರೆಸ್ ಗೆ ಇದು ಕೊನೆ ಚುನಾವಣೆ. ಅವರು ಸೋತರೆ ಅವರು ಸೀದಾ ಮನೆಗೆ ಹೋಗಬೇಕು. ಅವರಿಗೆ ಇದು ಮಾಡು ಇಲ್ಲವೇ ಮಡಿ ಪರಿಸ್ಥಿತಿ. ಆದರೆ ಅವರಿಗೆ ಇದು ಮಡಿಯುವ ಚುನಾವಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.
ಮಂಗಳವಾರ ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ಈ ಬಾರಿ ಬಿಜೆಪಿ ಸುನಾಮಿ ಕರ್ನಾಟಕದಲ್ಲಿದೆ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಬಹಳ ದೊಡ್ಡ ಕೊಡುಗೆ ನೀಡಿದೆ. ನಾನು ಸಿಎಂ ಆಗಿ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದೇನೆ ಎಂದು ಹೇಳಿದರು.

ಹಾನಗಲ್ ತಾಲೂಕಿನಲ್ಲಿ 8 ಸಾವಿರ ರೈತರ ಮಕ್ಕಳಿಗೆ ವಿದ್ಯಾನಿಧಿ ಸಿಕ್ಕಿದೆ. ನಮ್ಮ ಪ್ರಧಾನ ಮಂತ್ರಿಗಳು ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 54 ಲಕ್ಷ ರೈತರಿಗೆ 16000 ಕೋಟಿ ರೂ. ನೇರ ಹಣ ವರ್ಗಾವಣೆ ಮಾಡಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೊಜನೆ ಅಡಿಯಲ್ಲಿ ಎಲ್ಲ ಬಡವರಿಗೂ ಸೂರು ಕಲ್ಪಿಸಲಾಗುತ್ತಿದೆ. ಅವರಿಗೆ ಬೆಳಕು ಯೋಜನೆ ಅಡಿಯಲ್ಲಿ ವಿದ್ಯುತ್ ನೀಡಲಾಗಿದೆ. ನಾನು ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದೇನೆ. ಇದರೊಂದಿಗೆ ಅನೇಕ ಇತರೆ ಯೋಜನೆಗಳನ್ನೂ ಜಾರಿಗೆ ತಂದಿದ್ದೀವಿ. ನಾವು ದುಡಿಮೆಗೆ ಬೆಲೆ ಕೊಡುವ ಕೆಲಸ ಮಾಡಿದ್ದೇವೆ. ರಾಜ್ಯದಲ್ಲಿ ಪ್ರತಿ ವರ್ಷ 13 ಲಕ್ಷ ಉದ್ಯೊಗ ಸೃಷ್ಟಿ ಆಗಿವೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕರು ಸಾಮಾಜಿಕ ನ್ಯಾಯ ಅಂತ ಹೇಳುತ್ತ ಜನರನ್ನು ಬಾವಿಯಲ್ಲಿ ಇಟ್ಟಿದ್ದಾರೆ. ಚುನಾವಣೆ ಬಂದಾಗಷ್ಟೇ ಅವರನ್ನು ಬಾವಿಯಿಂದ ಮೇಲೆತ್ತಿ ಮತ ಹಾಕಿಸಿಕೊಂಡು ಮತ್ತೆ ಬಾವಿಗೆ ಹಾಕುತ್ತಾರೆ. ನಿಮ್ಮ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಜೇನುಗೂಡಿಗೆ ಕೈ ಹಾಕಬೇಡಿ ಅಂತ ಹೇಳಿದ್ದರು. ನಾನು ಜೇನು ಗೂಡಿಗೆ ಕೈ ಹಾಕಿ ಅವರಿಗೆ ಜೇನು ತಿನ್ನಿಸಿದ್ದೇನೆ.
