ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ರಾಜ್ಯ ಸರ್ಕಾರದಿಂದ ಸಿಕ್ತು ದುಬಾರಿ ಕಾರು, ಯಾವುದು ಗೊತ್ತಾ?
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ನಡುವೆ ಕಾರ್ ವಾರ್ ಜೋರಾಗಿದೆ. ಮಂಡ್ಯ ಸಂಸದರೂ ಆದ ಕುಮಾರಸ್ವಾಮಿ ಅವರಿಗೆ ಹೊಸ ಕಾರನ್ನು ನೀಡಿಲ್ಲ ಎಂಬ ವಿಚಾರವಾಗಿ ಆರೋಪ ಮಾಡಲಾಗಿತ್ತು. ಈ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ಕಾರು ಹಂಚಿಕೆ ಮಾಡಿರುವುದಾಗಿ ಹೇಳಿದೆ.
ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿರುತ್ತದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ ಮಾಸದ ಕಾರಣ ನೀಡಿ ಸಂಕ್ರಾಂತಿಯ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ ಎಂದು ಕಾಂಗ್ರೆಸ್ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ದೂರಿದೆ.
ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024ರಲ್ಲಿ ಹೆಚ್.ಡಿ.ಕುಮಾರಸ್ವಾಮಿರವರ ಹೊಸ ವಾಹನದ ಪ್ರಸ್ತಾಪಕ್ಕೆ ಅನುಗುಣವಾಗಿ ಆರ್ಥಿಕ ಇಲಾಖೆಗೆ ಪತ್ರ ಬರೆದಿತ್ತು. ಕರ್ನಾಟಕದ ಸುಮಾರು 6 ಸಂಸದರಿಗೆ ಆರ್ಥಿಕ ಮಿತಿಯೊಳಗೆ ವಾಹನಗಳನ್ನು ಖರೀದಿಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಅದಕ್ಕೆ ಅನುಗುಣವಾಗಿ ವಾಹನ ಖರೀದಿ ಮಾಡಿ ಹೊಸ ಕಾರು ಪಡೆಯಲು ಮಾಹಿತಿ ನೀಡಲಾಗಿರುತ್ತದೆ ಎಂದು ಸ್ಪಷ್ಟನೆ ನೀಡಿದೆ.
ಹಿಂದಿನ ಇನ್ನೋವಾ ಕ್ರಿಸ್ಟಾ ಕಾರನ್ನು ಬಳಸಲು ಹೆಚ್.ಡಿ.ಕುಮಾರಸ್ವಾಮಿರವರು ನಿರಾಕರಿಸಿ ಹೊಸ ಇನ್ನೋವಾ ಹೈಕ್ರಾಸ್ ಕಾರಿಗೆ ಬೇಡಿಕೆ ಸಲ್ಲಿಸಿದ್ದು, ಅದರಂತೆ KA 59 G 0099 ನೋಂದಣಿಯ ಕಾರು ಹಂಚಿಕೆಯಾಗಿರುತ್ತದೆ. ಇದರ ಜೊತೆಗೆ ಕೆಲವು ಸಿಬ್ಬಂದಿಯನ್ನು ಎರವಲು ಸೇವೆಯ ಮೇಲೆ ರಾಜ್ಯ ಸರ್ಕಾರದಿಂದ ಪಡೆದುಕೊಂಡಿರುತ್ತಾರೆ. ಆದರೆ, ಇಂತಹ ವಿಚಾರಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯರವರನ್ನು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು, ಸಚಿವರಾದ ಕೃಷ್ಣಬೈರೇಗೌಡ ಹಾಗೂ ಚೆಲುವರಾಯಸ್ವಾಮಿ ಮತ್ತು ಇತರರನ್ನು ಟೀಕಿಸುವ ಮೂಲಕ ತಮ್ಮ ನಾಯಕತ್ವಕ್ಕೆ ಅವರೇ ಮಸಿ ಬಳೆದುಕೊಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದೆ.

ರಾಜ್ಯದ 2023ರ ವಿಧಾನಸಭೆಯ ಚುನಾವಣೆಯ ಫಲಿತಾಂಶದ ನಂತರ ಹೆಚ್.ಡಿ.ಕುಮಾರಸ್ವಾಮಿ ಅವರು ಪದೇ ಪದೇ ವ್ಯಕ್ತಿಗತ ಟೀಕೆಗಳಿಗೆ ಮುಂದಾಗುವುದರ ಮೂಲಕ ತಮ್ಮ ಹತಾಶ ಭಾವನೆಯನ್ನು ತೋರುತ್ತಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಮಗೆ ದೊರೆತಿರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಅಭಿವೃದ್ಧಿಗೆ ಮುಂದಾಗಲಿ. ಇಂತಹ ಸಾರ್ವಜನಿಕ ಪ್ರಾಮುಖ್ಯತೆ ಇಲ್ಲದ ವಿಷಯಗಳನ್ನು ಪ್ರಸ್ತಾಪಿಸಿ ಮುಜುಗರಕ್ಕೆ ಒಳಗಾಗುವ ಬದಲು, ಆರೋಗ್ಯಕರ ಚರ್ಚೆಗಳಿಗೆ ಒತ್ತು ನೀಡಿ ರಾಜ್ಯದ ಅಭಿವೃದ್ಧಿಗೆ ಮುಂದಾಗಲಿ ಎಂದು ಸಲಹೆ ನೀಡಿದೆ.












Click it and Unblock the Notifications