ತಮಿಳುನಾಡಿಗೆ ಬಿಡಲು ರಾಜ್ಯದಲ್ಲಿ 'ಕಾವೇರಿ' ನೀರಿಲ್ಲ: ನೀರು ಬಿಡದಿರಲು ತೀರ್ಮಾನ: ಡಿಕೆ ಶಿವಕುಮಾರ್
ಬೆಂಗಳೂರು, ಸೆಪ್ಟಂಬರ್ 12: ಕಾವೇರಿ ನೀರು ಬಿಡುವಂತೆ ಮೇಲಿಂದ ಮೇಲೆ ಸೂಚನೆ ಸಿಗುತ್ತಿದ್ದು, ಇದು ಕರ್ನಾಟಕದ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಖಡಕ್ ಸ್ಪಷ್ಟನೆ ನೀಡಿದ್ದಾರೆ. ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದೆ. ಆದರೆ ನಮ್ಮ ಬಳಿ ನೀರಿಲ್ಲ ಎಂದು ಅವರು ಹೇಳಿದ್ದಾರೆ.
ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಕುರಿತು ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಪ್ರತಿಕ್ರಿಯಿಸಿದ ಅವರು, ಬುಧವಾರ ಅಥವಾ ಗುರುವಾರ ಕಾವೇರಿ ನೀರಾವರಿ ಪ್ರಾಧಿಕಾರದ ಸಭೆ ನಡೆಯಬಹುದು ಅಲ್ಲಿ ನಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುತ್ತೇವೆ. ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಚರ್ಚೆ ನಡೆಸಿ ನೀರು ಬಿಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ನಿರ್ಧಾರಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.

ತಮಿಳುನಾಡು ರಾಜ್ಯದವರು 12 ಸಾವಿರ ಕ್ಯೂಸೆಕ್ಸ್ ಬೇಡಿಕೆ ಇಟ್ಟಿದ್ದರು. ಅದನ್ನು 5 ಸಾವಿರ ಕ್ಯೂಸೆಕ್ಸ್ಗೆ ಇಳಿಸಿದ್ದಾರೆ. ಮೊದಲು ಕುಡಿಯುವ ನೀರಿಗೆ ಆದ್ಯತೆ ನಂತರ ರೈತರಿಗೆ ಹರಿಸುವ ಬಗ್ಗೆ ಯೋಚನೆ ಮಾಡುತ್ತೇವೆ. ಬೆಂಗಳೂರಿಗೆ ಮಳೆ ಬಿದ್ದಾಗ ಆಶಾಭಾವನೆ ಮೂಡಿತ್ತು, ಈಗ ಮಳೆ ಬರದೆ ಸಂಕಷ್ಟ ಬಂದಿದೆ ಎಂದು ಅವರು ವಿವರಿಸಿದರು.
ಸುಪ್ರೀಂಕೋರ್ಟಿಗೆ ಅಫಿಡವಿಟ್ ಹಾಕಿದ್ದೆವು, ಅವರು ನಾವು ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಎರಡೂ ರಾಜ್ಯಗಳಿಗೆ ತಿಳಿಸಿದ್ದಾರೆ. ವಾಸ್ತವಾಂಶವನ್ನು ಎಲ್ಲರಿಗೂ ತಿಳಿಸಿದ್ದೇವೆ. ದೆಹಲಿಯಲ್ಲಿ ಇರುವ ನಮ್ಮ ಕಾನೂನು ತಜ್ಞರ ಬಳಿ ಮಾತನಾಡುತ್ತೇನೆ. ನಾವು ಕದ್ದು ಮುಚ್ಚಿ ಏನನ್ನೂ ಮಾಡುತ್ತಿಲ್ಲ. ರಾಜ್ಯಕ್ಕೆ ಭೇಟಿ ನೀಡಿ ನಮ್ಮ ಪರಿಸ್ಥಿತಿ ನೋಡಿ ಎಂದು ತಿಳಿಸಿದ್ದೇವೆ ಎಂದರು.

ಸರ್ಕಾರದ ಬೆಂಬಲಕ್ಕೆ ನಿಲ್ಲುವ ನಂಬಿಕೆ ಇದೆ
ಕಾವೇರಿ ನೀರಿನ ವಿಚಾರದಲ್ಲಿ ರಾಜಕಾರಣ ಮಾಡಲಾಗುತ್ತಿದೆಯೇ ಎನ್ನುವ ಪ್ರಶ್ನೆಗೆ 'ನ್ಯಾಯಾಧೀಶರ ವಿರುದ್ಧ ಹಾಗೂ ಸಮಿತಿಯಲ್ಲಿ ಹಿರಿಯ ಅಧಿಕಾರಿಗಳ ಆರೋಪ ಮಾಡುವುದು ತಪ್ಪು. ವಿರೋಧ ಪಕ್ಷದವರ ಬಗ್ಗೆ ಹೆಚ್ಚು ಹೇಳುವುದಿಲ್ಲ, ಸಹಕಾರ ಕೊಡಿ ಎಂದು ಕೇಳುತ್ತೇನೆ. ಜನ ನಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎನ್ನುವ ನಂಬಿಕೆ ಇದೆ" ಎಂದು ಹೇಳಿದರು.
ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಡುವುದಿಲ್ಲ ಎಂದು ಹೇಳಿದರೆ ನಾವು (ಬಿಜೆಪಿಯವರು) ಸರ್ಕಾರದ ಜೊತೆಗೆ ನಿಂತು ಬೆಂಬಲಿಸಿದ್ದೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಾಳೆ ಕಾವೇರಿ ನೀರು ಹಂಚಿಕೆ ಕುರಿತು ಸಭೆ ನಡೆಯಲಿದೆ. ಮುಂದಿನ ವಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.












Click it and Unblock the Notifications