ಜೂನ್ 4ರಂದು ಕರ್ನಾಟಕದ ಸರ್ಕಾರಿ ನೌಕರರ ಪ್ರತಿಭಟನೆ
ಬೆಂಗಳೂರು, ಜೂನ್ 02 : ಕರ್ನಾಟಕದ ಸರ್ಕಾರಿ ನೌಕರರು ಜೂನ್ 4ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಅಂದು ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಈ ಕುರಿತು ಮಾಹಿತಿ ನೀಡಿದೆ. ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದ ನೌಕರ ಕಾರ್ಮಿಕ ವಿರೋಧಿ, ನೌಕರ ವಿರೋಧಿ ತೀರ್ಮಾನಗಳನ್ನು ಖಂಡಿಸಲು ಪ್ರತಿಭಟನೆ ನಡೆಸಲಾಗುತ್ತಿದೆ.
ಸರ್ಕಾರ ವಿವಿಧ ಇಲಾಖೆಗಳನ್ನು ವಿಲೀನ ಮಾಡಲು ಹೊರಟಿರುವುದು, ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗೆ ಏರಿಕೆ ಮಾಡಿರುವುದು ಸೇರಿದಂತೆ ಸರ್ಕಾರದ ಕಾರ್ಮಿಕ ಮತ್ತು ನೌಕರ ವಿರೋಧಿ ತೀರ್ಮಾನಗಳನ್ನು ಖಂಡಿಸಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.

ಜೂನ್ 4ರ ಗುರುವಾರ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗಲಿದ್ದಾರೆ. ಆದರೆ, ಎಲ್ಲರೂ ಅಂದು ಕೈಗೆ ಕಪ್ಪುಪಟ್ಟಿ ಧರಿಸಿ ಕೆಲಸ ಮಾಡಲಿದ್ದಾರೆ. ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಗಳ ಕುರಿತು ಮನವಿಯನ್ನು ಕೊಡುವ ನಿರೀಕ್ಷೆ ಇದೆ.
ಕರ್ನಾಟಕ ಸರ್ಕಾರ ಕೈಗಾರಿಕೆ ಹಾಗೂ ಇನ್ನಿತರ ಉದ್ಯಮ ಸಂಸ್ಥೆಯಲ್ಲಿ ದುಡಿಯುವ ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು. ಮೇ 22ರಿಂದ ಆಗಸ್ಟ್ 21ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಕಾರ್ಮಿಕ ಇಲಾಖೆ ಹೇಳಿತ್ತು.
ಸರ್ಕಾರದ ವಿವಿಧ ಇಲಾಖೆಗಳನ್ನು ವಿಲೀನಗೊಳಿಸುವ ಪ್ರಸ್ತಾಪವೂ ಸರ್ಕಾರದ ಮುಂದಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಉಪ ಸಮಿತಿಯನ್ನು ರಚನೆ ಮಾಡಲಾಗಿದೆ. ಸರ್ಕಾರಿ ನೌಕರರು ಸರ್ಕಾರ ಈ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications