ಚುನಾವಣಾ ಆಯೋಗದಿಂದ ಚಿಹ್ನೆ ಪಡೆದ ಜನಾರ್ದನ ರೆಡ್ಡಿ
ಬೆಂಗಳೂರು, ಮಾರ್ಚ್ 27; ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಚುನಾವಣಾ ಆಯೋಗದಿಂದ ಚಿಹ್ನೆ ಪಡೆದಿದ್ದಾರೆ. ಡಿಸೆಂಬರ್ 25, 2022ರಲ್ಲಿ ಹೊಸ ಪಕ್ಷ ಘೋಷಣೆ ಮಾಡಿರುವ ಅವರು, ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಕಣಕ್ಕಿಳಿಯಲಿದ್ದಾರೆ. ಹಲವು ಕ್ಷೇತ್ರಗಳಿಗೆ ಸಹ ಅವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ.

ಜನಾರ್ದನ ರೆಡ್ಡಿ ಸ್ಥಾಪನೆ ಮಾಡಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳು ಫುಟ್ಬಾಲ್ ಚಿಹ್ನೆಯಡಿ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಚುನಾವಣಾ ಆಯೋಗವು ಪಕ್ಷಕ್ಕೆ ಚಿಹ್ನೆಯನ್ನು ಸೋಮವಾರ ಹಂಚಿಕೆ ಮಾಡಿದೆ. ಜನಾರ್ದನ ರೆಡ್ಡಿ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡುವ ಜೊತೆಗೆ ಪ್ರಣಾಳಿಕೆಯನ್ನು ಸಹ ಬಿಡುಗಡೆ ಮಾಡಿದ್ದಾರೆ.
ಬಿಜೆಪಿಯಲ್ಲಿ ಸೂಕ್ತವಾದ ಸ್ಥಾನಮಾನ ಸಿಗದ ಹಿನ್ನಲೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿದ್ದಾರೆ. ಈಗಾಗಲೇ ಚುನಾವಣಾ ಪ್ರಚಾರವನ್ನು ಅವರು ಆರಂಭಿಸಿದ್ದಾರೆ. ಪಕ್ಷದ ಅಭ್ಯರ್ಥಿಯಾಗಿ ಯಾವ ಚಿಹ್ನೆಯನ್ನು ಚುನಾವಣಾ ಆಯೋಗ ನೀಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಸೋಮವಾರ ಪಕ್ಷಕ್ಕೆ ಚಿಹ್ನೆ ಹಂಚಿಕೆಯಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳು ಫುಟ್ಬಾಲ್ ಚಿಹ್ನೆಯಡಿ ಈ ಬಾರಿಯ ಚುನಾವಣೆಯನ್ನು ಎದುರಿಸಲಿದ್ದಾರೆ.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿರುವ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಕಣಕ್ಕಿಳಿಯಲಿದ್ದಾರೆ. ಅವರ ಪತ್ನಿ ಲಕ್ಷ್ಮೀ ಅರುಣಾ ಸಹ ಚುನಾವಣಾ ಕಣಕ್ಕಿಳಿಯಲಿದ್ದು, ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈಗಾಗಲೇ ಜನಾರ್ದನ ರೆಡ್ಡಿ ಬಿರುಸಿನಿಂದ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಸುಮಾರು 30 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಅವರು ಕಣಕ್ಕಿಳಿಸಲಿದ್ದಾರೆ.
