ಬಿಜೆಪಿ ಸಂಸದ, ಶಾಸಕರ ವಿರುದ್ಧದ 62 ಕ್ರಿಮಿನಲ್ ಕೇಸ್ಗಳನ್ನು ಹಿಂಪಡೆದ ಕರ್ನಾಟಕ ಸರ್ಕಾರ
ಬೆಂಗಳೂರು, ಸೆಪ್ಟೆಂಬರ್ 04: ಕರ್ನಾಟಕ ಸರ್ಕಾರವು ಬಿಜೆಪಿ ಸಂಸದ ಹಾಗೂ ಶಾಸಕರ ವಿರುದ್ಧ ಇದ್ದ 62 ಕ್ರಿಮಿನಲ್ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ.
Recommended Video
ರೈತರ ಪರ, ಸಾಮಾಜಿಕ ಕಳಕಳಿ ಹಿನ್ನೆಲೆಯ ಪ್ರತಿಭಟನೆ, ಹರತಾಳ ನಡೆಸಿದವರ ಮೇಲಿನ ಪ್ರಕರಣಗಳನ್ನು ವಾಪಸ್ಸು ಪಡೆಯುವುದು ಸಾಮಾನ್ಯ . ಆದರೆ ಸಾಮಾಜಿಕ ಕಳಕಳಿ ಹೆಸರಿನಲ್ಲಿ ಸಂಘಟನೆಗಳು, ಪಕ್ಷದ ಕಾರ್ಯಕರ್ತರು ಮೇಲಿರುವ ಪ್ರಕರಣಗಳನ್ನು ವಾಪಾಸ್ ಪಡೆಯುವ ಮೂಲಕ ಅವರ ಕೃತ್ಯಗಳನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ ಎನ್ನುವ ಆರೋಪಗಳು ಕೂಡ ಕೇಳಿಬಂದಿವೆ.
ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿ ಸರ್ಕಾರ 62 ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಾಸು ಪಡೆಯಲು ಅನುಮೋದನೆ ನೀಡಿದೆ.
ಬಿಜೆಪಿ ಸರ್ಕಾರ ಈಗಾಗಲೇ ರೈತ ಪ್ರತಿಭಟನೆಗಳು, ಮಹಾದಾಯಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ನಿರ್ಧರಿಸಿದೆ. ಜತೆಗೆ ಹೋರಾಟಗಾರರ ಹೆಸರಲ್ಲಿ ಸರ್ಕಾರ ತನ್ನ ಪಕ್ಷದ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳನ್ನೂ ಹಿಂಪಡೆದಿರುವುದು ವಿವಾದಕ್ಕೆ ಕಾರಣವಾಗಿದೆ.
ಸಚಿವ ಜೆಸಿ ಮಾಧುಸ್ವಾಮಿ, ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರ ವಿರುದ್ಧ ಇದ್ದ ಪ್ರಕರಣಗಳನ್ನು ಕೂಡ ಹಿಂಪಡೆಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಾಗೆಯೇ ಆನಂದ್ ಸಿಂಗ್ ವಿರುದ್ಧ ಇದ್ದ ಪ್ರಕರಣಗಳನ್ನುಕೂಡ ವಾಪಸ್ ಪಡೆಯಲಾಗುತ್ತಿದೆ.ಡಿಜಿ-ಐಜಿಪಿ ಕಚೇರಿ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಕಾನೂನು ಇಲಾಖೆ ಬಹುತೇಕ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು ಸೂಕ್ತವಲ್ಲ ಎಂಬ ಅಭಿಪ್ರಾಯವ್ಯಕ್ತಡಿಸಿದೆ.

