ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಿಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ಸ್ವಾಗತ
ಬೆಂಗಳೂರು, ಅ. 7: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಏರಿಕೆ ಮಾಡಬೇಕೆಂಬ ಒತ್ತಾಯಕ್ಕೆ ರಾಜ್ಯ ಸರಕಾರ ಮಣಿದಿದೆ. ಮೀಸಲಾತಿ ಹೆಚ್ಚಿಸಬೇಕೆಂದು ನ್ಯಾ| ನಾಗಮೋಹನ್ ದಾಸ್ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ.
ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೆ ಏರಿಸುವುದು, ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ ಶೇ. 7ಕ್ಕೆ ಏರಿಸಲು ಸರಕಾರ ತೀರ್ಮಾನಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಈ ವಿಚಾರವನ್ನು ಮಾಧ್ಯಮಗಳಿಗೆ ಶುಕ್ರವಾರ ತಿಳಿಸಿದರು.
"ಬಹಳ ವರ್ಷಗಳ ನ್ಯಾಯಸಮ್ಮತವಾದ ಬೇಡಿಕೆ, ಸಂವಿಧಾನದಲ್ಲಿ ಹೇಳಿರುವಂತೆ ಜನಸಂಖ್ಯೆಯ ಆಧಾರದಲ್ಲಿ ಮೀಸಲಾತಿ ನೀಡಬೇಕೆಂಬ ಬೇಡಿಕೆಯಂತೆ ಪರಿಶಿಷ್ಟ ಜಾತಿಗೆ ಶೇ 15 ರಷ್ಟಿದ್ದ ಮೀಸಲಾತಿಯನ್ನು ಶೇ. 17% ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ 3 ರಿಂದ ಶೇ.7% ಕ್ಕೆ ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನ ಮಾಡಲಾಗಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿರುವ ವರದಿ ಕುರಿತು ಶುಕ್ರವಾರ ನಡೆದ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಬೇಕೆಂದು ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಅಭಿಪ್ರಾಯಪಟ್ಟಿತ್ತು. ಕಾಂಗ್ರೆಸ್ ಸರಕಾರ ಕೂಡ ಈ ವಿಚಾರ ಇಟ್ಟುಕೊಂಡು ಬೃಹತ್ ಹೋರಾಟ ನಡೆಸಲು ಅಣಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸರಕಾರ ಮೀಸಲಾತಿ ಬೇಡಿಕೆಗೆ ಮನ್ನಣೆ ಕೊಟ್ಟು ನಾಗಮೋಹನ್ ದಾಸ್ ಸಮಿತಿ ವರದಿ ಜಾರಿ ಮಾಡಲು ನಿರ್ಧರಿಸಿರುವುದು ಗಮನಾರ್ಹ.

ಎಂ.ಪಿ. ಕುಮಾರಸ್ವಾಮಿ ಸ್ವಾಗತ
ಪರಿಶಿಷ್ಟ ಜಾತಿ ಮತ್ತು ಪಂಡಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವ ನಿರ್ಧಾರ ಮಾಡಿರುವ ರಾಜ್ಯ ಸರಕಾರಕ್ಕೆ ಅನುಸೂಚಿತ ಜಾತಿ, ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂಪಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪರಿಶಿಷ್ಟ ಜಾತಿಗೆ ಶೇ 15 ರಷ್ಟಿದ್ದ ಮೀಸಲಾತಿಯನ್ನು ಶೇ. 17% ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ 3 ರಿಂದ ಶೇ.7% ಕ್ಕೆ ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನ ಕೈಗೊಂಡಿರುವುದು ಐತಿಹಾಸಿಕ ನಿರ್ಣಯವಾಗಿದೆ. ಇದರಿಂದ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯದ ಮೇಲೆ ಇದುವರೆಗೂ ಹೊಂದಿದ್ದ ಬದ್ದತೆಯನ್ನು ಇಂತಹ ತೀರ್ಮಾನದ ಮೂಲಕ ಪ್ರದರ್ಶಿಸಿದೆ. ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿಗಳು, ಸಚಿವರು, ಪಕ್ಷದ ಮುಖಂಡರು, ಸರ್ವಪಕ್ಷಗಳ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಅದೇ ರೀತಿ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದ ಜನರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ 1978ರ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಕುರಿತಂತೆ ಮುಖ್ಯಮಂತ್ರಿಗಳು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದೂ ಮೂಡಿಗೆರೆಯ ಬಿಜೆಪಿ ಶಾಸಕರೂ ಅದ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸರಕಾರ ನಿರ್ಧಾರ
"ಬಿಜೆಪಿ ಪಕ್ಷದಲ್ಲಿಯೂ ಈ ಬಗ್ಗೆ ಎಲ್ಲಾ ನಾಯಕರೊಂದಿಗೆ ಚರ್ಚೆ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಕೋರ್ ಸಮಿತಿ ಸಭೆಯಲ್ಲಿ ಚರ್ಚೆಸಿ ಸಾಮಾಜಿಕ ನ್ಯಾಯದಲ್ಲಿ ನಮ್ಮ ಬದ್ಧತೆಯನ್ನು ಮುಂದುವರೆಸಬೇಕು. ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಹೆಚ್ಚಿನ ಮೀಸಲಾತಿ ನೀಡಲು ಕ್ರಮ ಕೈಗೊಂಡು, ಕಾನೂನಾತ್ಮಕ ಕ್ರಮಗಳನ್ನೂ ತೆಗೆದುಕೊಳ್ಳಲು ನಿರ್ಣಯ ಮಾಡಲಾಗಿತ್ತು. ಸರ್ವಪಕ್ಷದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಅದರ ಅನುಷ್ಠಾನಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ನಾಳೆಯೇ ಸಚಿವ ಸಂಪುಟ ಸಭೆ ಕರೆದು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ಎಲ್ಲಾ ಶಿಫಾರಸ್ಸುಗಳನ್ನು ಚರ್ಚಿಸಿ ಅಂತಿಮವಾದ ಸರ್ಕಾರದ ಕಾರ್ಯಾದೇಶವನ್ನು ಹೊರಡಿಸಲಾಗುವುದು" ಎಂದು ಸಿಎಂ ಸ್ಪಷ್ಟಪಡಿಸಿದರು.