ಇನ್ನೂ ಕಾಂಗ್ರೆಸ್ ನವರು ಈಗ ಮೀಸಲಾತಿ ವಿಚಾರವನ್ನು ಪ್ರಣಾಳಿಕೆಯಲ್ಲಿ ಹಾಕಿದ್ದಾರೆ. ಮನೆಮನೆಗೂ ನೀರು ಕೊಡುತ್ತೇವೆ ಎಂದು ಈಗ ಹೇಳುತ್ತಿದ್ದಾರೆ. 3 ವರ್ಷದಲ್ಲಿ ಈಗಾಗಲೇ 40 ಲಕ್ಷ ಮನೆಗಳಿಗೆ ನಲ್ಲಿ ಮೂಲಕ ಕುಡಿಯುವ ನೀರಿನ ಸೌಲಭ್ಯ ನಾವು ಕೊಟ್ಟಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಭಾರತ ಈಗ ಸುರಕ್ಷಿತ ದೇಶ ಆಗಿದೆ. ಯುಪಿಎ ಅವಧಿಯಲ್ಲಿ ಪ್ರತಿ ದಿನ ಬಾಂಬ್ ದಾಳಿ ಆಗುತ್ತಿತ್ತು. ಸಿದ್ದರಾಮಯ್ಯ ಕಾಲದಲ್ಲಿ ಅತಿ ಹೆಚ್ಚು ಕೋಮುಗಲಭೆ, ರೈತರ ಆತ್ಮಹತ್ಯೆ, ರೇಪ್ ಕೇಸ್ ಗಳು ಹೆಚ್ಚಾಗಿದ್ದವು. ನಮ್ಮ ಪ್ರಧಾನಿ ದೇಶವನ್ನು ಸುರಕ್ಷಿತವಾಗಿ ಇಟ್ಟಿದ್ದಾರೆ. ಅಮೇರಿಕಾದಲ್ಲಿ ಈಗಲೂ ಕೊರೋನಾ ಭಯದಲ್ಲಿ ಮಾಸ್ಕ್ ಹಾಕುತ್ತಿದ್ದಾರೆ. ಆದರೆ, ನಮ್ಮ ಪ್ರಧಾನಿಗಳು ಸಂಪೂರ್ಣವಾಗಿ ಕೋವಿಡ್ ನಿಯಂತ್ರಿಸಿ ಎಲ್ಲರಿಗೂ ಲಸಿಕೆ ಹಾಕಿಸಿದ್ದಾರೆ. ಅವರ ಅವಧಿಯಲ್ಲಿ ಎಲ್ಲ ರಂಗದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ.
ಈಗ ಕಾಂಗ್ರೆಸ್ ನವರು ಗ್ಯಾರೆಂಟಿ ಕಾರ್ಡ್ ಕೊಡುತ್ತಿದ್ದಾರೆ. ಅವರ ಬಗ್ಗೆ ಜನರಿಗೆ ಗ್ಯಾರೆಂಟಿ ಇಲ್ಲದ ಕಾರಣ ಅವರು ಗ್ಯಾರೆಂಟಿ ಕಾರ್ಡ್ ಕೊಡುತ್ತಿದ್ದಾರೆ. ಮೇ 10ರ ವರೆಗೂ ಮಾತ್ರ ಗ್ಯಾರೆಂಟಿ ಆ ಮೇಲೆ ಗಳಗಂಟಿ. ನಾವು ಮಾಡಿರುವ ಡಬಲ್ ಎಂಜಿನ್ ಸರ್ಕಾರದ ಕೆಲಸಗಳನ್ನು ಜನರಿಗೆ ಮನವರಿಕೆ ಮಾಡಿ ಶಿವರಾಜ ಸಜ್ಜನರ ಅವರನ್ನು ಗೆಲ್ಲಿಸಿ, ಹೆಚ್ಚಿನ ಮತಗಳಿಂದ ಅರಿಸಿ ತನ್ನಿ ಎಂದು ಹೇಳಿದ ಸಿಎಂ ಬೊಮ್ಮಾಯಿ ಭಜರಂಗಿ ಭಜರಂಗಿ ಎಂದು ಘೋಷಣೆ ಕೂಗಿದರು.












Click it and Unblock the Notifications