ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಕರ್ನಾಟಕ ಈಗ ಹೇಗಿದೆ? ವರದಿ
ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕವು 2018ರ ನೈಋತ್ಯ ಮಾನ್ಸೂನ್ ಅವಧಿಯಲ್ಲಿ ಅತಿ ಹೆಚ್ಚು ಹಾಗೂ ಅತಿ ಕಡಿಮೆ ಮಳೆಗೆ ಸಾಕ್ಷಿಯಾಗಿದೆ. ಇದರಿಂದಾಗಿ ಕರಾವಳಿ ಹಾಗೂ ಮಲೆನಾಡಿನ 7 ಜಿಲ್ಲೆಗಳಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಒಳನಾಡಿನ 17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ.
ಕೊಡಗು ಹಾಗೂ ನೆರೆಯ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮೇ ತಿಂಗಳಿನಿಂದ ಆಗಸ್ಟ್ ವರೆಗೆ ಸತತವಾಗಿ ಭಾರಿ ಮಳೆಯಾಗುತ್ತಿದ್ದು, ಆಗಸ್ಟ್ 2ನೇ ವಾರದಲ್ಲಿ ಕಳೆದ 118 ವರ್ಷಗಳಲ್ಲಿಯೇ ಅತಿ ಹೆಚ್ಚು ಮಳೆ ದಾಖಲಾಗಿದೆ.
ಇದರಿಂದಾಗಿ ಈ ಭಾಗದ ಜಲಾಶಗಳಿಗೆ ಹಿಂದೆಂದೂ ಹರಿಯದಷ್ಟು ನೀರು ಹರಿದಿದೆ. ತಿಂಗಳುಗಳ ಕಾಲ ಸತತ ಭಾರಿ ಮಳೆ ಸುರಿದಿದ್ದರಿಂದ ಕೊಡಗು ಮತ್ತು ನೆರೆಯ ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ ಭಾರಿ ಭೂಕುಸಿತ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿತು.
ಇದರಿಂದಾಗಿ ಮೇಲ್ಮೈ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಪರಿಸರದ ಮೇಲೆ ಹಾಗೂ ಭೌಗೋಳಿಕ ಪರಿಸ್ಥಿತಿಯ ಮೇಲೆ ಇದು ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳಿವೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಭಾರಿ ಹಾನಿಯಾಗಿದ್ದು, ಭೂ ಕುಸಿತದಿಂದಾಗಿ ಕಾಫಿ ತೋಟಗಳು ಕೇವಲ ಮಣ್ಣಿನ ರಾಶಿಗಳಾಗಿ ಉಳಿದಿವೆ.

ಕಾಫಿ ಬೆಳೆಯಿಂದ ಸಾವಿರ ಕೋಟಿ ನಷ್ಟ
ಕಾಫಿ ಉದ್ಯಮದ ಅಂದಾಜಿನ ಪ್ರಕಾರ 2018-19ರಲ್ಲಿ ಕಾಫಿ ಉತ್ಪಾದನೆ ಶೇ. 20 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಏಕೆಂದರೆ ಭಾರತದ ಶೇ. 90 ರಷ್ಟು ಕಾಫಿ ಉತ್ಪಾದನೆ ಕೊಡಗು ಮತ್ತು ಕೇರಳದಲ್ಲಿ ಆಗುತ್ತಿದೆ. ಕಾಫಿ ಬೆಳೆ ನಷ್ಟವೇ ಸುಮಾರು ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಗಳ ನವೀಕರಣ
ರಾಷ್ಟ್ರೀಯ ಹೆದ್ದಾರಿ 275, ರಾಷ್ಟ್ರೀಯ ಹೆದ್ದಾರಿ 75 ಹಾಗೂ ರಾಷ್ಟ್ರೀಯ ಹೆದ್ದಾರಿ 234, ರಾಜ್ಯ ಹೆದ್ದಾರಿಗಳು, ಕೊಡಗಿನ ಪ್ರಮುಖ ಜಿಲ್ಲಾರಸ್ತೆಗಳು ಮತ್ತು ಗ್ರಾಮೀಣ ರಸ್ತೆಗಳು ಹಾಗೂ ಅರಣ್ಯ ರಸ್ತೆಗಳಿಗೆ ಭಾರಿ ಹಾನಿಯುಂಟಾಗಿದೆ. ಘಾಟಿ ಪ್ರದೇಶದಲ್ಲಿ ಹಲವೆಡೆಗಳಲ್ಲಿ ಭೂ ಕುಸಿತವಾಗಿದ್ದು, ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಸಂಚಯವಾಗಿರುವ ಮಣ್ಣು, ಕೆಸರು ತೆರವುಗೊಳಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕಾಗಿದೆ. ಪ್ರಕೃತಿಯ ಮುನಿಸಿನಿಂದ ಸಾವಿರಾರು ಜನ ಮನೆ, ಜೀವನೋಪಾಯ ಕಳೆದುಕೊಂಡಿದ್ದಾರೆ. ಪ್ಲಾಂಟೇಷನ್ ಕಾರ್ಮಿಕರು ಹಾಗೂ ಸಣ್ಣ ಮತ್ತು ಮಧ್ಯಮ ಭೂ ಹಿಡುವಳಿದಾರರಿಗೆ ಇದರಿಂದ ಅತಿ ಹೆಚ್ಚು ತೊಂದರೆಯಾಗಿದೆ. 