ಸರ್ಕಾರಿ ಭೂಮಿ ಒತ್ತುವರಿ, ವರದಿ ಕೇಳಿದ ಗೌರ್ನರ್
ಬೆಂಗಳೂರು, ಅ. 15 : ನಕಲಿ ದಾಖಲೆ ಸೃಷ್ಟಿ ಮಾಡಿ ಸರ್ಕಾರಿ ಭೂಮಿಯನ್ನು ಕಬಳಿಕೆ ಮಾಡಿರುವ ಕುರಿತು ಸರ್ಕಾರಕ್ಕೆ ಎ.ಟಿ. ರಾಮಸ್ವಾಮಿ ಹಾಗೂ ಬಾಲಸುಬ್ರಮಣಿಯನ್ ಸಲ್ಲಿಸಿರುವ ವರದಿಯನ್ನು ಕಳಹಿಸಿಕೊಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇತ್ತ ಸರ್ಕಾರಿ ಭೂಮಿ ಒತ್ತುವರಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಸಿಐಡಿ ತನಿಖೆ ನಡೆಸಲು ಸಿಎಂ ಆದೇಶ ನೀಡಿದ್ದಾರೆ.
ರಾಜ್ಯಪಾಲ ವಜುಭಾಯಿ ವಾಲಾ ಅವರ ಕಾರ್ಯದರ್ಶಿ ಕಂದಾಯ ಇಲಾಖೆಗೆ ಪತ್ರ ಬರೆದಿದ್ದು, ಸಾರ್ವಜನಿಕ ಭೂ ಕಬಳಿಕೆಯ ಬಗ್ಗೆ ಎ.ಟಿ. ರಾಮಸ್ವಾಮಿ ನೇತೃತ್ವದ ವಿಧಾನಮಂಡಲದ ಜಂಟಿ ಸಮಿತಿ ಹಾಗೂ ಸಾರ್ವಜನಿಕ ಭೂಮಿ ಸಂರಕ್ಷಣೆ ಮತ್ತು ಮರುಸ್ವಾಧೀನ ಕಾರ್ಯಪಡೆ ಅಧ್ಯಕ್ಷ ಬಾಲಸುಬ್ರಮಣಿಯನ್ ಸಲ್ಲಿರುವ ವರದಿಗಳನ್ನು ಕಳುಹಿಸಿಕೊಡುವಂತೆ ಸೂಚನೆ ನೀಡಿದ್ದಾರೆ. [ಭೂಗಳ್ಳರ ವಿರುದ್ಧದ ಹೋರಾಟ ಇಂದು ಅಂತ್ಯ]

ಬೆಂಗಳೂರು ನಗರದ ಸುತ್ತಮುತ್ತ ಆಗಿರುವ ಭೂ ಒತ್ತುವರಿಯ ಕುರಿತು ಎ.ಟಿ. ರಾಮಸ್ವಾಮಿ ಅವರು 2007ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಅದರಂತೆ 40 ಸಾವಿರ ಕೋಟಿ ರೂ. ಮೌಲ್ಯದ ಸುಮಾರು 27,336 ಎಕರೆ ಭೂಮಿ ಒತ್ತುವರಿಯಾಗಿದೆ ಎಂದು ಉಲ್ಲೇಖಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಿರುವ ಸರ್ಕಾರಿ ಭೂಮಿ ಒತ್ತುವರಿ ಕುರಿತು ಬಾಲಸುಬ್ರಮಣಿಯನ್ ಅವರು 2011ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, 11.07 ಲಕ್ಷ ಎಕರೆ ಭೂಮಿ ಒತ್ತುವರಿಯಾಗಿದೆ ಎಂದು ತಿಳಿಸಿದೆ. [ಒತ್ತುವರಿ ತೆರವುಗೊಳಿಸಲು ಸಿಎಂ ಆದೇಶ]
ಜಿಲ್ಲಾಧಿಕಾರಿ ನೇಮಕಕ್ಕೆ ಆದೇಶ : ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿಯನ್ನು ತೆರವುಗೊಳಿಸಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಇಬ್ಬರು ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲು ಸರ್ಕಾರ ಇತ್ತೀಚೆಗೆ ನಿರ್ಧರಿಸಿತ್ತು. ಮಂಗಳವಾರ ಇಬ್ಬರು ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅಲ್ಲದೇ ಭೂ ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅದನ್ನು ತೆರವುಗೊಳಿಸುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ.
ಅಧಿಕಾರಿಗಳ ವಿರುದ್ಧ ಸಿಐಡಿ ತನಿಖೆ : ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲು ನೆರವು ನೀಡಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಐಡಿ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಸೋಮವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸರ್ಕಾರಿ ಭೂಮಿ ಒತ್ತುವರಿ, ಕಬಳಿಕೆಯನ್ನು ಪತ್ತೆ ಹಚ್ಚಲು ಕೈಗೊಂಡ ಕ್ರಮದ ಕುರಿತು ವಿವರಣೆ ಪಡೆದ ಅವರು, ಈ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications