ನಿಮ್ಮದು ಅತಿವೃಷ್ಟಿ ಪೀಡಿತ ತಾಲೂಕಾ? ಇಲ್ಲಿದೆ ಮಾಹಿತಿ!
ಬೆಂಗಳೂರು, ಸೆ. 11: ಆಗಸ್ಟ್ ತಿಂಗಳಲ್ಲಿ ಸುರಿದ ಅತಿವೃಷ್ಟಿ ಹಾಗೂ ಪ್ರವಾಹ ಹಿನ್ನೆಲೆಯಲ್ಲಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಸಂಬಂಧ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಅಧಿಕೃತ ಆದೇಶದಲ್ಲಿ ಮುಂಗಾರು ಋತುವಿನ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾಮಳೆ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಕೃಷ್ಣಾ ಕಣಿವೆ ಜಲಾಶಯಗಳು ತುಂಬಿ ಹರಿದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಅದೇ ವೇಳೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಪ್ರವಾಹ ಕಂಡು ಬಂದಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಜೀವ ಹಾನಿ, ಮನೆ ಹಾನಿ, ಬೆಳೆ ಹಾನಿ ಹಾಗೂ ಸಾರ್ವಜನಿಕ ಮೂಲಸೌಕರ್ಯಗಳು ಹಾನಿಯಾಗಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ಆಗಸ್ಟ್ 2020ರ ತಿಂಗಳಲ್ಲಿ ಅತಿವೃಷ್ಟಿ, ಪ್ರವಾಹ ಪೀಡಿತ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಟಿ ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶಿಸಲಾಗಿದೆ.
ಅತಿವೃಷ್ಟಿ, ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಿದ ತಾಲೂಕುಗಳಲ್ಲಿ ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾದ ಆದೇಶ ಮತ್ತು ಸುತ್ತೋಲೆಗಳಲ್ಲಿನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರಿಹಾರ ಕಾರ್ಯಗಳನ್ನು ಜಿಲ್ಲಾಡಳಿತಗಳು ಕೈಗೊಳ್ಳಬೇಕೆಂದು ಸರ್ಕಾರ ಆದೇಶಿಸಿದೆ.

ಬರಪೀಡಿತ ತಾಲೂಕುಗಳು
ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ ತಾಲೂಕು, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕು, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಮೈಸೂರು ಜಿಲ್ಲೆಯ ಹುಣಸೂರು, ಕೆ.ಆರ್. ನಗರ, ಮೈಸೂರು, ಪಿರಿಯಾಪಟ್ಟಣ ತಾಲೂಕುಗಳು, ಬಳ್ಳಾರಿ ಜಿಲ್ಲೆಯ ಹಗಡಲಿ, ಹೊಸಪೇಟೆ, ಹಗರಿ ಬೊಮ್ಮನಹಳ್ಳಿ, ಸಿರಗುಪ್ಪ, ಹರಪ್ಪನಹಳ್ಳಿ, ಕಂಪ್ಲಿ ತಾಲೂಕುಗಳು, ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ, ಕಾರಟಗಿ ತಾಲೂಕುಗಳು, ರಾಯಚೂರು ಜಿಲ್ಲೆಯ ದೇವ ದುರ್ಗ, ಲಿಂಗಸುಗೂರು, ಮಾನ್ವಿ, ರಾಯಚೂರು, ಸಿಂಧನೂರು ತಾಲೂಕುಗಳು.
ಕಲಬುರಗಿ ಜಿಲ್ಲೆಯ ಅಫ್ಜಲ್ಪುರ, ಆಳಂದ, ಚಿತ್ತಾಪುರ, ಕಲಬುರಗಿ, ಜೇವರ್ಗಿ, ಸೇಡಂ, ಕಾಳಗಿ, ಕಮಲಾಪುರ, ಶಹಾಬಾದ್ ತಾಲೂಕುಗಳು, ಯಾದಗಿರಿ ಜಿಲ್ಲೆಯ ಶಹಾಪುರ, ಹುಣಸಗಿ, ಶೋರಾಪುರ, ವಡಗೇರಾ, ಯಾದಗಿರಿ ತಾಲೂಕುಗಳು, ಬೀದರ್ ಜಿಲ್ಲೆಯ ಔರಾದ್, ಬೀದರ್, ಬಾಲ್ಕಿ, ಬಸವಕಲ್ಯಾಣ, ಹುಮ್ನಾಬಾದ್, ಬೆಳಗಾವಿ ಜಿಲ್ಲೆಯ ಅಥಣಿ, ಬೈಲಹೊಂಗಲ, ಬೆಳಗಾವಿ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ಕಾಗವಾಡ, ಖಾನಾಪುರ, ಕಿತ್ತೂರು, ಮೂಡಲಗಿ, ನಿಪ್ಪಾಣಿ, ರಾಯಭಾಗ, ರಾಮದುರ್ಗ, ಸವದತ್ತಿ ತಾಲೂಕುಗಳು.
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಬೀಳಗಿ, ಗುಳೇದಗುಡ್ಡ, ಹುನಗುಂದ, ಇಳಕಲ್, ಜಮಖಂಡಿ, ಮುಧೋಳ, ರಬಕವಿ ಬನಹಟ್ಟಿ ತಾಲೂಕುಗಳು, ವಿಜಯಪುರ ಜಿಲ್ಲೆಯ ಬಬಲೇಶ್ವರ, ಕೋಲ್ಹಾರ, ಮುದ್ದೇಬಿಹಾಳ,ನಿಡಗುಂದಿ ತಾಲೂಕುಗಳು,ಗದಗ ಜಿಲ್ಲೆಯ ಮುಂಡರಗಿ, ನರಗುಂದ, ರೋಣ, ಶಿರಹಟ್ಟಿ ತಾಲೂಕುಗಳು, ಹಾವೇರಿ ಜಿಲ್ಲೆಯ ಹಾನಗಲ್, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು, ರಟ್ಟಿಹಳ್ಳಿ, ಶಿಗ್ಗಾಂವ ತಾಲೂಕು, ಧಾರವಾಡ ಜಿಲ್ಲೆ ಯ ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ಕಲಘಟಗಿ, ಕುಂದಗೋಳ, ನವಲಗುಂದ ತಾಲೂಕುಗಳು.

