ಶಾಂಗ್ರಿಲಾ ಹೋಟೆಲ್ನತ್ತ ಕಾಂಗ್ರೆಸ್ ನಾಯಕರು!
ಬೆಂಗಳೂರು, ಮೇ 13; ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. ಚುನಾವಣೆ ಗೆಲುವಿನ ಬಳಿಕ ಪಕ್ಷದ ನಾಯಕರು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮೊದಲ ಸಭೆ ನಡೆಸಲಿದ್ದಾರೆ.
ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. 10.37ರ ಮಾಹಿತಿ ಪ್ರಕಾರ ಕಾಂಗ್ರೆಸ್ 115, ಬಿಜೆಪಿ 75, ಜೆಡಿಎಸ್ 28 ಮತ್ತು ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯುವತ್ತ ಸಾಗಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಖಭಂಗವಾಗಿದೆ.

ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನತ್ತ ಕಾಂಗ್ರೆಸ್ ನಾಯಕರು ಆಗಮಿಲಿಸಲಿದ್ದು, ಮೊದಲ ಸಭೆ ನಡೆಸಲಿದ್ದಾರೆ. ಮೈಸೂರಿನಲ್ಲಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿಗೆ ಬರುವುದನ್ನು ಕಾಯಲಾಗುತ್ತಿದೆ.
ಕ್ಷೇತ್ರಗಳಲ್ಲಿರುವ ಪಕ್ಷದ ಅಭ್ಯರ್ಥಿಗಳನ್ನು ಇಂದು ರಾತ್ರಿಯೇ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಕೆಪಿಸಿಸಿ ಪದಾಧಿಕಾರಿಗಳಿಗೆ ಅವರನನ್ನು ಕರೆತರುವ ಜವಾಬ್ದಾರಿ ನೀಡಲಾಗಿದೆ. ಬೆಂಗಳೂರಿನಲ್ಲಿ ರಾತ್ರಿ 8 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಸಭೆ ನಡೆಸಿದ ಬಳಿಕ ಕಾಂಗ್ರೆಸ್ ನಾಯಕರು ಶಾಸಕರನ್ನು ಹೈದರಾಬಾದ್ ಅಥವ ರಾಜಸ್ಥಾನಕ್ಕೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಭೆ ನಡೆಸಿದ ಬಳಿಕ ನಾಯಕರು ಮುಂದಿನ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ.
ಮೈಸೂರಿನಲ್ಲಿರುವ ಸಿದ್ದರಾಮಯ್ಯ ತಮ್ಮ ನಿವಾಸದಿಂದ ಹೊರಬಂದು ಮಾಧ್ಯಮಗಳಿಗೆ ವಿಕ್ಟರಿ ಸಿಂಬಲ್ ತೋರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಇನ್ನೂ ಮಾಧ್ಯಮಗಳ ಜೊತೆ ಮಾತನಾಡಿಲ್ಲ.












Click it and Unblock the Notifications