ಬಂದ್ ಆಚರಿಸಿದ ಸಾರ್ವಜನಿಕರಿಗೆ ಸಿಎಂ ಅಭಿನಂದನೆ! ಕಾರಣ ತಿಳಿಯಿರಿ
ಬೆಂಗಳೂರು: ಕಾವೇರಿ ನೀರಿಗಾಗಿ ತಮಿಳುನಾಡು ಹಿಡಿದಿರುವ ಹಠ ಮತ್ತು ತಮಿಳುನಾಡಿನ ಒತ್ತಡಕ್ಕೆ ಮಣಿದು ನೀರು ಬಿಡಲು ಆದೇಶ ಕೊಟ್ಟಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಅಲ್ಲದೆ ಬಂದ್ ಕೂಡ ಸಂಪೂರ್ಣ ಯಶಸ್ವಿಯಾಗಿದ್ದು ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅಂದಹಾಗೆ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕುತ್ತೇವೆ ಎಂದು ಮಾಹಿತಿ ನೀಡಿದರು. ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ನಡೆದ ಸಭೆ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ, ಇಂದು ಮಾಧ್ಯಮಗಳ ಜೊತೆಗೆ ಸಭೆಯ ಬಗ್ಗೆ ಮಾಹಿತಿ ಹಂಚಿಕೊಂಡರು.

ಸಾರ್ವಜನಿಕರಿಗೆ ಸಿಎಂ ಅಭಿನಂದನೆ!
ರಾಜ್ಯದಲ್ಲಿ ಶಾಂತಿಯುತ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರನ್ನು ಮತ್ತು ಸಂಘ ಸಂಸ್ಥೆಗಳನ್ನ ಅಭಿನಂದಿಸಿದ್ರು ಸಿಎಂ. ಹಾಗೇ ಎಲ್ಲೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಅಧಿಕಾರಿಗಳನ್ನು ಕೂಡ ಅಭಿನಂದಿಸಿದ್ದಾರೆ. ಮತ್ತೊಂದು ಕಡೆ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್ ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಗೇ ಅವರ ಅನುಭವದ ಆಧಾರದ ಮೇಲೆ ಕೆಲ ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆ ಪರಿಗಣಿಸಿ ಮುಂದಿನ ತೀರ್ಮಾನ ನಾವು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಇದೇ ವೇಳೆ ತಿಳಿಸಿದ್ದಾರೆ.
ಪರಿಣಿತರ ಸಲಹಾ ಸಮಿತಿ ರಚನೆ?
ಹಾಗೇ ಈ ಸಭೆಯಲ್ಲಿ ಪರಿಣಿತರ ಸಲಹಾ ಸಮಿತಿ ರಚನೆಗೆ ಸಲಹೆ ನೀಡಲಾಗಿದೆಯಂತೆ. ಈ ಮೂಲಕ ಮುಖ್ಯವಾಗಿ ರಾಜ್ಯ ನೀರಾವರಿಗೆ ಸಂಬಂಧಿಸಿದಂತೆ ಪರಿಣಿತರ ಸಲಹಾ ಸಮಿತಿಯು ಡಾಟಾ ಸಂಗ್ರಹ ಮಾಡಿ, ಸಲಹೆ ನೀಡುವ ಕಾರ್ಯ ಮಾಡಲಿ ಎಂದು ಸಲಹೆ ಕೇಳಿಬಂದಿದೆ. ಇದರಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹೊಸ ಸಮಿತಿ ರಚನೆ ಬಗ್ಗೆಯೂ ಮುನ್ಸೂಚನೆ ಸಿಕ್ಕಂತಾಗಿದೆ.
ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡು ಸಮಿತಿ ಮುಂದೆ ನಮ್ಮಲ್ಲಿ ನೀರು ಇಲ್ಲ. ಈ ಕಾರಣಕ್ಕೆ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3000 ಕ್ಯೂಸೆಕ್ ನೀಡಲು ಸೂಚಿಸಿದ್ದಾರೆ. ನಿರ್ವಹಣಾ ಮಂಡಳಿ & ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆ ಸೂಚಿಸಿದ್ದಾರೆ ಎಂದು ಸಭೆ ವೇಳೆ ಚರ್ಚಿಸಿದ ವಿಚಾರಗಳ ಬಗ್ಗೆಯೂ ಸಿಎಂ ತಿಳಿಸಿದರು.
ತಮಿಳುನಾಡಿನ ದಾಹ ನೀಗಿಸಲು ಐಡಿಯಾ!
ಮೇಕೆದಾಟು ಯೋಜನೆ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದ್ರೆ ಇಲ್ಲ. ಹೀಗಾಗಿ ತೀವ್ರವಾಗಿ ಇದನ್ನ ಮಂಡಿಸಬೇಕು ಎಂದು ಇಂದು ನಡೆದ ಸಭೆಯಲ್ಲಿ ಸಲಹೆ ನೀಡಲಾಗಿದೆಯಂತೆ. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ ಕುಡಿಯುವ ನೀರಿಗೆ ಅದನ್ನು ಬಳಸಲಾಗುವುದು. ಹಾಗೇ ಸಂಕಷ್ಟ ಎದುರಾದ ವೇಳೆ ತಮಿಳುನಾಡಿಗೆ ನೀರು ಬಿಡಬಹುದು ಎಂದು ಸಲಹೆ ನೀಡಿದ್ದಾರೆ ಎಂದಿದ್ದಾರೆ ಸಿಎಂ.
ಸಂದರ್ಭ ಬಂದರೆ ವಿಶೇಷ ಅಧಿವೇಶ ಕರೆಯಲಾಗುವುದು. ಉದ್ದೇಶಪೂರ್ವಕವಾಗಿ ಆದೇಶದ ಪಾಲನೆ ಆಗದಿದ್ದಾಗ ಮಾತ್ರ ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಇದೇ ವೇಳೆ ಸಿಎಂ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಕೃಷಿ ಸಚಿವ ಚೆಲುವರಾಯಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜಕೀಯ ಸಲಹೆಗಾರ ನಸೀರ್ ಅಹಮದ್, ಕಾನೂನು ಸಲಹೆಗಾರ ಪೊನ್ನಣ್ಣ ಇದ್ದರು.












Click it and Unblock the Notifications