ಪಕ್ಷದ ಅಭ್ಯರ್ಥಿಗಳು; ಕಲ್ಯಾಣ ರಾಜ್ಯದ ಪ್ರಗತಿ ಪಕ್ಷದ ಅಭ್ಯರ್ಥಿಗಳು ಸುಮಾರು 30 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಜನಾರ್ದನ ರೆಡ್ಡಿ ಪ್ರಮುಖ ಕ್ಷೇತ್ರಗಳನ್ನು ಗುರುತಿಸಿ ಅಲ್ಲಿ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಸಿರಗುಪ್ಪ ಕ್ಷೇತ್ರಕ್ಕೆ ಧರೆಪ್ಪ ನಾಯಕ, ಕನಕಗಿರಿಗೆ ಡಾ. ಚಾರುಲ್ ದಾಸರಿ, ನಾಗಠಾಣಾಕ್ಕೆ ಶ್ರೀಕಾಂತ್, ಸಿಂಧನೂರು ಕ್ಷೇತ್ರಕ್ಕೆ ನೆಕ್ಕಂಟಿ ಮಲ್ಲಿಕಾರ್ಜುನ, ಚಿತ್ರದುರ್ಗದ ಹಿರಿಯೂರು ಕ್ಷೇತ್ರಕ್ಕೆ ಮಹೇಶ್ ಮತ್ತು ಇಂಡಿ ವಿಧಾನಸಭಾ ಕ್ಷೇತ್ರಕ್ಕೆ ಮೆಹಬೂಬ ಅ ಅರಬ್ ಅಭ್ಯರ್ಥಿಗಳು ಎಂದು ಘೋಷಣೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ.
ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡಿರುವುದು ಬಿಜೆಪಿಗೆ ಹಿನ್ನಡೆ ಉಂಟು ಮಾಡಲಿದೆಯೇ? ಎಂಬ ಚರ್ಚೆ ನಡೆಯುತ್ತಿದೆ. ಬಳ್ಳಾರಿ ನಗರ ಕ್ಷೇತ್ರದಲ್ಲಿ ಸಹೋದರ, ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧವೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಅಲ್ಲದೇ ಗಂಗಾವತಿಯಲ್ಲಿ ಸಹ ಹಾಲಿ ಬಿಜೆಪಿ ಶಾಸಕರು ಇರುವಲ್ಲಿಯೇ ಜನಾರ್ದನ ರೆಡ್ಡಿ ಅಭ್ಯರ್ಥಿ ಕಣಕ್ಕಿಳಿಸಿದ್ದಾರೆ.
ಹೊಸ ಪಕ್ಷ ಸ್ಥಾಪನೆ ಮಾಡಿದ್ದ ಜನಾರ್ದನ ರೆಡ್ಡಿ ಫೆಬ್ರವರಿಯಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದರು. ರೈತರಿಗೆ, ಕೃಷಿ ಕ್ಷೇತ್ರಕ್ಕೆ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗಿತ್ತು. ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಖಾತೆಗೆ ಪ್ರತಿ ವರ್ಷ 15 ಸಾವಿರ ರೂ. ಜಮೆ ಮಾಡುವ ಭರವಸೆ ನೀಡಲಾಗಿದೆ. ನೀರಾವರಿ ಯೋಜನೆಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲಾಗುತ್ತದೆ ಎಂದು ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.
ಬಿಜೆಪಿ ಟಿಕೆಟ್ ಮೇಲೆ ಕಣ್ಣು; ಹಲವು ಬಿಜೆಪಿ ನಾಯಕರು ಮಾಜಿ ಸಚಿವ ಜನಾರ್ದನ ರೆಡ್ಡಿ ಜೊತೆಗಿದ್ದಾರೆ. ಒಂದು ವೇಳೆ ಬಿಜೆಪಿ ಪಟ್ಟಿ ಘೋಷಣೆಯಾದ ಬಳಿಕ ಟಿಕೆಟ್ ಸಿಗದಿದ್ದರೆ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಬಹುದು ಎಂಬುದು ಲೆಕ್ಕಾಚಾರವಾಗಿದೆ. ಈ ಬಾರಿಯ ಚುನಾವಣೆಗೆ ಜೆಡಿಎಸ್ 93 ಅಭ್ಯರ್ಥಿಗಳ ಮೊದಲ ಪಟ್ಟಿ, ಕಾಂಗ್ರೆಸ್ 124 ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಪಟ್ಟಿ ಬಿಡುಗಡೆಯಾಗಿಲ್ಲ.












Click it and Unblock the Notifications