ಮುಷ್ಕರ ಅಂತ್ಯಗೊಳಿಸಿದ ಕರ್ನಾಟಕ ಸರ್ಕಾರಿ ನೌಕರರು
7ನೇ ವೇತನ ಆಯೋಗದ ಶಿಫಾರಸು ಜಾರಿ, ಹಳೆಯ ಪಿಂಚಣಿ ವ್ಯವಸ್ಥೆ ಅನುಷ್ಠಾನ ಸೇರಿ ಹಲವು ಬೇಡಿಕೆಗಳ ಈಡೇರಿಕೆ ಮಾಡುವಂತೆ ಮುಷ್ಕರ ಆರಂಭಿಸಿರುವ ರಾಜ್ಯ ಸರ್ಕಾರಿ ನೌಕರರು ಲಿಖಿತ ಆದೇಶ ಬರುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನೆ ಮುಂದುವರೆಸಿದ್ದರು.
ಬೆಂಗಳೂರು, ಮಾರ್ಚ್ 1: 7ನೇ ವೇತನ ಆಯೋಗದ ಶಿಫಾರಸು ಅನುಷ್ಠಾನ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರ ಹಮ್ಮಿಕೊಂಡಿದ್ದ ಕರ್ನಾಟಕ ಸರ್ಕಾರಿ ನೌಕರರು ತಮ್ಮ ಮುಷ್ಕರವನ್ನು ಅಂತ್ಯಗೊಳಿಸಿದ್ದಾರೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸರ್ಕಾರಿ ನೌಕರರ ವೇತನವನ್ನು ಶೇಕಡ 17ರಷ್ಟು ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ ಮೇಲೆ ಸರ್ಕಾರಿ ನೌಕರರು ತಮ್ಮ ಮುಷ್ಕರವನ್ನು ಅಂತ್ಯಗೊಳಿಸಿದ್ದಾರೆ.

7ನೇ ವೇತನ ಆಯೋಗದ ಶಿಫಾರಸು ಜಾರಿ, ಹಳೆಯ ಪಿಂಚಣಿ ವ್ಯವಸ್ಥೆ ಅನುಷ್ಠಾನ ಸೇರಿ ಹಲವು ಬೇಡಿಕೆಗಳ ಈಡೇರಿಕೆ ಮಾಡುವಂತೆ ಮುಷ್ಕರ ಆರಂಭಿಸಿರುವ ರಾಜ್ಯ ಸರ್ಕಾರಿ ನೌಕರರು ಲಿಖಿತ ಆದೇಶ ಬರುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನೆ ಮುಂದುವರೆಸಿದ್ದರು. ಈಗ ವೇತನ ಹೆಚ್ಚಳದ ಭರವಸೆ ನೀಡಿದ ನಂತರ ಅವರು ತಮ್ಮ ಮುಷ್ಕರವನ್ನು ಅಂತ್ಯ ಮಾಡುವುದಾಗಿ ತಿಳಿಸಿದ್ದಾರೆ.
ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಹಣಕಾಸು ಅಧಿಕಾರಿಗಳೊಂದಿಗೆ ಸಹ ಚರ್ಚಿಸಿ, ರಾಜ್ಯ ಸರ್ಕಾರಿ ನೌಕರರಿಗೆ , ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಆದೇಶಿಸಲಾಗಿದೆ. ಎನ್.ಪಿ.ಎಸ್ ಕುರಿತಂತೆ ಸಮಿತಿಯೊಂದನ್ನು ರಚಿಸಿ, ಅದರ ವರದಿಯನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ ಶೇಕಡ 17ರಷ್ಟು ಹೆಚ್ಚಳವನ್ನು 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಸರ್ಕಾರ ಆದೇಶ ಹೊರಡಿಸಿದನ್ನು ಒಪ್ಪಿದ್ದೇವೆ. ಈ ಹಿನ್ನೆಲೆ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರವನ್ನು ವಾಪಸ್ ಪಡೆಯುತ್ತೇವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಸರ್ಕಾರಿ ನೌಕರರ ವೇತನ ಸಂಬಂಧ ಸರ್ಕಾರ ಎರಡು ಆದೇಶ ಹೊರಡಿಸಿದೆ. ಸರ್ಕಾರಿ ನೌಕರರ ವೇತನ ಶೇಕಡಾ 17ರಷ್ಟು ಹೆಚ್ಚಳ ಮತ್ತು ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ಬಗ್ಗೆ ಪರಿಶೀಲನೆ ಸಂಬಂಧ ಆದೇಶ ಹೊರಡಿಸಿದ್ದು, ಎನ್ಪಿಎಸ್ ನಿವೃತ್ತ ನೌಕರರು ಸೇರಿದಂತೆ 15 ಲಕ್ಷ ನೌಕರರಿಗೆ ಅನ್ವಯವಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ.
