Government Employee: ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆ, ಯಾವುದೇ ಕ್ಷಣದಲ್ಲಿ ಆದೇಶ ಪ್ರಕಟ
ಬೆಂಗಳೂರು, ನವೆಂಬರ್ 27: ಕರ್ನಾಟಕದ ಸರ್ಕಾರಿ ನೌಕರರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ತುಟ್ಟಿಭತ್ಯೆ (ಡಿಎ) ಏರಿಕೆ ಕುರಿತು ಅಂತಿಮ ತೀರ್ಮಾನವನ್ನು ಕೈಗೊಂಡಿದ್ದು, ಇಂದು ಸಂಜೆ ಅಥವ ನಾಳೆ ಅಧಿಕೃತ ಆದೇಶ ಪ್ರಕಟವಾಗಲಿದೆ. ಕೇಂದ್ರ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ತನ್ನ ನೌಕರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಏರಿಕೆ ಮಾಡಿತ್ತು. ರಾಜ್ಯ ಸರ್ಕಾರ ಈಗ ಈ ಕುರಿತು ತೀರ್ಮಾನವನ್ನು ಕೈಗೊಂಡಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಕುರಿತು ಪೋಸ್ಟ್ನಲ್ಲಿ ಮಾಹಿತಿ ನೀಡಿದೆ. 'ಇದೀಗ ಬಂದ ಸುದ್ದಿ ಮಾನ್ಯ ಮುಖ್ಯಮಂತ್ರಿಗಳು 01-08-2024 ರಿಂದ ಶೇ 2.25 ತುಟ್ಟಿ ಭತ್ಯೆ ಹೆಚ್ಚಳ ಮಾಡಲು ಆದೇಶವನ್ನು ನೀಡಿರುತ್ತಾರೆ ಎಂದು ತಿಳಿದು ಬಂದಿದೆ. ಅಧಿಕೃತ ಆದೇಶ ಇಂದು ಅಥವಾ ನಾಳೆ ಬರುವ ಸಾಧ್ಯತೆ ಇದೆ' ಎಂದು ಪೋಸ್ಟ್ನಲ್ಲಿ ಮಾಹಿತಿ ನೀಡಲಾಗಿದೆ.

ಸಂಪ್ರದಾಯದಂತೆ ಕೇಂದ್ರ ಸರ್ಕಾರ ಡಿಎ ಏರಿಕೆ ಮಾಡಿದ ಬಳಿಕ ರಾಜ್ಯ ಸರ್ಕಾರವು ಡಿಎ ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸುತ್ತದೆ. ಕೇಂದ್ರ ಸರ್ಕಾರ ಅಕ್ಟೋಬರ್ನಲ್ಲಿಯೇ ಡಿಎ ಹೆಚ್ಚಳ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಡಿಎ ಹೆಚ್ಚಳದ ಕುರಿತು ಆದೇಶವನ್ನು ಇನ್ನೂ ಹೊರಡಿಸಿರಲಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಕೆ ಮಾಡಿತ್ತು.
ಅಭಿನಂದನೆ ಸಲ್ಲಿಸಿದ ಸಂಘ: ಡಿಎ ಏರಿಕೆ ಕುರಿತು ತೀರ್ಮಾನ ಕೈಗೊಂಡ ಕರ್ನಾಟಕ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದೆ.
ಪೋಸ್ಟ್ನಲ್ಲಿ, "ತುಟ್ಟಿಭತ್ಯೆ ಶೇ. 2.25% ಹೆಚ್ಚಳದ ಆದೇಶ. ಸಮಸ್ತ ಅಧಿಕಾರಿ-ನೌಕರರ ಬಾಂಧವರೇ...ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01-08-2024 ರಿಂದ ಶೇ. 2.25% ಹೆಚ್ಚಿಸಲು ಮಾನ್ಯ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಇಂದು ಆದೇಶ ಹೊರಡಿಸುವ ನಿರೀಕ್ಷೆ ಇದೆ' ಎಂದು ಹೇಳಿದೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹಾಗೂ ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ರಾಜ್ಯ ಸರ್ಕಾರದ ಅರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಧನ್ಯವಾದಗಳು' ಎಂದು ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಹೆಸರಿನಲ್ಲಿ ಪೋಸ್ಟ್ ಹಾಕಲಾಗಿದೆ.
ಸಂಪ್ರದಾಯದಂತೆ ಕೇಂದ್ರದಲ್ಲಿ ಡಿಎ ಹೆಚ್ಚಳ ಮಾಡಿದ ಬಳಿಕ ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ಡಿಎ ಏರಿಕೆ ಮಾಡುತ್ತದೆ. ರಾಜ್ಯ ಸರ್ಕಾರ ರಚನೆ ಮಾಡಿದ್ದ ರಾಜ್ಯ 7ನೇ ವೇತನ ಆಯೋಗ ಸಹ ತನ್ನ ಶಿಫಾರಸಿನಲ್ಲಿ ರಾಜ್ಯ ಸರ್ಕಾರಕ್ಕೆ ಇದೇ ಮಾದರಿ ಮುಂದುವರೆಸುವಂತೆ ಶಿಫಾರಸು ಮಾಡಿತ್ತು.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 16ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿತ್ತು. ನೌಕರರಿಗೆ ಶೇ. 3ರಷ್ಟು ಹೆಚ್ಚುವರಿ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರಕ್ಕೆ ಸಂಪುಟ ಅನುಮೋದನೆ ನೀಡಿತ್ತು. ಇದರಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಉಡುಗೊರೆ ಸಿಕ್ಕಿತ್ತು. ಕೇಂದ್ರದಲ್ಲಿ ತುಟ್ಟಿಭತ್ಯೆ ಏರಿಕೆಯಾದ ಬಳಿಕ ರಾಜ್ಯದಲ್ಲಿ ತುಟ್ಟಿಭತ್ಯೆ ಯಾವಾಗ ಹೆಚ್ಚಳ ಎಂದು ಸರ್ಕಾರಿ ನೌಕರರು ಕಾದು ಕುಳಿತಿದ್ದರು.












Click it and Unblock the Notifications