ಆಡಳಿತ ವೆಚ್ಚ ಕಡಿತಕ್ಕೆ ಸರ್ಕಾರ ಮಾಸ್ಟರ್‌ ಪ್ಲಾನ್: ಶೀಘ್ರವೇ ವಿವಿಧ ಇಲಾಖೆಗಳ ವಿಲೀನಕ್ಕೆ ಸಿಎಂ ಡಿಕೆಶಿ ಒಲವು

ಬೆಂಗಳೂರು: ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ಹಾಗೂ ಆಡಳಿತದಲ್ಲಿ ದಕ್ಷತೆ ತರುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಡಲು ಮುಂದಾಗಿದೆ. ಒಂದೇ ಮಾದರಿಯ ಕೆಲಸಗಳನ್ನು ಮಾಡುವ ಪ್ರಮುಖ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳನ್ನು ವಿಲೀನಗೊಳಿಸುವ ಮೂಲಕ ಆಡಳಿತ ವೆಚ್ಚವನ್ನು ಗಣನೀಯವಾಗಿ ತಗ್ಗಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಆಡಳಿತ ಸುಧಾರಣಾ ಆಯೋಗದ ವರದಿಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಲವು ತೋರಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

Karnataka Government

ಆಡಳಿತ ವೆಚ್ಚ ಕಡಿತ ಹಾಗೂ ಇಲಾಖೆಗಳ ವಿಲೀನ ಪ್ರಕ್ರಿಯೆ

ರಾಜ್ಯದಲ್ಲಿ ಹಲವು ಇಲಾಖೆಗಳು ಬಹುತೇಕ ಒಂದೇ ರೀತಿಯ ಕೆಲಸಗಳನ್ನು ಮಾಡುತ್ತಿವೆ. ಇದರಿಂದ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಎದುರಾಗುತ್ತಿದ್ದು, ಸರ್ಕಾರದ ಬೊಕ್ಕಸಕ್ಕೂ ಹೆಚ್ಚಿನ ಹೊರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಇಲಾಖೆಗಳ ವಿಲೀನ ಪ್ರಕ್ರಿಯೆಗೆ ವೇಗ ನೀಡಲಾಗಿದೆ. ಮೂಲಗಳ ಪ್ರಕಾರ, ಕೃಷಿ ಇಲಾಖೆಯೊಂದಿಗೆ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳನ್ನು ವಿಲೀನಗೊಳಿಸುವ ಪ್ರಸ್ತಾವನೆ ಇದೆ. ಅದೇ ರೀತಿ ನಗರಾಭಿವೃದ್ಧಿ ಇಲಾಖೆಯ ಜೊತೆಗೆ ಪೌರಾಡಳಿತ ಇಲಾಖೆಯನ್ನು ಸೇರ್ಪಡೆ ಮಾಡಲು ಚಿಂತನೆ ನಡೆಸಲಾಗಿದೆ. ಈ ವಿಲೀನದಿಂದಾಗಿ ಕಡತಗಳ ವಿಲೇವಾರಿ ಚುರುಕಾಗಲಿದ್ದು, ಆಡಳಿತಾತ್ಮಕ ದಕ್ಷತೆ ಮತ್ತು ಸಮನ್ವಯತೆ ಹೆಚ್ಚಾಗಲಿದೆ.

