ರಾಜ್ಯದ ಉಗ್ರಾಣಗಳಲ್ಲೇ ಔಷಧಿ ಅಲಭ್ಯ: ಕಾಂಗ್ರೆಸ್ ಸರ್ಕಾರ ವಿರುದ್ಧ ವಿಜಯೇಂದ್ರ ಕಿಡಿ
ಬೆಂಗಳೂರು, ಜನವರಿ 30: ರಾಜ್ಯದ ಉಗ್ರಾಣದಲ್ಲಿ ಔಷಧಗಳ ಕೊರತೆ ಉಂಟಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಅಗತ್ಯವಾದ ಔಷಧಿಗಳು ಸಿಗದೇ, ಹೊರಗಡೆಯಿಂದ ಔಷಧಿಗಳನ್ನು ಖರೀದಿಸುವಂತೆ ಸರ್ಕಾರಿ ವೈದ್ಯರು ಚೀಟಿ ಬರೆದು ಕೊಡುತ್ತಿರುವ ಘಟನೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ನಿರ್ಲಕ್ಷ ವಿರುದ್ಧ ಕಿಡಿಕಾರಿದ್ದಾರೆ.
ಸರ್ಕಾರಗಳೆಂದರೆ ಜನರ ಕಷ್ಟಗಳಿಗೆ ಸ್ಪಂದಿಸುವ, ಜನಪರ ಯೋಜನೆ ರೂಪಿಸಿ ಜನರ ಆರೋಗ್ಯ ರಕ್ಷಣೆಗೆ ಕಾಳಜಿಯ ಜವಾಬ್ದಾರಿ ಹೊತ್ತು ಶ್ರಮಿಸಬೇಕು. ಆದರೆ ಕರ್ನಾಟಕದಲ್ಲಿ ಆಮಿಷಗಳನ್ನೊಡ್ಡಿ ಅಧಿಕಾರಕ್ಕೆ ಬಂದು ತನ್ನ ಜವಾಬ್ದಾರಿ ಮರೆತಿರುವ ಈ ಸರ್ಕಾರದ ದುರಾಡಳಿತದಲ್ಲಿ ಸರಣಿ ರೂಪದ ಬಾಣಂತಿಯರ ಸಾವುಗಳ ಮೂಲಕ ಆರೋಗ್ಯ ಇಲಾಖೆ ಸಂಪೂರ್ಣ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಗುಡುಗಿದರು.

ಇದೀಗ ರಾಜ್ಯದ ಉಗ್ರಾಣದಲ್ಲಿ ಔಷಧಿಗಳ ಕೊರತೆ ಉಂಟಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಅಗತ್ಯ ಔಷಧಿಗಳೇ ಸಿಗದಿರುವ ಪರಿಸ್ಥಿತಿ ಉಲ್ಬಣಗೊಂಡಿರುವುದನ್ನು ಗಮನಿಸಿದರೆ ಈ ಸರ್ಕಾರ ದಿವಾಳಿಯಂಚಿಗೆ ತಲುಪಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದರು.
ಕೇವಲ ಮತಬ್ಯಾಂಕ್ ರಾಜಕಾರಣ ಹಾಗೂ ಚುನಾವಣಾ ಸಂದರ್ಭದ ಆಮಿಷಗಳ ಯೋಜನೆಗಳ ಮೇಲೆ ಅವಲಂಬಿತವಾಗಿದೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಡವರು ಹಾಗೂ ಶೋಷಿತ ಸಮುದಾಯಗಳೆಂದರೆ ತಾತ್ಸಾರ. ಆರೋಗ್ಯ ಭಾಗ್ಯವನ್ನೇ ಕಿತ್ತುಕೊಂಡ ಈ ಸರ್ಕಾರ ಯಾವ ಭಾಗ್ಯ ಕೊಟ್ಟರೇನು ಎಂದು ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಬಡವರ ಜೀವ ರಕ್ಷಕ ಔಷಧಿಗಳ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿ.ವೈ ವಿಜಯೇಂದ್ರ ಒತ್ತಾಯಿಸಿದರು.
ಶೋಷಿತ ಸಮುದಾಯಗಳ ಮೇಲೆ ಸರ್ಕಾರದ ತಾತ್ಸಾರ
ಇನ್ನು ರಾಜ್ಯ ಸರ್ಕಾರ ಕಳೆದ ಬಜೆಟ್ನಲ್ಲಿ ಘೋಷಿಸಿದ ಅನುದಾನದಲ್ಲಿ ಪರಿಶಿಷ್ಟರ ನಿಧಿಗೆ ಶೇಕಡಾ 41ರಷ್ಟು ಹಣ ಬಿಡುಗಡೆ ಇನ್ನೂ ಬಾಕಿ ಇರುವ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಗಳಿಗಾಗಿ ಮೀಸಲಾಗಿದ್ದ ಹಣವನ್ನು ದುರುಪಯೋಗಿಸಿಕೊಂಡು ಪರಿಶಿಷ್ಟರನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ ನಿಧಿಯ ಶೇ 41 ರಷ್ಟು ಬಿಡುಗಡೆ ಬಾಕಿ ಉಳಿದಿರುವುದು ಶೋಷಿತ ಸಮುದಾಯಗಳ ಮೇಲೆ ಈ ಸರ್ಕಾರಕ್ಕಿರುವ ತಾತ್ಸಾರ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ರಾಜ್ಯದ ಆರ್ಥಿಕ ಸಂಪನ್ಮೂಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದೇ ಒಂದು ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸುವ ಬದ್ಧತೆಯಿಲ್ಲದ, ತಳ ಸಮುದಾಯಗಳ ಸ್ವಾವಲಂಬಿ ಬದುಕು ಕಟ್ಟಿಕೊಡುವ ನಿಗಮ ಮಂಡಳಿಗಳಿಗೆ ಅನುದಾನಗಳನ್ನೂ ನೀಡದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಶೋಷಿತ ಸಮುದಾಯಗಳು ಆಕ್ರೋಶಿತರಾಗಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಪರಿಶಿಷ್ಟ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಬಾಕಿಯಿರುವ ಅನುದಾನ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.












Click it and Unblock the Notifications