ರಾಯಚೂರು: ಕಾಂಗ್ರೆಸ್ ನಾಯಕರ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ರಾಯಚೂರು, ಅಕ್ಟೋಬರ್ 11: ದೇಶದಲ್ಲಿ ಕಳೆದ 8 ವರ್ಷದಿಂದ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಯುಪಿಎ ಅಧಿಕಾರ ಅವಧಿಯಲ್ಲಿ ನಿರಂತರ ಭ್ರಷ್ಟಾಚಾರದ ಹಗರಣಗಳು ನಡೆದಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ರಾಯಚೂರು ಜಿಲ್ಲೆಯ ಗಿಲ್ಲೇಸುಗೂರಿನಲ್ಲಿ ಮಂಗಳವಾರ ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡುವ ಕಾಂಗ್ರೆಸ್ ನಾಯಕರನ್ನು ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡರು.
ಗರಿಷ್ಠ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ನರೇಂದ್ರ ಮೋದಿ ಅವರ ಬಗ್ಗೆ ಸೋನಿಯಾ ಮತ್ತು ರಾಹುಲ್ ಗಾಂಧಿಯವರು ಹಗುರವಾಗಿ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಕನಸು ನನಸಾಗುವುದಿಲ್ಲ. ಸಿದ್ದರಾಮಯ್ಯರಿಗೆ 75 ಲಕ್ಷದ ವಾಚ್ ಯಾರು ಕೊಟ್ಟರು? ಅವರು ಸುಮ್ಮನೇ ಕೊಟ್ಟರೇ? ಇದಕ್ಕೆ ಉತ್ತರಿಸಿ ಎಂದು ಯಡಿಯೂರಪ್ಪ ಸವಾಲೆಸೆದರು.

ರಿಯಲ್ ಎಸ್ಟೇಟ್ ನವರಿಗೆ ಕಾಂಗ್ರೆಸ್ ಅನುಕೂಲ
ಅರ್ಕಾವತಿ ರೀಡೂ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ನಿವೇಶನಗಳನ್ನು ರಿಯಲ್ ಎಸ್ಟೇಟ್ ನವರಿಗೆ ಮಾರಾಟ ಮಾಡಿ ಅನುಕೂಲ ಮಾಡಿಕೊಂಡಿದ್ದರು ಎಂದು ಸಿದ್ದರಾಮಯ್ಯ ವಿರುದ್ಧ ಟೀಕಿಸಿದರು. ಇನ್ನೂ ಗಾಂಧಿ ಕುಟುಂಬದ ಹೆಸರಿನಿಂದ ಮೂರ್ನಾಲ್ಕು ತಲೆಮಾರಿಗೆ ಬೇಕಾದಷ್ಟು ಸಂಪತ್ತು ಗಳಿಸಿದ್ದೇವೆ ಆ ಕುಟುಂಬದ ಋಣವನ್ನು ತೀರಿಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್ ಅವರೇ ಹೇಳಿದ್ದಾರೆ. ಇದರ ಅರ್ಥ ಏನು? ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ನಿಂದ ಲೂಟಿ
ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ಸರ್ಕಾರದ ಖಜಾನೆ ಲೂಟಿ ಮಾಡಿದೆ. ಹೀಗೆಂದು ರಮೇಶ್ ಕುಮಾರ್ ಅವರ ಮಾತೇ ಸಾಕ್ಷಿ. ಆದರೂ ಸಹ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಮಾತನ್ನು ಪಾದಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿ ಅಥವಾ ಸೋನಿಯಾ ಗಾಂಧಿ ಒಬ್ಬರಾದರೂ ವಿರೋಧಿಸಿಲ್ಲ. ಕಾಂಗ್ರೆಸ್ ತೆರಿಗೆ ಹಣ ಲೂಟಿ ಮಾಡಿದ್ದಕ್ಕೆ ಇದು ಸಾಕ್ಷಿ ಎಂದರು.
ಯುಪಿಎ ಅಧಿಕಾರ ಅವಧಿಯಲ್ಲಿ ನಿರಂತರ ಭ್ರಷ್ಟಾಚಾರದ ಹಗರಣಗಳು ನಡೆದಿವೆ. ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಜಾಮೀನಿನಲ್ಲಿ ಹೊರಗಡೆ ಇದ್ದಾರೆ ಎಂಬುದು ಕಾಂಗ್ರೆಸ್ ಮರೆಯಬಾರದು ಎಂದು ತಿಳಿಸಿದರು.

ರಾಯಚೂರಲ್ಲಿ ಏಮ್ಸ ಸ್ಥಾಪನೆಯ ಭರವಸೆ
ರಾಯಚೂರು ಜಿಲ್ಲೆಯಲ್ಲಿ ಏಮ್ಸ (ಆಲ್ ಇಂಡಿಯಾ ಮೆಡಿಕಲ್ ಸೈನ್ಸ್) ಸ್ಥಾಪನೆ ಕುರಿತು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತನಾಡಿದ್ದೇನೆ. ಬೇಡಿಕೆ ಈಡೇರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಅತಿ ಹೆಚ್ಚು ಬಿಜೆಪಿ ಶಾಸಕರನ್ನು ಗೆಲ್ಲಿಸಿ ಕೊಡಬೇಕಿದೆ. ದೇಶದ ಶೇ.73 ಜನರು ನರೇಂದ್ರ ಮೋದಿಯವರ ಪರವಾಗಿ ಇರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ. ಮೋದಿ ಅವರು ಪ್ರಪಂಚದ ಅಗ್ರಗಣ್ಯ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಯಡಿಯೂರಪ್ಪ ವಿವರಿಸಿದರು.

ಬಿಜೆಪಿಗೆ ಸ್ಪಷ್ಟ ಬಹುಮತ
ಕಾಂಗ್ರೆಸ್ನ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ರಾಯರ ಮಠದ ಸುತ್ತ ಇರುವ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ, ಬೊಮ್ಮಾಯಿಯವರ ನೇತೃತ್ವದಲ್ಲಿ ಮುಂದಿನ ಬಾರಿ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೋವಿಡ್ ಸಂದರ್ಭದಲ್ಲಿ ಉಚಿತವಾಗಿ ಲಸಿಕೆ ನೀಡಲಾಗಿದೆ. ಅಲ್ಲದೆ 80 ಕೋಟಿ ಜನರಿಗೆ ಉಚಿತ ಪಡಿತರ ಕೊಡಲಾಗಿದೆ. ದೇಶ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಶ್ರಮಿಸಿವೆ. ಬಿಜೆಪಿ ಕಾರ್ಯಗಳನ್ನು ಜನತೆ ಮರೆಯುವುದಿಲ್ಲ. ಚುನಾವಣೆಗಳಲ್ಲಿ ಜನರು ಬಿಜೆಪಿಗೆ ಆಶೀರ್ವದಿಸಲಿದ್ದಾರೆ ಎಂದರು.
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.












Click it and Unblock the Notifications