ಮಲೆನಾಡಿನ ಜಿಲ್ಲೆಗಳು
ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ ತಾಲೂಕುಗಳು, ಹಾಸನ ಜಿಲ್ಲೆಯ ಆಲೂರು, ಅರಕಲಗೂಡು, ಬೇಲೂರು, ಹಾಸನ, ಸಕಲೇಶಪುರ ತಾಲೂಕುಗಳು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ, ತರೀಕೆರೆ ತಾಲೂಕುಗಳು, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ತಾಲೂಕುಗಳು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಮಂಗಳೂರು, ಮೂಡಬಿದಿರೆ, ಪುತ್ತೂರು ತಾಲೂಕುಗಳು, ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ, ಹೆಬ್ರಿ, ಕಾಪು, ಕಾರ್ಕಳ, ಕುಂದಾಪುರ, ಉಡುಪಿ ತಾಲೂಕುಗಳು.
ಉತ್ತರ ಕನ್ನಡ ಜಿಲ್ಲೆಅಂಕೋಲ, ಭಟ್ಕಳ, ಹೊನ್ನಾವರ, ಕುಮಟಾ, ಮುಂಡಗೋಡ, ಸಿದ್ದಾಪುರ, ಶಿರಸಿ, ಸೂಪಾ, ಯಲ್ಲಾಪುರ ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದೆ.

8,071 ಕೋಟಿ ರೂ. ನಷ್ಟ ಪರಿಹಾರಕ್ಕೆ ಮನವಿ
ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 14 ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಘೋಷಿಸಲಾಗಿದ್ದು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ ತಲಾ ಒಂದು ತಾಲೂಕನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಎಂದು ಗುರುತಿಸಲಾಗಿದೆ.
ರಾಜ್ಯದಲ್ಲಿ ಈ ಬಾರಿಯ ಪ್ರವಾಹದಿಂದ ಒಟ್ಟಾರೆ 8071 ಕೋಟಿ ರೂ.ಗಳ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಅಧ್ಯಯನ ತಂಡಕ್ಕೆ ಮಾಹಿತಿ ಕೊಟ್ಟಿದ್ದರು. 2018 ಮತ್ತು 2019ರಲ್ಲಿಯೂ ರಾಜ್ಯದಲ್ಲಿ ಭಾರಿ ಪ್ರವಾಹ ಮತ್ತು ಭೂ ಕುಸಿತ ಉಂಟಾಗಿ 22 ಜಿಲ್ಲೆಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಬಾರಿಯ ಪ್ರವಾಹದಲ್ಲಿ ಸುಮಾರು 4.03 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ವಿದ್ಯುತ್ ಟ್ರಾನ್ಸ್ ಫಾರ್ಮರ್ಗಳು, ಶಾಲೆ, ಅಂಗನವಾಡಿ ಮತ್ತು ಸರ್ಕಾರಿ ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ವಿವರಿಸಿದ್ದರು.
Recommended Video

ಸಿಎಂ ವೈಮಾನಿಕ ಸಮೀಕ್ಷೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಳೆದ ಆಗಸ್ಟ್ 25ರಂದು ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸಿದ್ದರು. ಬಳಿಕ ಬೆಳಗಾವಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದಿದ್ದರು.












Click it and Unblock the Notifications