ಒಳಮೀಸಲಾತಿ ಬಗ್ಗೆ ತಜ್ಞರೊಂದಿಗೆ ಸಮಾಲೋಚಿಸಿ ತೀರ್ಮಾನ
"ಇದರ ಜೊತೆಗೆ ಇನ್ನೂ ಹಲವಾರು ಬೇಡಿಕೆಗಳಿವೆ. ಮೀಸಲಾತಿ ಬಗ್ಗೆ ನಾವೆಲ್ಲರೂ ಚಿಂತನೆ ಮಾಡುವ ಅವಶ್ಯಕತೆ ಇದೆ. ಎಲ್ಲಾ ಸಮಾಜದಲ್ಲಿ, ಎಲ್ಲಾ ಜನಾಂಗಗಳಲ್ಲಿಯೂ ಆಕಾಂಕ್ಷೆಗಳು ಹೆಚ್ಚಾಗಿವೆ. ಎಸ್ಸಿ ಎಸ್ಟಿ ಸಮುದಾಯದೊಳಗೆ ಕೆಲಸವರಿಗೆ ನ್ಯಾಯ ದೊರೆತಿಲ್ಲ ಎನ್ನುವ ಒಂದು ಕೂಗಿದೆ. ಅದರ ಬಗ್ಗೆಯೂ ಕೂಡ ಈಗಾಗಲೇ ಆಯೋಗಗಳು ತೀರ್ಮಾನ ನೀಡಿರುವ ಹಿನ್ನೆಲೆಯಲ್ಲಿ ಅದನ್ನೂ ಕೂಡ ಸಮಗ್ರವಾಗಿ ಅಧ್ಯಯನ ಮಾಡಿ ಎಲ್ಲರ ಮುಂದಿಟ್ಟು ಒಳ್ಳೆಯ ತೀರ್ಮಾನ ಮಾಡಲು ಸರ್ಕಾರ ಮುಂದಾಗಲಿದೆ. ಮುಂಬರುವ ದಿನಗಳಲ್ಲಿ ಸರ್ಕಾರ ಆ ನಿಟ್ಟಿನಲ್ಲಿಯೂ ಎಸ್ಸಿ ಎಸ್ಟಿ ಒಳಮೀಸಲಾತಿಗೂ ಕೂಡ ಎಲ್ಲರೊಂದಿಗೆ ಚರ್ಚಿಸಿ, ಯಾವುದೇ ಸಮಾಜಕ್ಕೆ ಅನ್ಯಾಯವಾಗದಂತೆ, ಕೈಬಿಡದಂತೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಎಲ್ಲಾ ಪಕ್ಷಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು.
