ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಎರಡು ಇಲಾಖೆಗಳು ವಿಲೀನ, ವಿವರಗಳು
ಬೆಂಗಳೂರು, ಡಿಸೆಂಬರ್ 15: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ಆದೇಶವನ್ನು ಹೊರಡಿಸಿದೆ. ವಿಲೀನಗೊಂಡಿರುವ ಇಲಾಖೆಗೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇವರನ್ನು ಮುಖ್ಯಸ್ಥರನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, ದಿನಕರನ್ ವೈ.ಸರ್ಕಾರದ ಅಧೀನ ಕಾರ್ಯದರ್ಶಿ (ಪ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಭಾವೈಪ ಮತ್ತು ಸಮನ್ವಯ) ಆದೇಶವನ್ನು ಹೊರಡಿಸಿದ್ದಾರೆ. ಸರ್ಕಾರದ ಕಡತ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇವರ ಪತ್ರ ದಿನಾಂಕ 29/10/2024 ಉಲ್ಲೇಖಿಸಿದ್ದಾರೆ.

ಆದೇಶದ ವಿವರಗಳು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಎಂದು ಪದನಾಮೀಕರಿಸಿ ಆದೇಶಿಸಿದೆ ಎಂದು ಆದೇಶ ತಿಳಿಸಿದೆ. ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ದಿನಾಂಕ 06/12/2024ರಲ್ಲಿ ನೀಡಿರುವ ಸಹಮತಿ ಮೇರೆಗೆ ಮತ್ತು ಸಚಿವ ಸಂಪುಟದ ಅನುಮೋದನೆಯನ್ವಯ ಹೊರಡಿಸಲಾಗಿದೆ.
ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇವರನ್ನು ಆಯುಕ್ತರು, ಆಹಾರ, ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸತಕ್ಕದ್ದು ಎಂದು ಹೇಳಿದೆ.
ಈ ಆದೇಶದ ಹಿನ್ನೆಲೆಯಲ್ಲಿ, ಉದ್ಭವಿಸಬಹುದಾದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆಯ ಬದಲಾವಣೆಗಳಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳ ರಚನೆ, ಕಾಯ್ದೆ/ನಿಯಮ ಹಾಗೂ ಇನ್ನಿತರೆ ವಿಷಯಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ಸಂಬಂಧ ಸೂಕ್ತ ಪ್ರಸ್ತಾವನೆಗಳನ್ನು ತಕ್ಷಣವೇ ಸರ್ಕಾರಕ್ಕೆ ಸಲ್ಲಿಸಲು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರಿಗೆ ಸೂಚಿಸಿದೆ.
ಪ್ರಸ್ತಾವನೆ ಏನಿತ್ತು?: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಔಷಧ ನಿಯಂತ್ರಣ ಇಲಾಖೆ ಒಂದು ಸ್ವತಂತ್ರ ಇಲಾಖೆಯಾಗಿ 1956 ರಿಂದ ಕಾರ್ಯನಿರ್ವಹಿಸುತ್ತಿದೆ. ಔಷಧ ನಿಯಂತ್ರಕರು ಇದರ ಮುಖ್ಯಸ್ಥರಾಗಿ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ 1940 ಮತ್ತು ನಿಯಮಾವಳಿಗಳು ಹಾಗೂ ಔಷಧಿಗಳಿಗೆ ಸಂಬಂಧಪಟ್ಟಂತೆ ಇತರೆ ನಿಯಮಗಳನ್ನು ನಿಯಂತ್ರಣ ಕ್ರಮಗಳನ್ನು ಕೈಗೊಂಡು ಉತ್ತಮ ಗುಣಮಟ್ಟದ ಸುರಕ್ಷತಾ ಹಾಗೂ ಪರಿಣಾಮಕಾರಿ ಔಷಧಿಗಳನ್ನು ನಿಯಂತ್ರಿತ ಬೆಲೆಗಳಲ್ಲಿ ಗ್ರಾಹಕರಿಗೆ ದೊರಕುವಂತ ಮಾಡುವುದೇ ಔಷಧ ನಿಯಂತ್ರಣ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ.