ಆಡಳಿತ ಸುಧಾರಣಾ ಆಯೋಗದ ವರದಿ ಜಾರಿಗೆ ಮುಂದಾದ ಸಿಎಂ ಡಿಕೆ ಶಿವಕುಮಾರ್

ಹಿಂದಿನ ಸರ್ಕಾರಗಳ ಅವಧಿಯಲ್ಲೇ ಇಲಾಖೆಗಳು ಹಾಗೂ ವಿವಿಧ ನಿಗಮ-ಮಂಡಳಿಗಳ ವಿಲೀನಕ್ಕೆ ಸಂಬಂಧಿಸಿದಂತೆ ದೇಶಪಾಂಡೆ ಆಯೋಗವು ವಿಸ್ತೃತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ಈ ವರದಿಯಲ್ಲಿರುವ ಪ್ರಮುಖ ಅಂಶಗಳ ಕುರಿತು ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಸದ್ಯ ವಿಲೀನ ಪ್ರಕ್ರಿಯೆಯಿಂದ ಎದುರಾಗಬಹುದಾದ ಸಾಧಕ-ಬಾಧಕಗಳು ಹಾಗೂ ಕಾನೂನಾತ್ಮಕ ತೊಡಕುಗಳ ಬಗ್ಗೆ ಉನ್ನತ ಅಧಿಕಾರಿಗಳ ತಂಡವೊಂದು ಕೂಲಂಕುಷವಾಗಿ ಪರಿಶೀಲನೆ ನಡೆಸುತ್ತಿದೆ. ಈ ತಂಡದ ಅಂತಿಮ ವರದಿ ಕೈಸೇರಿದ ಬಳಿಕ, ಅದನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲು ಸಿಎಂ ನಿರ್ಧರಿಸಿದ್ದಾರೆ. ಗಮನಾರ್ಹವೆಂದರೆ, ಇತ್ತೀಚೆಗಷ್ಟೇ ಕೆಲವು ಉಪ ಇಲಾಖೆಗಳನ್ನು ಒಗ್ಗೂಡಿಸಿ 'ಪ್ರಜಾಸೇವಾ ಇಲಾಖೆ'ಯನ್ನು ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ತಂದಿದೆ.

ವಿದೇಶಿ ಬಂಡವಾಳ ಆಕರ್ಷಿಸಲು ಜಾಗತಿಕ ಹೂಡಿಕೆ ಇಲಾಖೆ ಸ್ಥಾಪನೆ

ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ವಿದೇಶಿ ಬಂಡವಾಳವನ್ನು ಆಕರ್ಷಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈ ಹಿಂದೆ 'ಅನಿವಾಸಿ ಭಾರತೀಯ ವ್ಯವಹಾರಗಳ ಇಲಾಖೆ' ರಚಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ರಾಜ್ಯದಲ್ಲಿ ಹೂಡಿಕೆ ಮಾಡುವ ವಿದೇಶಿ ಉದ್ಯಮಿಗಳಿಗೆ ಹಾಗೂ ಅನಿವಾಸಿ ಭಾರತೀಯರಿಗೆ ಯಾವುದೇ ರೀತಿಯ ಆಡಳಿತಾತ್ಮಕ ತೊಂದರೆಗಳಾಗದಂತೆ ನೋಡಿಕೊಳ್ಳಲು ಪ್ರತ್ಯೇಕ ವ್ಯವಸ್ಥೆಯ ಅಗತ್ಯವಿದೆ ಎಂದು ಕಳೆದ ಸಂಪುಟ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆದಿತ್ತು.

ಈ ಕಾರಣಕ್ಕಾಗಿ, ಹಳೆಯ ಪ್ರಸ್ತಾವನೆಯನ್ನು ಕೈಬಿಟ್ಟು, ಅದರ ಬದಲಾಗಿ ಹೊಸದಾಗಿ 'ಜಾಗತಿಕ ಹೂಡಿಕೆ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆ'ಯನ್ನು ಅಸ್ತಿತ್ವಕ್ಕೆ ತರಲು ತೀರ್ಮಾನಿಸಲಾಗಿದೆ. ಗುರುವಾರ ಅಂದರೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಹೊಸ ಇಲಾಖೆ ರಚನೆಗೆ ಅಧಿಕೃತ ಅನುಮೋದನೆ ದೊರೆಯುವ ನಿರೀಕ್ಷೆಯಿದೆ.

ವಿಧಾನಸಭೆ ಅಧಿವೇಶನ ಹಾಗೂ ಸ್ಪೀಕರ್ ಎಲೆಕ್ಷನ್ ದಿನಾಂಕ ನಿಗದಿ

ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆಯಲ್ಲಿ ಕೇವಲ ಇಲಾಖೆಗಳ ವಿಲೀನ ಹಾಗೂ ಹೊಸ ಇಲಾಖೆ ಸೃಷ್ಟಿಯ ಬಗ್ಗೆ ಮಾತ್ರವಲ್ಲದೆ, ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನವನ್ನು ಕರೆಯುವ ಕುರಿತು ಚರ್ಚೆ ನಡೆಯಲಿದೆ. ಜೊತೆಗೆ, ತೆರವಾಗಿರುವ ವಿಧಾನಸಭೆ ಸಭಾಧ್ಯಕ್ಷರ (ಸ್ಪೀಕರ್) ಸ್ಥಾನಕ್ಕೆ ಚುನಾವಣೆ ನಡೆಸುವ ದಿನಾಂಕವನ್ನು ಅಂತಿಮಗೊಳಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯೂ ಹೆಚ್ಚಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+