65 ಜನರು ಪ್ರವಾಹ, ಭೂಕುಸಿತ, ಮನೆ ಕುಸಿತ ಮತ್ತು ಸಿಡಿಲು ಮಳೆಗೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಜೀವ ಕಳೆದುಕೊಂಡಿದ್ದಾರೆ.

ಪ್ರವಾಹದಲ್ಲಿ 4300 ಜನರ ರಕ್ಷಣೆ
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತವು ಯಶಸ್ವಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ 4300 ಜನರನ್ನು ರಕ್ಷಣೆ ಮಾಡಿದೆ. 55 ಪರಿಹಾರ ಕೇಂದ್ರಗಳಲ್ಲಿ ಸುಮಾರು 7300 ಜನರಿಗೆ ಆಶ್ರಯ ನೀಡಲಾಗಿದೆ. ಈ ಪರಿಹಾರ ಕೇಂದ್ರಗಳಲ್ಲಿ ಆಹಾರ, ವೈದ್ಯಕೀಯ ನೆರವು ಮತ್ತಿತರ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.
ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ 5 ಲಕ್ಷ ರೂಪಾಯಿ (ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 1 ಲಕ್ಷ ರೂ. ಹೆಚ್ಚುವರಿ ಪರಿಹಾರ) ಪರಿಹಾರ ನೀಡಲಾಗಿದೆ. ಪರಿಹಾರ ಕೇಂದ್ರದಲ್ಲಿರುವ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ಅಗತ್ಯ ವೆಚ್ಚಗಳಿಗಾಗಿ 3800 ರೂಪಾಯಿ ನಗದು ನೀಡಲಾಗಿದೆ. ಜೊತೆಗೆ 10 ಕೆಜಿ ಅಕ್ಕಿ, 1 ಕೆಜಿ ಎಣ್ಣೆ, ಸಕ್ಕರೆ, ಉಪ್ಪು, ಬೇಳೆಗಳನ್ನು ಹಳ್ಳಿಗಳಿಗೆ ಜೀಪುಗಳ ಮೂಲಕ ವಿತರಿಸಲಾಗಿದೆ. ಶುದ್ಧ ಕುಡಿಯುವ ನೀರನ್ನು ಸಹ ಒದಗಿಸಲಾಗಿದೆ.
ರಾಜ್ಯ ಸರ್ಕಾರವು ಪರಿಹಾರ ಮತ್ತು ಪುನರ್ವಸತಿಗಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 49 ಕೋಟಿ ರೂ. ಹಾಗೂ ರಾಜ್ಯದ ಅನುದಾನ 200 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ರಾಜ್ಯದ ಬರ ಪರಿಸ್ಥಿತಿ
ರಾಜ್ಯದಲ್ಲಿ ಸೆಪ್ಟೆಂಬರ್ 6ರ ವರೆಗೆ ಒಟ್ಟಾರೆಯಾಗಿ ಸರಾಸರಿ ವಾಡಿಕೆ ಮಳೆಯಾಗಿದ್ದರೂ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದರೆ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ಜಿಲ್ಲಾವಾರು ಮಳೆಯ ಪರಿಸ್ಥಿತಿ ಹೀಗಿದೆ
30 ಜಿಲ್ಲೆಗಳಲ್ಲಿ 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು, 10 ಜಿಲ್ಲೆಗಳಲ್ಲಿ ವಾಡಿಕೆ ಮಳೆ ಹಾಗೂ 16 ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ. 176 ತಾಲ್ಲೂಕುಗಳ ಪೈಕಿ 23 ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚು, 64 ತಾಲ್ಲೂಕುಗಳಲ್ಲಿ ವಾಡಿಕೆ ಮಳೆ ಹಾಗೂ 89 ತಾಲ್ಲೂಕುಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ.