ಅಲ್ಲದೇ, ಸದರಿ ಇಲಾಖೆಯಲ್ಲಿ ಆಡಳಿತ ಮತ್ತು ಅಮಲುಜಾರಿ, ಔಷಧ ಪರೀಕ್ಷಾ ಪ್ರಯೋಗಾಲಯ ಹಾಗೂ ಫಾರ್ಮಸಿ ಶಿಕ್ಷಣ ವಿಭಾಗಗಳು ಸಹ ಕಾರ್ಯನಿರ್ವಹಿಸುತ್ತಿರುತ್ತವೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ಕ 2006ರ ಪ್ರಕಾರ ಕಾರ್ಯನಿರ್ವಹಿಸುತ್ತಿದ್ದು, ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರು ಹಾಗೂ ಅವರ ಅಧೀನದಲ್ಲಿ ಜಿಲ್ಲಾ ಮಟ್ಟದಲ್ಲಿ ಅಂಕಿತಾಧಿಕಾರಿಗಳು, ಆಹಾರ ಸುರಕ್ಷತಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
ಅಲ್ಲದೇ, 4 ವಿಭಾಗೀಯ ಆಹಾರ ಪ್ರಯೋಗಾಲಯಗಳು ಅಂದರೆ ಬೆಂಗಳೂರು, ಬೆಳಗಾವಿ, ಕಲಬುರಗಿ ಹಾಗೂ ಮೈಸೂರು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅದರಡಿಯಲ್ಲಿ ಮುಖ್ಯ ಆಹಾರ ವಿಶ್ಲೇಷಕರು, ಆಹಾರ ವಿಶ್ಲೇಷಕರು, ಕಿರಿಯ ಆಹಾರ ವಿಶ್ಲೇಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಆಯುಕ್ತಾಲಯ ಹಾಗೂ ಇದರಡಿಯಲ್ಲಿ ಬರುವ ಆಡಳಿತ ಕಚೇರಿಗಳಲ್ಲಿ ಸಹಾಯಕ ಆಡಳಿತಾಧಿಕಾರಿಗಳು, ಸಹಾಯಕ ಸಾಂಖ್ಯಿಕ ಅಧಿಕಾರಿಗಳು, ಕಚೇರಿ ಅಧೀಕ್ಷಕರು, ಪಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯದಲ್ಲಿ ಆಹಾರ ಕಲಬೆರಕೆ ತಡಗಟ್ಟುವುದು, ಉತ್ತಮ ಗುಣಮಟ್ಟದ ಆಹಾರ ದೊರೆಯುವಂತೆ ಮಾಡುವುದು ಹಾಗೂ ಪೌಷ್ಟಿಕಾಂಶಭರಿತ ಆಹಾರವನ್ನು ಸಾರ್ವಜನಿಕರಿಗೆ ತಲುಪುವಂತೆ ಕ್ರಮವಹಿಸುವ ಉದ್ದೇಶ ಹೊಂದಿರುತ್ತದೆ. ಆಹಾರ ಉದ್ಯಮಗಳ ತಯಾರಿಕೆ/ ಸಂಗ್ರಹ/ ವಿತರಣೆ/ ಮಾರಾಟಗಳಿಗೆ ಪರವಾನಿಗಿ ಮತ್ತು ನೋಂದಣಿ ನೀಡಲು ಕ್ರಮವಹಿಸುತ್ತದೆ. ಕ್ಷೇತ್ರ ಮಟ್ಟದಿಂದ ಸಮೀಕ್ಷಾ ಮತ್ತು ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಿ ಗುಣಮಟ್ಟದ ಬಗ್ಗೆ ಖಾತ್ರಿಪಡಿಸಿಕೊಂಡು ಗುಣಮಟ್ಟವಲ್ಲದ/ ಅಸುರಕ್ಷತೆ ಎಂದು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ.
ಜಮ್ಮು ಕಾಶ್ಮೀರ, ಗುಜರಾತ್, ಉತ್ತರ ಪ್ರದೇಶ, ಅಸ್ಸಾಂ, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈಗಾಗಲೇ ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗಳು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ರಾಜ್ಯದಲ್ಲಿಯೂ ಸಹ ಔಷಧ ನಿಯಂತ್ರಣ ಇಲಾಖೆ ಮತ್ತು ಆಹಾರ ಸುರಕ್ಷತೆ ಇಲಾಖೆಗಳನ್ನು ವಿಲೀನಗೊಳಿಸುವುದು ಅಗತ್ಯವಾಗಿರುತ್ತದೆ ಎಂದು ಹೇಳಿತ್ತು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಕಾರ್ಯವೈಖರಿಗಳು ಬಹುತೇಕ ಒಂದೇ ರೀತಿಯಲ್ಲಿದ್ದು, ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆಹಾರ ಹಾಗೂ ಔಷಧಿಗಳು ಲಭ್ಯವಾಗುವಂತೆ ಕಾರ್ಯನಿರ್ವಹಿಸುತ್ತಿವೆ. ಆದುದರಿಂದ, ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇವರ ಅಧೀನದಲ್ಲಿ ಔಷಧ ನಿಯಂತ್ರಣ ಇಲಾಖೆಯನ್ನು ವಿಲೀನಗೊಳಿಸುವುದರಿಂದ ಸಾರ್ವಜನಿಕರಿಗೆ ಇನ್ನು ಹೆಚ್ಚಿನ ಪರಿಣಾಮಕಾರಿಯಾಗಿ ಗುಣಾತ್ಮಕ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ. ಹಾಗಾಗಿ, ಔಷಧ ನಿಯಂತ್ರಣ ಇಲಾಖೆಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಲ್ಲಿ ವಿಲೀನಗೊಳಿಸಿ, ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಎಂದು ಮರು ಪದನಾಮೀಕರಿಸಿ, ಆಯುಕ್ತರನ್ನು ಇಲಾಖಾ ಮುಖ್ಯಸ್ಥರೆಂದು ಪರಿಗಣಿಸಲು ಹಾಗೂ ಎರಡು ಇಲಾಖೆಗಳ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಇಲಾಖಾ ಮುಖ್ಯಸ್ಮರ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಸಂಬಂಧದ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.
ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಕಾರ್ಯವೈಖರಿಗಳು ಬಹುತೇಕ ಒಂದೇ ರೀತಿಯಲ್ಲಿರುವುದರಿಂದ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಿ, ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಎಂದು ಮರು ಪದನಾಮೀಕರಿಸಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications