Breaking: ಅರಣ್ಯ ಸಚಿವ ಉಮೇಶ್ ಕತ್ತಿ ವಿಧಿವಶ
ಬೆಂಗಳೂರು, ಸೆಪ್ಟೆಂಬರ್ 7: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.
Recommended Video

ಮಂಗಳವಾರ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್ ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರ ಬುಧವಾರದ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಗುರುವಾರ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ: ಬುಧವಾರ ಬೆಳಗ್ಗೆಯೇ ಬೆಳಗಾವಿಗೆ ಉಮೇಶ್ ಕತ್ತಿ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ. ತದನಂತರ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
9 ಬಾರಿ ಸ್ಪರ್ಧಿಸಿ 8 ಬಾರಿ ಗೆದ್ದಿದ್ದ ಕತ್ತಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿದ್ದರು. 9 ಸಲ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದರು. 1985ರಲ್ಲಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿದ್ದಾರೆ.
ಬೆಳಗಾವಿಯ ಕೆಎಲ್ಇ ಸೊಸೈಟಿಯ ಲಿಂಗರಾಜ್ ಕಾಲೇಜಿನಲ್ಲಿ ಪಿಯುಸಿ ತನಕ ವ್ಯಾಸಂಗ ಮಾಡಿರುವ ಅವರು ಹುಕ್ಕೇರಿ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಜನತಾ ಪಕ್ಷದಿಂದ ಚುನಾವಣಾ ಕಣಕ್ಕಿಳಿದರು. ಮೊದಲ ಪ್ರಯತ್ನದಲ್ಲೇ ಗೆಲುವು ಕಂಡಿದ್ದರು.
1989ರಲ್ಲಿ ಜನತಾದಳಕ್ಕೆ ಬಂದು ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದರು. 1994ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸಿದರು. 1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ನಿಂದ ಸ್ಪರ್ಧಿಸಿ 4ನೇ ಬಾರಿಯೂ ಗೆದ್ದಿದ್ದರು. 2004ರಲ್ಲಿ ಕಾಂಗ್ರೆಸ್ಗೆ ಬಂದ ಉಮೇಶ್ ಕತ್ತಿ ಚುನಾವಣೆಯಲ್ಲಿ ಸೋಲು ಕಂಡರು.
2008ರಲ್ಲಿ ಜೆಡಿಎಸ್ ಸೇರಿದರು, ಗೆಲುವು ಕಂಡರು. ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದರು. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 6ನೇ ಗೆಲುವು ಸಾಧಿಸಿದರು. 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು.
ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಉಮೇಶ್ ಕತ್ತಿ ಅವರದ್ದು. 2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದರು, ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಿಕ್ಕಿತು. ಬಳಿಕ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದರು. ಅರಣ್ಯ ಇಲಾಖೆ ಖಾತೆ ಸಚಿವರಾಗಿದ್ದಾರೆ.












Click it and Unblock the Notifications