ಕರ್ನಾಟಕ ಚುನಾವಣೆ: 3 ದಿನಗಳ ಸಭೆಗಳ ನಂತರವೂ ಅಂತಿಮವಾಗದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು ಏಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಪಕ್ಷ ಎಲ್ಲವೂ ಕನಿಷ್ಟ ಮೊದಲ ಪಟ್ಟಿಯನ್ನಾದರೂ ಬಿಡುಗಡೆ ಮಾಡಿವೆ. ಆದರೆ ಬಿಜೆಪಿ ಪಕ್ಷ ಮಾತ್ರ ತನ್ನ ಮೊದಲ ಪಟ್ಟಿಯನ್ನೂ ಬಿಡುಗಡೆ ಮಾಡಿಲ್ಲ. ಇಂದು ನಾಳೆ, ನಾಡಿದ್ದು ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ ಎನ್ನುವ ನಿರೀಕ್ಷೆಯಲ್ಲಿ ಜನ ಕಾಯುತ್ತಿದ್ದಾರೆ.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿಗಾಗಿ ಕಾಯುವಿಕೆ ದೀರ್ಘವಾಗಿದೆ. ಸತತ ಮೂರು ದಿನಗಳ ಸರಣಿ ಸಭೆಗಳ ಹೊರತಾಗಿಯೂ ಸೋಮವಾರವೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷವು ಸಾಧ್ಯವಾಗಲಿಲ್ಲ. ಗುರುವಾರ (ಏಪ್ರಿಲ್ 13) ಆರಂಭವಾಗುವ ನಾಮಪತ್ರ ಸಲ್ಲಿಕೆಯೊಂದಿಗೆ ಮಂಗಳವಾರ ಅಥವಾ ಬುಧವಾರದಂದು ಪಟ್ಟಿಯನ್ನು ನಿರೀಕ್ಷಿಸಲಾಗಿದೆ.

ಸೋಮವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಬಿಜೆಪಿ ಮುಖ್ಯಸ್ಥ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಇತರರೊಂದಿಗೆ ಎರಡು ಸುತ್ತಿನ ಸಭೆ ನಡೆಸಿದರು. ನಡ್ಡಾ ಅವರನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾದರು. ಆದರೆ ಇವು ಯಾವುದೂ ಪ್ರಯೋಜನವಾಗಲೇ ಇಲ್ಲ. ನಿರೀಕ್ಷೆಯಂತೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಆಗಲೇ ಇಲ್ಲ.
ಸೋಮವಾರ 40 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ, ಮಂಗಳವಾರ ಮೊದಲ ಪಟ್ಟಿಯಲ್ಲಿ ಕನಿಷ್ಠ 170-180 ಅಭ್ಯರ್ಥಿಗಳು ಇರುತ್ತಾರೆ ಎಂದು ಮೂಲಗಳು ತಿಳಿಸಿದ್ದವು. ಭಾನುವಾರ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎಲ್ಲಾ ಸ್ಥಾನಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ನಾಳೆಯೊಳಗೆ ಮೊದಲ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ ಎಂದು ಸಭೆಯ ನಂತರ ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದರು.

ಆದರೆ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೊದಲ ಪಟ್ಟಿಯ ಘೋಷಣೆಯನ್ನು ಬುಧವಾರದವರೆಗೆ ಎಳೆಯಬಹುದು ಎಂದು ಹೇಳಿದರು. "ಸೋಮವಾರ ಸಂಜೆಯೊಳಗೆ ಮೊದಲ ಪಟ್ಟಿಯನ್ನು ಪ್ರಕಟಿಸಬೇಕಿತ್ತು. ಆದರೆ ಹೆಚ್ಚಿನ ಗ್ರೌಂಡ್ ರಿಪೋರ್ಟ್ಗಳನ್ನು ಸಂಗ್ರಹಿಸಲು, ವಿಶೇಷವಾಗಿ ಹೊಸ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಮಯ ತೆಗೆದುಕೊಳ್ಳುತ್ತಿದೆ" ಎಂದು ಬೊಮ್ಮಾಯಿ ಹೇಳಿದರು, ಜೊತೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲದ ವರದಿಗಳನ್ನು ತಿರಸ್ಕರಿಸಿದರು.
ಈ ನಡುವೆ ಡೆಡ್ಲೈನ್ನಲ್ಲಿ ಭಿನ್ನಾಭಿಪ್ರಾಯ ಹೊಂದಿರುವ ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. "ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಹೆಣಗಾಡುತ್ತಿರುವ ಪಕ್ಷವು ಚುನಾವಣೆಯನ್ನು ಹೇಗೆ ಎದುರಿಸುತ್ತದೆ?" ಪಕ್ಷ ಟ್ವೀಟ್ ಮಾಡಿದೆ.
ಬಿಜೆಪಿ ರಾಷ್ಟ್ರೀಯ ನಾಯಕತ್ವ ಹಿಂದಿನ ಸಮೀಕ್ಷೆಗಳಲ್ಲಿ ವಿಭಿನ್ನ ಫಲಿತಾಂಶಗಳಿಂದಾಗಿ 15-20 ಸ್ಥಾನಗಳಲ್ಲಿ ಹೊಸ ಸಮೀಕ್ಷೆಗೆ ಆದೇಶಿಸಿದೆ ಎಂದು ಹೇಳಲಾಗಿದೆ. ಕೆಲವು ಹಾಲಿ ಶಾಸಕರಿಗೆ, ಅದರಲ್ಲೂ ವಿಶೇಷವಾಗಿ 75 ವರ್ಷ ಮೇಲ್ಪಟ್ಟವರಿಗೆ ಮತ್ತು ಪ್ರಬಲ ಆಡಳಿತ ವಿರೋಧಿ ಎದುರಿಸುತ್ತಿರುವವರಿಗೆ ಟಿಕೆಟ್ ನಿರಾಕರಿಸುವ ಕುರಿತು ಪಕ್ಷವು ಚರ್ಚೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಬಿಜೆಪಿ ಮೊದಲ ಪಟ್ಟಿ ಘೋಷಣೆ ಮಾಡಲು ಸಮಯ ತೆಗೆದುಕೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ.

ರಾಜ್ಯ ಚುನಾವಣೆ ದಿನಾಂಕ
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದರು.












Click it and Unblock the Notifications