2011ರ ಕೆಪಿಎಸ್ಸಿ ನೇಮಕಾತಿಗೆ ಸಚಿವ ಸಂಪುಟ ಸಮ್ಮತಿ
2011ರಲ್ಲಿ ಕೆಪಿಎಸ್ ಸಿ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ರದ್ದುಗೊಳಿಸಿದ್ದ ಸರ್ಕಾರ ಇದೀಗ ಈ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ.
ಬೆಂಗಳೂರು, ಮಾರ್ಚ್. 01 : ಕೊನೆಗೂ 2011ರ ಬ್ಯಾಚ್ 362 ಮಂದಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಬುಧವಾರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಕಾನೂನು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಟಿಬಿ ಜಯಚಂದ್ರ ಸದ್ದಿಗೋಷ್ಠಿ ನಡೆಸಿ, ಕೆಎಟಿ ಆದೇಶದ ಬಗ್ಗೆ ಕಾನೂನು ತಜ್ಞರ ಜತೆ ಮಾತುಕತೆ ನಡೆಸಿದ್ದೇವೆ.
ಆಡಳಿತದ ದೃಷ್ಟಿಯಿಂದ ರಾಜ್ಯ ಸರ್ಕಾರ ಆದೇಶವನ್ನು ಪ್ರಶ್ನಿಸದೇ ಇರಲು ನಿರ್ಧರಿಸಿದೆ. ಹೀಗಾಗಿ ಎಲ್ಲಾ 362 ಗೆಜೆಟೆಡ್ ಪ್ರೊಬೇಷನರಿ ಅಭ್ಯರ್ಥಿಗಳ ನೇಮಕಾತಿಗೆ ಒಪ್ಪಿಗೆ ನೀಡಿದ್ದೇವೆ ಎಂದು ತಿಳಿಸಿದರು.
ಸಿಐಡಿ ತನಿಖೆಯಲ್ಲಿ ಯಾವ ಆರೋಪಗಳು ಸಾಬೀತಾಗಿರಲಿಲ್ಲ. ಕೇವಲ ಫೋನ್ ಕಾಲ್ ಮಾಡಿರುವುದು ಸಾಕ್ಷಿ ಆಗುವುದಿಲ್ಲ. ಹೀಗಾಗಿ ಕೆಎಟಿ ಆದೇಶವನ್ನು ಪಾಲಿಸುತ್ತಿದ್ದೇವೆ ಅಷ್ಟೇ ಅಲ್ಲದೇ ಮತ್ತೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲು ಎಲ್ಲರಿಗೂ ಸ್ವಾಂತಂತ್ರ್ಯ ಇದೆ ಎಂದು ಹೇಳಿದರು.
ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಆದೇಶವನ್ನು ಪ್ರಶ್ನಿಸದಿರಲು ಸರ್ಕಾರ ನಿರ್ಧಾರಿಸಿದ್ದರಿಂದ ನಾಲ್ಕು ವರ್ಷಗಳ ಕಾನೂನು ಸಮರ ಅಂತ್ಯವಾದಂತಾಗಿದೆ.
ಏನಿದು ಪ್ರಕರಣ? 2011ರಲ್ಲಿ ಕೆಪಿಎಸ್ ಸಿ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆಯನ್ನು ಸರ್ಕಾರ ರದ್ದುಗೊಳಿಸಿತ್ತು.
ಸರ್ಕಾರದ ಆದೇಶದ ವಿರುದ್ಧ ಕೆಲ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಕೆಎಟಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು.