ವಿಶ್ವಾಸಮತದ ಚರ್ಚೆ : ಸ್ಪೀಕರ್, ಸಿಎಂ ವಿರುದ್ಧ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು, ಜುಲೈ 22 : ಕರ್ನಾಟಕ ವಿಧಾನಸಭೆಯಲ್ಲಿ ಗುರುವಾರದಿಂದ ವಿಶ್ವಾಸಮತದ ಮೇಲಿನ ಚರ್ಚೆಗಳು ನಡೆಯುತ್ತಿವೆ. ಆದರೆ, ವಿಶ್ವಾಸಮತವನ್ನು ಸರ್ಕಾರ ಇನ್ನೂ ಸಾಬೀತು ಮಾಡಿಲ್ಲ. ಈ ಕುರಿತು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಸೋಮವಾರ ವಕೀಲ ಆನಂದ ಮೂರ್ತಿ ಎನ್ನುವವರು ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ.

ಸರ್ಕಾರ ಬಹುಮತ ಸಾಬೀತು ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ. ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಲು ಕಾಲಮಿತಿ ನಿಗದಿ ಮಾಡಬೇಕು ಎಂದು ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ.
ಜುಲೈ 18ರಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ವಿಶ್ವಾಸಮತದ ಮೇಲಿನ ನಿರ್ಣಯ ಮಂಡನೆ ಮಾಡಿದರು. ಗುರುವಾರ, ಶುಕ್ರವಾರ ನಿರ್ಣಯದ ಮೇಲೆ ಚರ್ಚೆಗಳು ನಡೆದವು. ಬಳಿಕ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.
ಸೋಮವಾರ ವಿಶ್ವಾಸಮತದ ಚರ್ಚೆಯನ್ನು ಪೂರ್ಣಗೊಳಿಸಿ ಮತಕ್ಕೆ ಹಾಕಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇನ್ನೂ ಎರಡು ದಿನಗಳ ಕಾಲ ಚರ್ಚೆಗೆ ಅವಕಾಶ ಕೇಳಿದ್ದಾರೆ.
ರಾಜ್ಯಪಾಲ ವಜುಭಾಯಿ ವಾಲಾ ಅವರು ಎರಡು ಬಾರಿ ಕರ್ನಾಟಕ ಸರ್ಕಾರಕ್ಕೆ ಬಹುಮತ ಸಾಬೀತು ಮಾಡಿ ಎಂದು ಸೂಚನೆ ನೀಡಿದ್ದರು. ಆದರೆ, ಎರಡು ಗಡುವಿನಲ್ಲಿಯೂ ವಿಶ್ವಾಸಮತ ಸಾಬೀತು ಮಾಡಲು ಸರ್ಕಾರ ವಿಫಲವಾಗಿದೆ. ವಿಧಾನಸಭೆಯಲ್ಲಿ ಚರ್ಚೆ ಇನ್ನೂ ಮುಂದುವರೆದಿದೆ.












Click it and Unblock the Notifications