ಇದಕ್ಕೂ ಮೊದಲು ಸರ್ಕಾರದ ಭರವಸೆಯನ್ನು ನಾನು ಒಪ್ಪುವುದಿಲ್ಲ. ಸರ್ಕಾರದ ಅಧಿಕೃತ ಆದೇಶ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದರು. ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ ನೋಡೋಣ. ಸರ್ಕಾರ ಆದೇಶದ ಪ್ರತಿ ಸಿಕ್ಕಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಈಗ ಅಧಿಕಾರಿಗಳು ಸಭೆ ಆಹ್ವಾನ ನೀಡಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಬುಧವಾರ ಬೆಳಗ್ಗೆ ಹೇಳಿದರು. ಈಗ ಎಲ್ಲ ಸರ್ಕಾರಿ ನೌಕರರ ಸಂಘದ ಒಮ್ಮತ ನಿರ್ಧಾರಕ್ಕೆ ಬಂದಿದ್ದು, ತಮ್ಮ ಮುಷ್ಕರ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾಗುವುದಾಗಿ ಹೇಳಿದ್ದಾರೆ.
ಸರ್ಕಾರಿ ನೌಕರರ ಮುಷ್ಕರದಿಂದ ರಾಜ್ಯದಾದ್ಯಂತ ಹಲವಾರು ಸರ್ಕಾರಿ ಕಚೇರಿಗಳು ನೌಕರರಿಲ್ಲದೆ ಬಣ ಬಣ ಎನ್ನುತ್ತಿದ್ದವು. ಪರಿಸ್ಥಿತಿ ಅರಿತು ಸಿಎಂ ಬೊಮ್ಮಾಯಿ ಅವರು ಬುಧವಾರ ಬೆಳಗ್ಗೆಯೇ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸರ್ಕಾರಿ ನೌಕರರ ವೇತನವನ್ನು ಶೇಕಡ 17ರಷ್ಟು ಹೆಚ್ಚಳ ಮಾಡಲು ಭರವಸೆ ನೀಡಿದ್ದರು.
ಸರ್ಕಾರಿ ನೌಕರರ ಮುಷ್ಕರ ಅಂತ್ಯಗೊಂಡ ಬೆನ್ನಲ್ಲೇ ಸರ್ಕಾರಿ ನೌಕರರಲ್ಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಅವರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಶೇಕಡ 17ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಬಾರದಿತ್ತು. ಇನ್ನೂ ಹೋರಾಟ ಮುಂದುವರೆಸಿದ್ದರೆ ಶೇಕಡ 25ರಷ್ಟು ವೇತನ ಹೆಚ್ಚಳವಾಗುವ ಸಾಧ್ಯತೆ ಇತ್ತು ಎಂದು ಹೇಳಿದ್ದಾರೆ. ವೇತನ ಹೆಚ್ಚಳಕ್ಕಿಂತ ಒಪಿಎಸ್ ನಮ್ಮ ಪ್ರಮುಖ ಬೇಡಿಕೆಯಾಗಿತ್ತು. ಎನ್ಪಿಎಸ್ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವು ಎಂದು ಅವರು ಹೇಳಿದ್ದಾರೆ.











Click it and Unblock the Notifications