ಪಂಚರತ್ನ ಯೋಜನೆಗಳ ಜೊತೆಗೆ ಹಲವು ಅಂಶಗಳ ಜೆಡಿಎಸ್ ಜನತಾ ಪ್ರಣಾಳಿಕೆ ಶೀಘ್ರವೇ ಬಿಡುಗಡೆ
ಬೆಂಗಳೂರು, ಏಪ್ರಿಲ್. 10: ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿದ್ದು, ಅಭ್ಯರ್ಥಿಗಳ ಪಟ್ಟಿ, ಪ್ರಣಾಳಿಕೆ ಬಿಡುಗಡೆ ಕಾರ್ಯಗಳಲ್ಲಿ ತೊಡಗಿಕೊಂಡಿವೆ. ಜಾತ್ಯಾತೀತ ಜನತಾದಳ ಪಕ್ಷವು ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಬಿಡುಗಡೆ ತಯಾರಿಯಲ್ಲಿದೆ. ಇದೇ ವೇಳೆ ಪ್ರಣಾಳಿಕೆ ಬಿಡುಗಡೆಗೂ ತಯಾರಿ ನಡೆಸಿದೆ.
ಪ್ರಸಕ್ತ ಚುನಾವಣೆಗೆ ಜಾತ್ಯತೀತ ಜನತಾದಳದ ಪ್ರಣಾಳಿಕೆ ಸಿದ್ಧವಾಗಿದ್ದು, ಪ್ರಣಾಳಿಕಾ ರಚನಾ ಸಮಿತಿಯ ಸೋಮವಾರ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದೆ. ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅಧ್ಯಕ್ಷತೆಯ ಸಮಿತಿಯು, ಪ್ರಣಾಳಿಕೆಯ ಕರುಡು ಪ್ರತಿಯನ್ನು ಪರಾಮರ್ಶೆ ನಡೆಸಿತು. ಅಲ್ಲದೆ, ಪಕ್ಷದ ವತಿಯಿಂದ ಜನತೆಗೆ ನೀಡಲು ಉದ್ದೇಶಿಸಿರುವ ಜೆಡಿಎಸ್ ಪರಿಹಾರ ಪತ್ರದ ಬಗ್ಗೆಯೂ ಚರ್ಚೆ ನಡೆಸಲಾಯಿತು.

ಸಮಿತಿಯ ಸದಸ್ಯರಾದ ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ಮಾಜಿ ಸಂಸದರಾದ ಕುಪೆಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ ಅವರು ಸಭೆಯಲ್ಲಿ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಗಳು ಹಾಗೂ ಅವರು ಪಂಚರತ್ನ ರಥಯಾತ್ರೆ ವೇಳೆ ಘೋಷಣೆ ಮಾಡಿರುವ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಅಡಕಗೊಳಿಸಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಅವರ ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಗಳು ಮತ್ತು ಅವರು ಘೋಷಣೆ ಮಾಡಿರುವ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಅಡಕಗೊಳಿಸಲಾಗಿದ್ದು, ಈ ಕಾರ್ಯಕ್ರಮಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಲು ಪ್ರಣಾಳಿಕಾ ರಚನಾ ಸಮಿತಿ ಸಭೆಯಲ್ಲಿ ಇಂದು ನಿರ್ಣಯಿಸಲಾಗಿದೆ.
ಪಂಚರತ್ನ ಯೋಜನೆಗಳಾದ ಆರೋಗ್ಯ, ಶಿಕ್ಷಣ, ಕೃಷಿ, ನೀರಾವರಿ, ವಸತಿ, ಉದ್ಯೋಗ ಕಾರ್ಯಕ್ರಮಗಳ ಬಗ್ಗೆ ಹಾಗೂ ಅವುಗಳನ್ನು ಜಾರಿ ಮಾಡಲು ಅಗತ್ಯವಾದ ಆರ್ಥಿಕ ಸಂಪನ್ಮೂಲಗಳ ಬಗ್ಗೆಯೂ ಸಮಿತಿ ಅವಲೋಕನ ನಡೆಸಿದೆ. ಪಂಚರತ್ನ ತೃ ಯಾತ್ರೆಯ ವೇಳೆ ರಾಜ್ಯದ ಹಲವು ಭಾಗಗಳಲ್ಲಿ ಎಚ್ ಡಿ ಕುಮಾರ್ಸವಾಮಿ ರೈತರಿಗೆ , ಮಹಿಳೆಯರಿಗೆ ಮತ್ತು ಯುವಕರಿಗೆ ಹಲವು ಭರವಸೆಗಳನ್ನು ನೀಡಿದ್ದಾರೆ.

ಇನ್ನು, ಈ ಚುನಾವಣಾ ಪ್ರಣಾಳಿಕೆಗೆ ಶೀಘ್ರವೇ ಅಂತಿಮ ಸ್ಪರ್ಶ ನೀಡಲಾಗುವುದು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಜತೆ ಚರ್ಚೆ ನಡೆಸಿದ ನಂತರ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮಾಹಿತಿ ನೀಡಿದ್ದಾರೆ.
65 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಮಾಸಿಕ 5,000 ರೂ. ಮಾಶಾಸನ, ವಿಕಲಚೇತನರು ಹಾಗೂ ವಿಧವೆಯರಿಗೆ ಮಾಸಿಕ 2,500 ರೂ. ಮಾಶಾಸನ, ಉನ್ನತ ಶಿಕ್ಷಣ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಅಡುಗೆ ಅನಿಲ ಸಿಲಿಂಡರ್ ಗೆ ಶೇ.50% ಸಬ್ಸಿಡಿ, ಆಟೋ ಚಾಲಕರಿಗೆ ಮಾಸಿಕ 2,000 ರೂ. ಗೌರವ ಧನ, ವಿರಳ ಕಾಯಿಲೆಯಿಂದ ಬಳಲುತ್ತಿರುವವರಿಗೆ 25 ಲಕ್ಷ ರೂ.ವರೆಗೆ ಪರಿಹಾರ ಸೇರಿದಂತೆ ಅನೇಕ ಅಂಶಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಬಿ.ಎಂ.ಫಾರೂಕ್ ಮಾಹಿತಿ ನೀಡಿದ್ದಾರೆ.
ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ, 'ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೋಮವಾರದ ನಂತರ ಬಿಡುಗಡೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಈಗ ಸಾಕಷ್ಟು ಒತ್ತಡಗಳು ಇದೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಮತ್ತೆ ಬದಲಾವಣೆ ಆಗಬೇಕಿದೆ. ಹಾಗಾಗಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಲ್ಲಿ ಸ್ವಲ್ಪ ವಿಳಂಬವಾಗಿದೆ . ಇನ್ನು ಕಾಂಗ್ರೆಸ್ ಪಕ್ಷದಿಂದ ಸುಮಾರು 15ಕ್ಕೂ ಹೆಚ್ಚು ಸಮರ್ಥ ಅಭ್ಯರ್ಥಿಗಳು ಸದ್ಯದಲ್ಲೇ ಜೆಡಿಎಸ್ ಪಕ್ಷ ಸೇರ್ಪಡೆ ಆಗಲಿದ್ದಾರೆ" ಎಂದು ಹೇಳಿದ್ದಾರೆ.












Click it and Unblock the Notifications