ಆರೋಗ್ಯ ಸಮಸ್ಯೆ ನಿಭಾಯಿಸಲು ಸಕಲ ಕ್ರಮ: ಖಾದರ್
ಬೆಂಗಳೂರು.ಏಪ್ರಿಲ್, 26: ಬಿರುಬಿಸಿಲಿನಿಂದ ರಾಜ್ಯದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಪರಿಸ್ಥಿತಿ ನಿಭಾಯಿಸಲು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯವಿರುವಷ್ಟು ಔಷಧಿಗಳನ್ನು ದಾಸ್ತಾನುಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯುಟಿ ಖಾದರ್ ತಿಳಿಸಿದ್ದಾರ
ಅಶುದ್ಧ ಕುಡಿಯುವ ನೀರಿನಿಂದಾಗಿ ಕಾಲರಾ, ಕರಳುಬೇನೆ, ವಾಂತಿ ಬೇಧಿ, ಅತಿಸಾರ, ಕಾಮಾಲೆ ಮುಂತಾದ ರೋಗಗಳು ಹೆಚ್ಚುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ ಎಂದರು.[ಎಚ್ಕೆ ಪಾಟೀಲರ ಲೆಕ್ಕದಲ್ಲಿ ಬರಗಾಲ ಅಂದ್ರೆ ಯಾವುದು?]
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಮತ್ತು ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಗಳಿಗೂ ಸಹ ವಿಶೇಷ ಸೂಚನೆಗಳನ್ನು ನೀಡಲಾಗಿದೆ. ಕಾಲ ಕಾಲಕ್ಕೆ ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಸ್ವಚ್ಛ ಮಾಡುವ ಮತ್ತು ಕ್ಲೋರಿನೇಷನ್ ಕೈಗೊಳ್ಳುವ ಬಗ್ಗೆಯೂ ಸೂಚಿಸಲಾಗಿದೆ. ಹೋಟೆಲ್ ಗಳಲ್ಲಿ ಸ್ವಚ್ಛತೆಯ ಜತೆಗೆ ಕುದಿಸಿ ಆರಿಸಿದ ನೀರನ್ನು ಸರಬರಾಜು ಮಾಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರು 104 ಆರೋಗ್ಯ ಸಹಾಯವಾಣಿಗೆ ಕರೆ ಮಾಡಿ ಬೇಸಿಗೆ ರಕ್ಷಣಾ ತಂತ್ರಗಳ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.
ಕರಳುಬೇನೆ, ಕಾಲರಾ, ಜಾಂಡೀಸ್ ಮತ್ತಿತರ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡಲ್ಲಿ ಕ್ಷಿಪ್ರ ಪ್ರತಿಕ್ರಿಯಾ ತಂಡಗಳನ್ನು ರವಾನಿಸಿ ಅಂತಹ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆದು ದಿನದ 24 ಗಂಟೆಯೂ ನಿಗಾವಣೆ ಮತ್ತು ವೈದ್ಯಕೀಯ ಸೇವಾ ಸೌಲಭ್ಯಗಳನ್ನು ದೊರಕಿಸಿಕೊಡಬೇಕು. ಗಂಭೀರ ಸ್ವರೂಪದ ರೋಗಿಗಳನ್ನು ಆಂಬುಲೆನ್ಸ್ ಮೂಲಕ ಸಮೀಪದ ತಾಲ್ಲೂಕು ಮತ್ತು ಜಿಲ್ಲಾಸ್ಪತ್ರೆಗಳಿಗೆ ರವಾನಿಸುವಂತೆಯೂ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.['ಪ್ರತಿ ಕುಟುಂಬಕ್ಕೆ ಕನಿಷ್ಠ 12 ಬಿಂದಿಗೆ ನೀರು ನೀಡಿ']
ವರ್ಗಾವಣೆ: ಹತ್ತು ವರ್ಷಗಳಿಗಿಂತ ಹೆಚ್ಚು ಕಾಲ ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಮತ್ತು ವೈದ್ಯಾಧಿಕಾರಿಗಳನ್ನು ತಕ್ಷಣವೇ ಬೇರೆ ಕಡೆಗಳಿಗೆ ವರ್ಗಾವಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಆಯಕಟ್ಟನ ಸ್ಥಳಗಳಲ್ಲಿ ಬೇರೂರಿರುವ ವೈದ್ಯರು ಮತ್ತು ವೈದ್ಯಾಧಿಕಾರಿಗಳು ಕೌನ್ಸಿಲಿಂಗ್ ಮೂಲಕ ಸ್ವತಃ ತಾವೇ ವಗರ್ಗಾವಣೆಗೆ ಅರ್ಜಿ ಸಲ್ಲಿಕೆ ಮಾಡುವುದು ಸೂಕ್ತ. ಇಲ್ಲವಾದಲ್ಲ ಅಂತಹವರನ್ನು ಇಲಾಖೆಯ ಅಧಿಕಾರಿಗಳು ಪತ್ತೆ ಮಾಡಿ ವರ್ಗಾವಣೆ ಮಾಡಲಿದ್ದಾರೆ ಎಂದರು.
ರಾಜ್ಯದಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, 713 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕೆಪಿಎಸ್ಸಿಯಲ್ಲಿ ಹೆಚ್ಚು ಅಂಕ ಪಡೆದವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಈಗಾಗಲೇ 295 ತಜ್ಞ ವೈದ್ಯರು ಸೇವೆಗೆ ಹಾಜರಾಗಿದ್ದಾರೆ ಎಂದರು.