ರಾಜಧಾನಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಭರ್ಜರಿ ಸಿದ್ಧತೆ!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಭರ್ಜರಿ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಂದು ಮಹತ್ವದ ಚರ್ಚೆ ನಡೆಸಲಾಯಿತು. ಬೆಂಗಳೂರು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಡಿಸಿಎಂ & ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.
ಅಂದಹಾಗೆ ಬಿಬಿಎಂಪಿ ವತಿಯಿಂದ ನಡೆಯಲಿರುವ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ನೀಡುವ ಕೆಂಪೇಗೌಡ ಪ್ರಶಸ್ತಿಗಾಗಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಪ್ರತಿ ವಾರ್ಡ್ಗೆ ಒಂದರಂತೆ 198 ಮಂದಿ ಆಯ್ಕೆ ಮಾಡಗುತ್ತದೆ, ಎಲ್ಲಾ ಜಾತಿ ಧರ್ಮಕ್ಕೂ ಪ್ರಶಸ್ತಿ ಸಿಗಬೇಕು. ತಾರತಮ್ಯ ಮಾಡುವಂತಿಲ್ಲ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಬೇಕು. ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಪ್ರಶಸ್ತಿಗೆ ಪ್ರತ್ಯೇಕವಾಗಿ ಚರ್ಚಿಸಲಾಗುವುದು ಎಂಬ ತೀರ್ಮಾನ ಕೈಗೊಳ್ಳಲಾಯಿತು. ಹೀಗೆ ಹಲವು ಪ್ರಮುಖ ನಿರ್ಧಾರಗಳನ್ನ ಕೈಗೊಳ್ಳಲಾಗಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.

ಸಭೆಯ ಪ್ರಮುಖ ಅಂಶಗಳು ಇಲ್ಲಿವೆ:
1) ಹಾಸನದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಸಲು ಸಿದ್ಧತೆ
2) ಕರ್ನಾಟಕದ ಎಲ್ಲಾ ತಾಲೂಕುಗಳಲ್ಲೂ ಕಡ್ಡಾಯ ಆಚರಣೆ
3) ಬಿಬಿಎಂಪಿ ವತಿಯಿಂದ ಬೆಂಗಳೂರಲ್ಲಿ ಕೆಂಪೇಗೌಡರ ಜಯಂತಿ
4) ಬೆಂಗಳೂರಿನ ಪ್ರತಿ ವಾರ್ಡ್ಗೆ ಒಂದರಂತೆ 198 ಜನರಿಗೆ ಪ್ರಶಸ್ತಿ
5) ಜಾತಿ, ಧರ್ಮದ ತಾರತಮ್ಯ ಇಲ್ಲದೆ ಪ್ರಶಸ್ತಿಗೆ ಆಯ್ಕೆ ಮಾಡಬೇಕು
6) ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡುವುದು
7) ಬೆಂಗಳೂರು ನಗರದಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಆಚರಣೆ
8) ಶಾಸಕರ ಅನುಕೂಲಕ್ಕೆ ತಕ್ಕಂತೆ ಜೂ. 28ರಿಂದ ಜು. 5ರವರೆಗೆ ವೇಳಾಪಟ್ಟಿ
9) ಬೆಂಗಳೂರಿನ ವಲಯ ಜಂಟಿ ಆಯುಕ್ತರು ವೇಳಾಪಟ್ಟಿ ಸಿದ್ದಪಡಿಸಬೇಕು
10) 5 ಗೋಪುರಗಳಿಂದ ಜ್ಯೋತಿ ಬರಲಿದ್ದು, ಸಚಿವರಿಂದ ಚಾಲನೆ ಸಿಗಲಿದೆ
11) ಆಹ್ವಾನ ಪತ್ರಿಕೆಯಲ್ಲಿ ಶಿಷ್ಠಾಚಾರದ ಪ್ರಕಾರ ಎಲ್ಲಾ ಮಾಹಿತಿ ಹಾಕಬೇಕು

ಇನ್ನು ನಾಡಪ್ರಭು ಕೆಂಪೇಗೌಡ ಜಯಂತಿ ಸಂಬಂಧ ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ರಾಮಲಿಂಗಾರೆಡ್ಡಿ, ಮಾಗಡಿ ಶಾಸಕ ಬಾಲಕೃಷ್ಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ಕನ್ನಡ & ಸಂಸ್ಕೃತಿ ಇಲಾಖೆ ಕಾರ್ಯದರ್ ಮಂಜುಳಾ, ರಾಜೇಂದ್ರ ಕುಮಾರ್ ಕಠಾರಿಯಾ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಮೂಲಕ ನಾಡಪ್ರಭು ಜಯಂತಿಗೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಭರ್ಜರಿ ಸಿದ್ಧತೆ ನಡೆಸುತ್ತಿದೆ.












Click it and Unblock the Notifications