ಬಿಜೆಪಿಯ ಕೆಟ್ಟ ವರ್ತನೆಯಿಂದಾಗಿ ಕಾಂಗ್ರೆಸ್ಗೆ ಸೇರ್ಪಡೆ: ರಾಹುಲ್ ಭೇಟಿ ಬಳಿಕ ಜಗದೀಶ್ ಶೆಟ್ಟರ್
ಹುಬ್ಬಳ್ಳಿ , ಏಪ್ರಿಲ್. 23: ಇತ್ತೀಚೆಗಷ್ಟೇ ಬಿಜೆಪಿಯಿಂದ ಟಿಕೆಟ್ ಸಿಗದ ಮಾಹಿತಿ ಹಿನ್ನೆಲೆ ಕಾಂಗ್ರೆಸ್ ಸೇರಿ ಅಭ್ಯರ್ಥಿಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಾವು ಬಿಜೆಪಿ ಏಕೆ ತೊರೆದೆ ಎಂಬ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿಯ "ಕೆಟ್ಟ ವರ್ತನೆ" ಯಿಂದ ನಾನು ದೇಶದ ಹಳೆಯ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷದ ಮಾಜಿ ನಾಯಕ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರಿದ ನಂತರ ಮೊದಲ ಬಾರಿಗೆ ಭಾನುವಾರ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶೆಟ್ಟರ್, ರಾಹುಲ್ ಗಾಂಧಿ ಅವರನ್ನು ಮೊದಲ ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದಿದ್ದಾರೆ.

"ಬಿಜೆಪಿಯಿಂದ ನಡೆಯುತ್ತಿರುವ ದೌರ್ಜನ್ಯ ಎಲ್ಲರಿಗೂ ಗೊತ್ತಿರುವ ಕಾರಣ ನಾನು ಕಾಂಗ್ರೆಸ್ ಸೇರುವ ನಿರ್ಧಾರ ತೆಗೆದುಕೊಂಡೆ. ಹಾಗಾಗಿ ರಾಹುಲ್ ಗಾಂಧಿ ಆ ಪಕ್ಷದ ನಾಯಕ. ಹಾಗಾಗಿ ನಾನು ಅವರ ಜೊತೆಗೆ ಹಲವು ವಿಷಯಗಳನ್ನು ಚರ್ಚಿಸಿದ್ದೇನೆ" ಎಂದು ಜಗದೀಶ್ ಶೆಟ್ಟರ್ ಎಎನ್ಐಗೆ ತಿಳಿಸಿದ್ದಾರೆ.
'ಕೆಲವರು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವನ್ನು ನಿಯಂತ್ರಿಸುತ್ತಿದ್ದಾರೆ' ಎಂದು ಜಗದೀಶ್ ಶೆಟ್ಟರ್ ಗುರುವಾರ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ 5 ವರ್ಷ ಪೂರೈಸಿದೆ. ಆದರೆ, ಅವರ ಅವ್ಯವಹಾರ, ಆಕ್ರಮಗಳ ಬಗ್ಗೆ ಜನರು ಮಾತನಾಡುತ್ತಿದ್ದಾರೆಯೇ ಹೊರತು ಅಭಿವೃದ್ಧಿಯಂತಹ ವಿಚಾರಗಳ ಬಗ್ಗೆ ಅಲ್ಲ ಎಂದು ಕಿಡಿಕಾರಿದ್ದಾರೆ.

ಇಷ್ಟು ದಿನ ರಾಜ್ಯದಲ್ಲಿ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲಾಗಿದೆಯೇ..?ಇಲ್ಲ. ಆದರೆ ಇದೀಗ ವರಿಷ್ಠರ (ಬಿಜೆಪಿ) ನಿರ್ಲಕ್ಷ್ಯದಿಂದ ಮತ್ತೆ ಚರ್ಚೆ ಶುರುವಾಗಿದೆ. ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಕೆಲವರು ಕರ್ನಾಟಕ ಮತ್ತು ಸರ್ಕಾರದಲ್ಲಿ ಸಂಪೂರ್ಣ ಬಿಜೆಪಿಯನ್ನು ನಿಯಂತ್ರಿಸುತ್ತಿದ್ದಾರೆ" ಎಂದು ಹೆಸರು ಹೇಳದೆ ಬಿ.ಎಲ್ ಸಂತೋಷ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ-ಧಾರವಾಡ-ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಜಗದೀಶ್ ಶೆಟ್ಟರ್ ಅವರು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರನ್ನು ಎದುರಿಸಲಿದ್ದಾರೆ.
ಜಗದೀಶ್ ಶೆಟ್ಟರ್ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಒಂದು ವಾರದೊಳಗೆ ಕಾಂಗ್ರೆಸ್ ಸೇರಿದ ಲಿಂಗಾಯತ ಸಮುದಾಯದ ಎರಡನೇ ಪ್ರಮುಖ ನಾಯಕ. ಈ ಹಿಂದೆ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರಿದ್ದರು.
ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ತೊರೆದ ಒಂದು ದಿನದ ನಂತರ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೈಪಡೆ ಸೇರಿದ್ದಾರೆ. ಶೆಟ್ಟರ್ ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕ ಅಮರ್ ಸಿಂಗ್ ಪಾಟೀಲ್ ಕೂಡ ಕಾಂಗ್ರೆಸ್ ಸೇರಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications