ಕರ್ನಾಟಕದ 11,760 ಕಿ.ಮೀ ರಸ್ತೆ ಮೇಲ್ದರ್ಜೆಗೆ: ಗ್ರಾಮೀಣ ರಸ್ತೆಗಳೆಷ್ಟು?
ಬೆಂಗಳೂರು, ಜೂನ್4: ರಾಜ್ಯದಲ್ಲಿ ಈ ವರ್ಷ ಒಟ್ಟು 11,760 ಕಿ.ಮೀ ರಸ್ತೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 2019ರಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಮಡಿಕೇರಿ ಎಲ್ಲಾ ಕಡೆಯೂ ಸಾಕಷ್ಟು ಮಳೆಯಾಗಿತ್ತು. ರಾಜ್ಯದಲ್ಲಿ ಪ್ರವಾಹದಿಂದ 1800 ರಸ್ತೆಗಳು ಹಾಳಾಗಿವೆ ಅವುಗಳ ಪೈಕಿ ಈಗಾಗಲೇ 1700 ರಸ್ತೆಗಳನ್ನು ಸರಿಪಡಿಸಲಾಗಿದೆ.
ಇನ್ನುಳಿದ ರಸ್ತೆಗಳ ಅಭಿವೃದ್ಧಿ ಕಾರ್ಯ ಶೀಘ್ರವೇ ಆರಂಭವಾಗಲಿದೆ. ಎಂಜಿನಿಯರ್ಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಟ್ರೈನಿಗಳೆಂದು ನೇಮಕ ಮಾಡಬೇಕು ಎಂದು ಯಡಿಯೂರಪ್ಪ ಸೂಚಿಸಿದ್ದಾರೆ.
ಬೆಂಗಳೂರು-ಮಾಗಡಿ ನಾಲ್ಕು ಪಥದ ರಸ್ತೆ ಕಾಮಗಾರಿಗೆ ಜುಲೈನಲ್ಲಿ ಚಾಲನೆ
2019ರಲ್ಲಿ ಸುರಿದ ಮಳೆಗೆ ಸೇತುವೆಗಳು, ರಸ್ತೆಗಳು ಸಾಕಷ್ಟು ಕಡೆ ಹಾಳಾಗಿವೆ, ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶಿಸಿದ್ದು, ಕರ್ನಾಟಕದಲ್ಲೂ ಹಲವೆಡೆ ಮಳೆಯಾಗುತ್ತಿದೆ. ರಾಜ್ಯದಲ್ಲಿ ಈ ವರ್ಷ 1650 ಕಿ.ಮೀ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯರಸ್ತೆಯನ್ನಾಗಿ ಮ್ತತು 10,110 ಕಿ.ಮೀ ಜಿಲ್ಲಾ ಮುಖ್ಯರಸ್ತೆಯನ್ನು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ
ಶಿವಮೊಗ್ಗದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು ಮತ್ತು ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ವಿವಿಧ ಎಂಜಿನಿಯರಿಂಗ್ ಇಲಾಖೆಗಳ ದರಪಟ್ಟಿ ಪರಿಶೀಲಿಸಿ ರಾಜ್ಯಾದ್ಯಂತ ಏಕರೂಪದ ದರಪಟ್ಟಿಯನ್ನು ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಅಧ್ಯಯನ ನಡೆಸುತ್ತಿದ್ದು, ಶೀಘ್ರ ವರದಿ ಹೊರಬೀಳಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 4,813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ
ರಾಜ್ಯದಲ್ಲಿ 4,813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಅದಕ್ಕೆ 30,675 ಕೋಟಿ ರೂ. ವೆಚ್ಚವಾಗಲಿದೆ. ಕಳೆದ ವರ್ಷ ಮಳೆ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಹಾಳಾದ ರಸ್ತೆ ಮತ್ತು ಸೇತುವೆಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಸುವರ್ಣಸೌಧಕ್ಕೆ ಕಚೇರಿಗಳು ಸ್ಥಳಾಂತರ
ರಾಜ್ಯ ಮಟ್ಟದ ಹಲವು ಇಲಾಖಾ ಕಚೇರಿಗಳನ್ನು ಗುರುತಿಸಿ ಒಂದು ತಿಂಗಳಲ್ಲಿ ಬೆಳಗಾವಿಯ ಸುವಣ್ಣಸೌಧಕ್ಕೆ ಸ್ಥಳಾಂತರಿಸಬೇಕು ಎಂದರು. ಮುಂದಿನ ಪ್ರಗತಿ ಪರಿಶೀಲನಾ ಸಭೆಯೊಳಗೆ ಕಚೇರಿಗಳು ಅಲ್ಲಿ ಕೆಲಸ ನಿರ್ವಹಿಸುವುದನ್ನು ನಾನು ಖುದ್ದಾಗಿ ಪರಿಶೀಲಿಸುತ್ತೇನೆ ಎಂದು ಹೇಳಿದರು.
500 ಕೋಟಿ ವೆಚ್ಚದಲ್ಲಿ ಪ್ರವಾಹ ಕಾಮಗಾರಿ
500 ಕೋಟಿ ರೂ ವೆಚ್ಚದಲ್ಲಿ ಪ್ರವಾಹ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಪ್ರವಾಹದಿಂದ ಹಾಳಾಗಿರುವ 1800 ರಸ್ತೆಗಳ ಕಾಮಗಾರಿಗಳ ಪೈಕಿ 1700 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಸೇತುವೆ ನಿರ್ಮಾಣ ಮತ್ತು ದುರಸ್ತಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದ್ದಾರೆ.