ಸೆಪ್ಟೆಂಬರ್ 2 ರ ವರೆಗೆ 104 ತಾಲ್ಲೂಕುಗಳಲ್ಲಿ ಸತತ 3 ವಾರಗಳ ಕಾಲ ಒಣ ಹವೆ ಕಂಡುಬಂದಿದೆ. ಮಳೆ ಕೊರತೆ ಹಾಗೂ ಸತತ 3 ವಾರಗಳ ಒಣ ಹವೆ ಪರಿಸ್ಥಿತಿ ಈ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಅಂದಾಜಿಸಲು ಅರ್ಹತೆ ಪಡೆದುಕೊಂಡಿವೆ. ಬರ ಪರಿಸ್ಥಿತಿಯ ಪರಿಣಾಮವನ್ನು ಅಳೆಯಲು ವಿವಿಧ ಮಾನದಂಡಗಳಾದ ಬಿತ್ತನೆ ಪ್ರದೇಶ, ತೇವಾಂಶ ಪ್ರಮಾಣ ಮತ್ತು ಇತರ ಅಂಶಗಳ ಅಧ್ಯಯನ ನಡೆಸಲಾಗುತ್ತಿದೆ.

ಎಚ್ಡಿಕೆಯಿಂದ ಪ್ರಧಾನಿ ಮೋದಿಗೆ ವರದಿ ಸಲ್ಲಿಕೆ
ಇಲಾಖೆಗಳು ಬರದ ತೀವ್ರತೆಯನ್ನು ಹಾಗೂ ಬೆಳೆ ನಾಶದ ಪ್ರಮಾಣವನ್ನು ಖಾತರಿಪಡಿಸಲು ಸಮೀಕ್ಷೆ ನಡೆಸುತ್ತಿವೆ. ಎನ್ ಡಿ ಆರ್ ಎಫ್ ಅಡಿ ಆರ್ಥಿಕ ನೆರವಿಗಾಗಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರಮೋದಿಯವರಿಗೆ ವರದಿ ನೀಡಿದ್ದಾರೆ. ಶೀಘ್ರವೇ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ಪ್ರಾಥಮಿಕ ಅಂದಾಜಿನ ಪ್ರಕಾರ ತೇವಾಂಶ ಕೊರತೆಯಿಂದಾಗಿ ಈ ಪ್ರದೇಶಗಳಲ್ಲಿ 15 ಲಕ್ಷ ಹೆಕ್ಟೇರ್ ಗೂ ಅಧಿಕ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ. ಈವರೆಗೆ ಸಂಭವಿಸಿದ ನಷ್ಟದ ಮೌಲ್ಯ 8000 ಕೋಟಿ ರೂ. ಗಳಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.
ಇದಲ್ಲದೆ ಕುಡಿಯುವ ನೀರು, ಮೇವು, ಗ್ರಾಮೀಣ ಉದ್ಯೋಗ ಮತ್ತು ಸಾಮಾಜಿಕ-ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮ ಬೀರಿದ್ದು, ಆರ್ಥಿಕ ನಷ್ಟವನ್ನು ಅಂದಾಜಿಸಲಾಗುತ್ತಿದೆ.
ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಹೊರ ತಂದಿರುವ ಬರ ನಿರ್ವಹಣೆ ಕೈಪಿಡಿ- 2016ರಲ್ಲಿ ವಿವರಿಸಿರುವಂತೆ 176 ತಾಲ್ಲೂಕುಗಳಲ್ಲಿ 86 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications