ಬಿಜೆಪಿ ಆಫರ್ ತಿರಸ್ಕರಿಸಿದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್
ಬೆಂಗಳೂರು, ಮೇ 19 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಸಾಬೀತು ಮಾಡಬೇಕಿದೆ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನ ಮುಂದುವರೆಸಿದೆ.
ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರಿಗೆ ಬಿಜೆಪಿ ಆಫರ್ ನೀಡಿದೆ. ಬಹುಮತ ಸಾಬೀತುಪಡಿಸುವಾಗ ಬೆಂಬಲ ನೀಡುವಂತೆ ಮನವಿ ಮಾಡಿತ್ತು. ಆದರೆ, ಅವರು ಈ ಆಫರ್ ತಿರಸ್ಕರಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಭದ್ರಾವತಿಯಲ್ಲಿ ಮಾತ್ರ ಕಾಂಗ್ರೆಸ್ ಜಯಗಳಿಸಿದೆ. ಉಳಿದ 6 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ. ಆದ್ದರಿಂದ, ಬಿ.ಕೆ.ಸಂಗಮೇಶ್ ಅವರಿಗೆ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು.

2018ರ ಚುನಾವಣೆಯಲ್ಲಿ ಬಿ.ಕೆ.ಸಂಗಮೇಶ್ ಅವರು 75,722 ಮತಗಳನ್ನು ಪಡೆದು, ಜೆಡಿಎಸ್ನ ಅಪ್ಪಾಜಿ ಗೌಡ ಅವರನ್ನು ಸೋಲಿಸಿದ್ದಾರೆ. ಸಂಗಮೇಶ್ ಅವರಿಗೆ ಸಚಿವ ಸ್ಥಾನದ ಆಮಿಷವೊಡ್ಡಲಾಗಿತ್ತೇ? ಎಂಬುದು ಇನ್ನೂ ತಿಳಿದುಬಂದಿಲ್ಲ.
ಈಗಾಗಲೇ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕರ ಪತ್ನಿಗೆ ಕರೆ ಮಾಡಿದ ಬಿಜೆಪಿ ನಾಯಕರು ಸಚಿವ ಸ್ಥಾನ, ಹಣದ ಆಮಿಷವೊಡ್ಡಿದ ಆಡಿಯೋ ಬಿಡುಗಡೆ ಮಾಡಿದ್ದರು.
ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಾಲ್ ಅವರಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಕರೆ ಮಾಡಿ ಆಮಿಷವೊಡ್ಡುವ ಆಡಿಯೋವನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು.












Click it and Unblock the Notifications