"ಇದಲ್ಲದೆ ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ನಡೆಯುತ್ತಿರುವ ಚರ್ಚೆ ಬಗ್ಗೆಯೂ ವರದಿಗಳನ್ನು ಆಧರಿಸಿ ಆಯಾ ಸಮಾಜಕ್ಕೆ ನ್ಯಾಯ ದೊರಕಿಸಲು ಸರ್ಕಾರ ಮುಂದಾಗಲಿದೆ. ಈಗಿರುವ ಯಾವುದೇ ಮೀಸಲಾತಿ ಕಡಿಮೆಯಾಗುವುದಿಲ್ಲ. ರಾಜ್ಯದಲ್ಲಿ ಶೇ 50 ರಷ್ಟು ಮೀಸಲಾತಿ ಇದ್ದು, ಎಸ್ಸಿ ಎಸ್ಟಿ ಪ್ರವರ್ಗ 1, 2 ಎ, ಮರು ಬಿ ಯಾರಿಗೂ ಮೀಸಲಾತಿ ಪ್ರಮಾಣ ಕಡಿಮೆಯಾಗುವುದಿಲ್ಲ. ಇದು ಶೇ 50 ಕ್ಕಿಂತಲೂ ಜಾಸ್ತಿ ಇರುವವರಿಗೆ ನೀಡುವ ಮೀಸಲಾತಿ. ಅದೇ ನ್ಯಾ. ನಾಗಮೋಹನ್ ದಾಸ್ ಸಮಿತಿ ಹೇಳಿದೆ. ಅದನ್ನೇ ನಾವು ಮಾಡುತ್ತಿದ್ದೇವೆ" ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಯಾರಿಗೂ ಅನ್ಯಾಯವಾಗದಂತೆ ಮೀಸಲಾತಿ
"ಆರ್ಥಿಕವಾಗಿ ಹಿಂದುಳಿದವರಿಗೆ ನೀಡಿರುವ ಶೇ 10 ರಷ್ಟು ಮೀಸಲಾತಿಯನ್ನು ಕಾನೂನಿನ ಪ್ರಕಾರ ಮೀಸಲಾತಿ ಇಲ್ಲದಿರುವ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ನೀಡಲು ಈಗಾಗಲೇ ತೀರ್ಮಾನ ಮಾಡಲಾಗಿದೆ. ಆದರೆ ಅದು ಸರ್ವೋಚ್ಚ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ಅದಾದ ಕೂಡಲೇ ಆದೇಶದನ್ವಯ ಅನುಷ್ಠಾನ ಮಾಡಲಾಗುವುದು. ಯಾರಿಗೂ ಅನ್ಯಾಯವಾಗದಂತೆ ಮೀಸಲಾತಿ ನೀಡುವುದೇ ನಿಜವಾದ ನ್ಯಾಯ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ" ಎಂದರು.

ಸಂವಿಧಾನದ ಅನುಸೂಚಿ 9ರಲ್ಲಿ ವಿನಾಯಿತಿ
"ತಮಿಳುನಾಡು ಸರ್ಕಾರ 1994 ರಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಅದನ್ನು ಸಂವಿಧಾನದ ಅನುಸೂಚಿ 9 ರಲ್ಲಿ ಬಂದ ನಂತರ 2007 ರಲ್ಲಿ ಮತ್ತೊಂದು ತೀರ್ಪು ಬಂದಿದೆ. ಅನುಸೂಚಿ 9ರ ಪ್ರಕಾರ ಮೂಲಭೂತ ಹಕ್ಕುಗಳಿಗೆ ಚ್ಯುತಿಯಾದರೆ ಅದಕ್ಕೆ ನ್ಯಾಯಾಂಗದ ವಿನಾಯತಿ ನೀಡಬೇಕೆಂದಿದೆ. ಪಶ್ಚಿಮ ಬಂಗಾಲದಲ್ಲಿ 1950 ರಲ್ಲಿ ಭೂ ಸುಧಾರಣಾ ಕಾಯ್ದೆ ಬಂದಾಗ ಸರ್ವೋಚ್ಚ ನ್ಯಾಯಾಲಯ ಕಾಯ್ದೆಯನ್ನು ರದ್ದು ಮಾಡಿತು. ಆ ಸಂದರ್ಭದಲ್ಲಿ ಭೂ ಸುಧಾರಣಾ ಕಾಯ್ದೆ ಮತ್ತು ರೈತರಿಗೆ ನ್ಯಾಯ ಕೊಡಿಸುವ ಸಲುವಾಗಿ ಮೂಲಭೂತ ಹಕ್ಕು ಎಂದು ಪರಿಗಣಿಸಿ ಅನುಸೂಚಿ 9 ನ್ನು ತರಲಾಯಿತು. ಕೇವಲ ಮೀಸಲಾತಿಗೆ ಮಾತ್ರವಲ್ಲ ಹಲವಾರು ವಿಚಾರಗಳು ಇದರಲ್ಲಿ ಬರುತ್ತದೆ. 1994 ರಿಂದ ಈವರೆಗೆ ವಿನಾಯಿತಿ ದೊರೆತಿದೆ. ಈಗಲೂ ಕೂಡ ಅದರ ಬಗ್ಗೆ ತೀರ್ಪು ಹೊರಬಂದಿಲ್ಲ.
"ಇವುಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿ ಈ ವಿಚಾರದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಸಾಮರಸ್ಯ ಮೂಡಬೇಕೆಂಬ ಕಾರಣದಿಂದ ಹಾಗೂ ಕಾನೂನು ಮತ್ತು ಸಂವಿಧಾನಾತ್ಮಕವಾದ ವಿಚಾರ ಇದಾಗಿರುವುದರಿಂದ ಸರ್ವ ಪಕ್ಷ ಸಭೆಯಲ್ಲಿ ಚರ್ಚೆ ಮಾಡಿ, ಸರ್ವಸಮ್ಮತದಿಂದ ತೀರ್ಮಾನ ಮಾಡಲಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
(ಒನ್ಇಂಡಿಯಾ ಸುದ್ದಿ)












Click it and Unblock the Notifications