Rahul Gandhi in Karnataka: ರಾಜ್ಯ ಚುನಾವಣಾ ಪ್ರಚಾರಕ್ಕೆ ಇಳಿದ ರಾಹುಲ್ ಗಾಂಧಿ: ಬೆಳಗಾವಿಯಲ್ಲಿ ಬೃಹತ್ ಸಮಾವೇಶ
ರಾಹುಲ್ ಗಾಂಧಿಯವರ ಮೂಲಕ ಸೋಮವಾರ ಯುವಕರಿಗೆ ಉದ್ಯೋಗ ಭರವಸೆ ಅಥವಾ ನಿರುದ್ಯೋಗಿಗಳಿಗೆ ಭತ್ಯೆಯಂತಹ ನಾಲ್ಕನೇ ಗ್ಯಾರಂಟಿ ಘೋಷಿಸುವ ಸಾಧ್ಯತೆ ಇದೆ.
ಬೆಂಗಳೂರು, ಮಾರ್ಚ್ 19: ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ರಾಷ್ಟ್ರೀಯ ನಾಯಕರನ್ನು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಇದರ ಬೆನ್ನಲ್ಲೇ ನಾವೇನೂ ಕಡಿಮೆಯಿಲ್ಲ ಎನ್ನುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಸೋಮವಾರದಿಂದ ಪ್ರಾರಂಭವಾಗುವ ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಯುವಜನತೆಯನ್ನು ಉದ್ದೇಶಿಸಿ ಬೃಹತ್ ಸಮಾವೇಶಗಳಲ್ಲಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಹೀಗಾಗಿ ಮೂರು ದಿನಗಳ ಕರ್ನಾಟಕ ಪ್ರವಾಸವನ್ನು ಕೈಗೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.

ರಾಜ್ಯದಲ್ಲಿ ಮೇ ವೇಳೆಗೆ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಉತ್ತರ ಕರ್ನಾಟಕದ ಬೆಳಗಾವಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಎರಡು ಬೃಹತ್ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಈ ಸಮಾವೇಶಗಳಲ್ಲಿ ಭಾಗವಹಿಸುವ ಮೂಲಕ ರಾಹುಲ್ ಗಾಂಧಿ ರಾಜ್ಯದಲ್ಲಿ ರಾಷ್ಟ್ರೀಯ ನಾಯಕರ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ರಾಹುಲ್ ಗಾಂಧಿ ಅವರ ಪ್ರಯಾಣದ ವಿವರಗಳ ಪ್ರಕಾರ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆ ಮಾರ್ಗವಾಗಿ ವಾಣಿಜ್ಯನಗರಿ ಬೆಳಗಾವಿಗೆ ತೆರಳಲಿದ್ದಾರೆ. ಸೋಮವಾರ ಮಧ್ಯಾಹ್ನ ಬೆಳಗಾವಿಯಲ್ಲಿ ನಡೆಯಲಿರುವ 'ಯುವಕ್ರಾಂತಿ ಸಮಾವೇಶ'ದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಸಮಾವೇಶದಲ್ಲಿ 2 ಲಕ್ಷ ಕುರ್ಚಿಗಳನ್ನು ಹಾಕಲಾಗಿದ್ದು, ರಾಜ್ಯದ ಎಲ್ಲಾ ಭಾಗಗಳಿಂದ ಅಪಾರ ಸಂಖ್ಯೆಯ ಯುವಜನರು ಬರುವ ನಿರೀಕ್ಷೆಯಲ್ಲಿದೆ ಕಾಂಗ್ರೆಸ್.

ನಾಳೆ ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶದ ಸ್ಥಳ ನಗರದ ಸಿಪಿಎಡ್ ಮೈದಾನಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ 3.30ರ ವರೆಗೆ ನಡೆಯಲಿರುವ 'ಯುವಕ್ರಾಂತಿ' ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶಕ್ಕೆ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ.
ನಾಳಿನ ಸಮಾವೇಶದ ಸಿದ್ಧತೆಗಳನ್ನು ಈಗಾಗಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪರಿಶೀಲನೆ ನಡೆಸಿದ್ದಾರೆ. ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ 200 ಯುನಿಟ್ ವರೆಗೆ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಹಾಗೂ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿಯ ಗ್ಯಾರಂಟಿ ಸೇರಿದಂತೆ ಮೂರು ಗ್ಯಾರಂಟಿಗಳನ್ನು ಘೋಷಿಸಿದೆ. ರಾಹುಲ್ ಗಾಂಧಿಯವರ ಮೂಲಕ ಸೋಮವಾರ ಯುವಕರಿಗೆ ಉದ್ಯೋಗ ಭರವಸೆ ಅಥವಾ ನಿರುದ್ಯೋಗಿಗಳಿಗೆ ಭತ್ಯೆಯಂತಹ ನಾಲ್ಕನೇ ಗ್ಯಾರಂಟಿ ಘೋಷಿಸುವ ಸಾಧ್ಯತೆ ಇದೆ.
ಇನ್ನು, ಕಾಂಗ್ರೆಸ್ನಿಂದ ಈಗಾಗಲೇ ರೈತ ಸಮಾವೇಶ ಹಾಗೂ ಮಹಿಳಾ ಸಮಾವೇಶ ನಡೆಸಲಾಗಿದೆ. ಈಗ ಯುವಜನರ ಸಮಾವೇಶದಲ್ಲಿ ನಾಯಕ ರಾಹುಲ್ ಗಾಂಧಿ ರಾಜ್ಯದ ಯುವಜನತೆಗೆ ಚುನಾವಣಾ ಸಂದೇಶ ನೀಡಲಿದ್ದಾರೆ. ಸಮಾವೇಶದಲ್ಲಿ 2 ಲಕ್ಷ ಕುರ್ಚಿಗಳನ್ನು ಹಾಕಿದ್ದೇವೆ. ರಾಜ್ಯದ ಮೂಲೆಮೂಲೆಯಿಂದ ಅಪಾರ ಸಂಖ್ಯೆಯ ಯುವಜನರು ಬರಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರದ ಕಾರ್ಯಕ್ರಮದ ನಂತರ ಅದೇ ದಿನ ಸಂಜೆ ಬೆಂಗಳೂರಿಗೆ ವಾಪಸ್ ಬರಲಿದ್ದು, ರಾತ್ರಿ ಇಲ್ಲಿಯೇ ತಂಗಲಿದ್ದಾರೆ. ಮಂಗಳವಾರ ತುಮಕೂರು ಜಿಲ್ಲೆಯ ಕುಣಿಗಲ್ಗೆ ತೆರಳಲಿರುವ ರಾಹುಲ್ ಗಾಂಧಿ ಅಲ್ಲಿ 'ಪ್ರಜಾಧ್ವನಿ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 140 ರಿಂದ 150 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿಯೂ 10ರಿಂದ 12 ಅಭ್ಯರ್ಥಿಗಳನ್ನು ಗೆಲ್ಲಿಸಲಾಗುವುದು ಎಂದು ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications