ಕೊರೊನಾ ಸಂಕಷ್ಟ: 1,610 ಕೋಟಿ ರೂ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು, ಮೇ 6: ಕೊರೊನಾ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವವ ಕಷ್ಟಕ್ಕೆ ಸ್ಪಂದಿಸಲು ರಾಜ್ಯ ಸರ್ಕಾರ 1610 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾಗಿರುವ ಅಗಸರು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಜನರಿಗೆ ರಾಜ್ಯ ಸರ್ಕಾರ 1610 ಕೋಟಿ ರೂ.ಯ ವಿಶೇಷ ಪ್ಯಾಕೇಜ್ ಅನ್ನು ಪ್ರಕಟಿಸಿದೆ.
ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸಿದ್ದಾರೆ. ಲಾಕ್ ಡೌನ್ ನಿಂದಾಗಿ ಎಲ್ಲ ದೇವಾಲಯಗಳು ಮುಚ್ಚಿರುವುದರಿಂದ ಹಬ್ಬ ಮದುವೆ, ಸಭೆ-ಸಮಾರಂಭಗಳು ಹಾಗೂ ಮತ್ತಿತರ ಯಾವುದೇ ಕಾರ್ಯಕ್ರಮಗಳು ನಡೆಯದಿರುವುದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ತಾವು ಬೆಳೆದಿರುವ ಎಲ್ಲ ಹೂವುಗಳನ್ನು ತಮ್ಮ ಹೊಲದಲ್ಲೇ ನಾಶ ಮಾಡುವ ಪರಿಸ್ಥಿತಿ ಉದ್ಭವಿಸಿದೆ.
ಹಾಗೆಯೇ ಬೃಹತ್ ಕೈಗಾರಿಕೆಗಳಿಗೆ ಅವರು ವಿದ್ಯುತ್ ಇಲ್ಲಿನ ಫಿಕ್ಸ್ಡ್ ಚಾರ್ಜ್ ನ ಪಾವತಿಯನ್ನು ಎರಡು ತಿಂಗಳ ಅವಧಿಗೆ ಯಾವುದೇ ಬಡ್ಡಿ ಅಥವಾ ದಂಡ ಇಲ್ಲದೇ ಬಡ್ಡಿ ರಹಿತವಾಗಿ ಮುಂದೂಡಲಾಗುವುದು. ಎಲ್ಲ ಪ್ರವರ್ಗದ ಗ್ರಾಹಕರುಗಳಿಗೆ ವಿದ್ಯುಚ್ಚಕ್ತಿ ಮೊತ್ತವನ್ನು ಪಾವತಿಸಲು ಈ ಕೆಳಕಂಡ ಸವಲತ್ತು , ಪರಿಹಾರಗಳನ್ನು ಒದಗಿಸಲಾಗುವುದು. ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ ರಿಯಾಯಿತಿಯನ್ನು ನೀಡುವುದು. ವಿಳಂಬ ಪಾವತಿಗಾಗಿ ವಿದ್ಯುತ್ ಬಿಲ್ಲಿನ ಮೊತ್ತದ ಮೇಲೆ ವಿಧಿಸುವ ಬಡ್ಡಿಯನ್ನು ಕಡಿಮೆಗೊಳಿಸಲಾಗುವುದು ಎಂದು ಹೇಳಿದರು.

ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ
ರಾಜ್ಯದಲ್ಲಿರುವ 7 ಲಕ್ಷದ 75 ಸಾವಿರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ ಪರಿಹಾರ ನೀಡಲಾಗುವುದು. ತರಕಾರಿ ಹಾಗೂ ಹಣ್ಣು ಬೆಳೆಗಾರರು ಸಂಕಷ್ಟದಲ್ಲಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಪ್ರತ್ಯೇಕ ಪ್ಯಾಕೇಜ್ ಘೋಷಿಸಲಾಗುವುದು ಎಂದರು.

ನೇಕಾರ ಸಮ್ಮಾನ್ ಯೋಜನೆಯಡಿ 54 ಸಾವಿರ ಮಂದಿಗೆ ನೆರವು
ನೇಕಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ 54 ಸಾವಿರ ನೇಕಾರರಿಗೆ ವರ್ಷಕ್ಕೆ 2 ಸಾವಿರ ರೂ ನೆರವು ನೀಡಲಾಗುವುದು.

ಅಗಸರು , ಕ್ಷೌರಿಕರಿಗೆ ನೆರವು
ಅಗಸರು ಹಾಗೂ ಕ್ಷೌರಿಕರಿಗೆ ತಲಾ 5 ಸಾವಿರ ರೂ ಪರಿಹಾರ ನೀಡಲಾಗುವುದು. ಇದರಿಂದ ಸುಮಾರು 60 ಸಾವಿರ ಅಗಸರು ಹಾಗೂ 2 ಲಕ್ಷದ 30 ಸಾವಿರ ಕ್ಷೌರಿಕ ಸಮುದಾಯದವರಿಗೆ ಈ ನೆರವು ದೊರೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಹೂವು ಬೆಳೆಗಾರರಿಗೆ ನಷ್ಟ
ಒಟ್ಟಾರೆ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವುಗಳು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಇದರಿಂದ ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ನಮ್ಮ ಸರ್ಕಾರವು ಹೆಕ್ಟೇರ್ ಗೆ ಗರಿಷ್ಠ 25,000 ರೂ.ಗಳಂತೆ ಪರಿಹಾರ ನೀಡಲಾಗುವುದು ಎಂದರು.

ಅತಿ ಸಣ್ಣ, ಸಣ್ಣ ಉದ್ದಿಮೆ ತೆರೆಯಲು ಅವಕಾಶ
ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳನ್ನು ನಡೆಸುವ ಉದ್ದಿಮೆದಾರರು ತಮ್ಮ ಉದ್ದಿಮೆಗಳನ್ನು ತೆರೆಯಲಾಗಿದೆ ಹಾಗೂ ತಮ್ಮ ಉತ್ಪನ್ನಗಳನ್ನು ಸಾಗಿಸಿ ಮಾರಾಟ ಮಾಡಲಾಗದೆ ನಷ್ಟವನ್ನು ಅನುಭವಿಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ವಹಿವಾಟು ಚೇತರಿಕೆಯಾಗಲು ಕೆಲವು ತಿಂಗಳ ಸಮಯ ಬೇಕಾಗಿರುವುದರಿಂದ ಇವರಿಗೆ ಸರಕಾರ ನೆರವು ನೀಡುವುದು ಅನಿವಾರ್ಯವಾಗಿದೆ. ಆದ್ದರಿಂದ ಅತಿಸಣ್ಣ, ಸಣ್ಣ ಹಾಗೂ ಉದ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ಫಿಕ್ಸ್ಡ್ ಚಾರ್ಜ್ ಅನ್ನು ಎರಡು ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.












Click it and Unblock the Notifications