ರಾಜ್ಯದ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳಾಗಿ ಹಿರಿಯ IAS ಅಧಿಕಾರಿಗಳ ನೇಮಕ: ನಿಮ್ಮ ಜಿಲ್ಲೆಗೆ ಯಾರು?
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನ ಬಗೆಹರಿಸಲು ಕರ್ನಾಟಕ ಸರ್ಕಾರ ಇದೀಗ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳ ಆಡಳಿತವನ್ನು ಸುಧಾರಿಸುವ ನಿಟ್ಟಿನಲ್ಲಿ ಹಿರಿಯ ಐಎಎಸ್ ಅಧಿಕಾರಿಗಳನ್ನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಸರ್ಕಾರದ ಯೋಜನೆಗಳು ರಾಜ್ಯದ ಪ್ರತಿಯೊಬ್ಬರಿಗೂ ತಲುಪುವಂತೆ ಮಾಡಲು ಮತ್ತು ಜಿಲ್ಲಾ ಮಟ್ಟದಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಈ ನೇಮಕಾತಿ ಮಾಡಲಾಗಿದೆ. ಇದರಲ್ಲಿ ಮುಖ್ಯವಾಗಿ ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಸುಬೋದ್ ಯಾದವ್ ಅವರನ್ನು ಕಲಬುರಗಿ ಜಿಲ್ಲೆಗೆ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್ ಅವರನ್ನು ಕೋಲಾರಕ್ಕೆ ಹಾಗೂ ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಆರ್. ಗಿರೀಶ್ ಅವರನ್ನು ಚಿಕ್ಕಮಗಳೂರು ಜಿಲ್ಲೆಗೆ ನೇಮಕ ಮಾಡಲಾಗಿದೆ.

ಸರ್ಕಾರದ ಆದೇಶದ ಪ್ರಕಾರ, ನೂತನವಾಗಿ ನೇಮಕಗೊಂಡಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಾವು ಉಸ್ತುವಾರಿ ವಹಿಸಿರುವ ಜಿಲ್ಲೆಗಳಿಗೆ ಆಗಾಗ ಭೇಟಿ ನೀಡಬೇಕು. ಕೇವಲ ಕಚೇರಿಯಲ್ಲೇ ಕುಳಿತುಕೊಳ್ಳದೆ, ಅಲ್ಲಿನ ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಖುದ್ದು ಭೇಟಿ ನೀಡಿ ಮೂಲಸೌಕರ್ಯಗಳ ಪರಿಶೀಲನೆ ಮಾಡಬೇಕು. ಇದರ ಜೊತೆಗೆ ನಾಗರಿಕ ಸೇವೆಗಳು ಜನರಿಗೆ ಸರಿಯಾಗಿ ದೊರೆಯುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಾದ ಹೊಣೆಗಾರಿಕೆಯನ್ನ ಇವರಿಗೆ ವಹಿಸಲಾಗಿದೆ. ಹಾಗೆಯೇ ಕುಡಿಯುವ ನೀರು, ನೈರ್ಮಲ್ಯ ಹಾಗೂ ರಸ್ತೆಗಳ ಗುಣಮಟ್ಟದ ಕಡೆಗೂ ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ.
ಕಂದಾಯ ಮತ್ತು ಭೂಮಿ ಸಮಸ್ಯೆಗಳಿಗೆ ತ್ವರಿತ ಪರಿಹಾರ
ಜಿಲ್ಲಾ ಮಟ್ಟದಲ್ಲಿ ಅತಿ ಹೆಚ್ಚು ಸಾರ್ವಜನಿಕ ದೂರುಗಳು ಕಂಡುಬರುವುದು ಕಂದಾಯ ಹಾಗೂ ಭೂಮಿಗೆ ಸಂಬಂಧಿಸಿದ ವಿಚಾರಗಳಲ್ಲಿ. ಹೀಗಾಗಿ ಉಸ್ತುವಾರಿ ಕಾರ್ಯದರ್ಶಿಗಳು ಕಂದಾಯ ಹಾಗೂ ಭೂಮಿ ವಿವಾದಗಳನ್ನು ಬಗೆಹರಿಸುವತ್ತ ಹೆಚ್ಚಿನ ಆಸಕ್ತಿ ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನ ಕೇಳಿ, ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು.
DIS ಪೋರ್ಟಲ್ನಲ್ಲಿ ಮಾಸಿಕ ವರದಿ ಕಡ್ಡಾಯ
ಅಧಿಕಾರಿಗಳು ಕೇವಲ ಜಿಲ್ಲೆಗೆ ಭೇಟಿ ನೀಡಿದರೆ ಸಾಲದು, ಅದರ ಜೊತೆಗೆ ಅವರು ತಮ್ಮ ಭೇಟಿಯ ವೇಳೆ ಕಂಡುಕೊಂಡ ಮಾಹಿತಿ ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಪ್ರತಿ ತಿಂಗಳು ಸಮಗ್ರ ವರದಿಯನ್ನು ಸಿದ್ಧಪಡಿಸಬೇಕು. ಈ ಮಾಸಿಕ ವರದಿಯನ್ನು ಕಡ್ಡಾಯವಾಗಿ ಸರ್ಕಾರದ 'DIS ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಇದರಿಂದ ಸರ್ಕಾರದ ಯೋಜನೆಗಳ ಅನುಷ್ಠಾನದ ನಿಜವಾದ ಸ್ಥಿತಿಗತಿ ಮೇಲ್ಮಟ್ಟದ ಅಧಿಕಾರಿಗಳಿಗೂ ಮತ್ತು ಮುಖ್ಯಮಂತ್ರಿಗಳಿಗೂ ನೇರವಾಗಿ ತಿಳಿಯಲಿದೆ.
Karnataka government has appointed senior IAS officers as District In-charge Secretaries to oversee development works, monitor implementation of government schemes & review public grievances across districts.
— ChristinMathewPhilip (@ChristinMP_) July 14, 2026
"They must conduct regular district visits, inspect schools,… pic.twitter.com/gjcvOKy8eJ
ಸಾಂಕ್ರಾಮಿಕ ರೋಗಗಳ ನಿಯಂತ್ರಣ
ಇತ್ತೀಚೆಗೆ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆಯ ಸಿದ್ಧತೆಗಳನ್ನ ಪರಿಶೀಲಿಸಬೇಕು. ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತವನ್ನು ರೆಡಿ ಮಾಡಿಸುವ ಜವಾಬ್ದಾರಿಯೂ ಇವರ ಮೇಲಿದೆ. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆ ಮತ್ತು ಹಾಸಿಗೆಗಳ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತುರ್ತು ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ನಿರ್ದೇಶಿಸಿದೆ.












Click it and Unblock the Notifications