ಸಂಸದ ಪ್ರತಾಪ್ ಸಿಂಹ ವಿರುದ್ಧದ ಕೇಸ್ ವಾಪಸ್
ಸಂಪುಟ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಮೇಲಿನ ಪ್ರಕರಣವನ್ನೂ ವಾಪಸು ಪಡೆಯಲು ತೀರ್ಮಾನಿಸಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ಡಿ.3, 2017ರಂದು ಹುಣಸೂರು ಪಟ್ಟಣದಲ್ಲಿ ಹನುಮ ಜಯಂತಿ ಪ್ರಯುಕ್ತ ರಾಲಿ ನಡೆಸಲು ಯತ್ನಿಸಿದ್ದರು. ನಿಷೇಧಾಜ್ಞೆ ಇದ್ದರೂ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಲು ಪ್ರಯತ್ನ ನಡೆಸಿದ್ದರು. ಈ ವೇಳೆ ಸಂಸದ ಪ್ರತಾಪ್ ಸಿಂಹ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮೇಲೆ ಕಾರನ್ನು ವೇಗವಾಗಿ ನುಗ್ಗಿಸಿದ ಆರೋಪಕ್ಕೊಳಗಾಗಿದ್ದರು. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಸಂಸದ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಸಂಸದ ಪ್ರತಾಪ್ ಸಿಂಹ ವಿರುದ್ಧ ಐಪಿಸಿ 279, 353, 188 ಮತ್ತು 332ರಡಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ಈ ಪ್ರಕರಣಗಳನ್ನು ವಾಪಸು ಪಡೆಯಲಾಗಿದೆ. ಅಲ್ಲದೆ ಹನುಮ ಜಯಂತಿ ಪ್ರಯುಕ್ತ ಮೆರವಣಿಗೆ ನಡೆಸಿದ ಹಿನ್ನೆಲೆ ಹುಣಸೂರು ಪಟ್ಟಣ ಠಾಣೆಯಲ್ಲಿ ದಾಖಲಾಗಿರುವ ಬೆಂಬಲಿಗರ ವಿರುದ್ಧದ ಪ್ರಕರಣವನ್ನೂ ವಾಪಸು ಪಡೆಯಲು ನಿರ್ಧರಿಸಲಾಗಿದೆ.

ರೇಣುಕಾಚಾರ್ಯ ಬೆಂಬಲಿಗರ ಕೇಸ್ ವಾಪಸ್
ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಬೆಂಬಲಿಗರ ವಿರುದ್ಧ ದಾಖಲಾಗಿರುವ ಮೊಕದ್ದಮೆಯನ್ನು ಸರ್ಕಾರ ಹಿಂದಕ್ಕೆ ಪಡೆದಿದೆ. ಫೆ.6, 20 19ರಂದು ದಾವಣಗೆರೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಎಂ.ಪಿ.ರೇಣುಕಾಚಾರ್ಯರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ರೇಣುಕಾಚಾರ್ಯರ ಜಯಗಳಿಸಿದ್ದಕ್ಕಾಗಿ ಬಿಜೆಪಿ ಬೆಂಬಲಿಗರು ಹೊನ್ನಾಳಿ ಪಟ್ಟಣದಲ್ಲಿ ಜೈಕಾರ ಹಾಕುತ್ತಾ ಅಕ್ರಮ ಗುಂಪು ಕಟ್ಟಿಕೊಂಡಿದ್ದರು. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಪಿ.ಮಂಜಪ್ಪ ಮನೆ ಹತ್ತಿರ ಬೈದಾಡಿಕೊಂಡು ಸುತ್ತಾಡಿದ್ದರು. ಮುಖಂಡರ ಮನೆಯವರೊಂದಿಗೆ ಜಗಳ ಮಾಡಿ, ಹಲ್ಲೆ ಮಾಡಿ ಕೊಲೆ ಮಾಡಬೇಕೆಂಬ ಉದ್ದೇಶದಿಂದ ಮಂಜಪ್ಪ ಅವರ ಸಹೋದರನ ಅಂಗಡಿ ಮುಂದೆ ಪಟಾಕಿ ಸಿಡಿಸಲು ಹೋಗಿದ್ದರು. ಆ ವೇಳೆ ಅಲ್ಲಿ ಜಗಳವಾಡಿ ಇಬ್ಬರಿಗೆ ಚಾಕು ಇರಿದ ಆರೋಪವು ಕೇಳಿ ಬಂದಿದ್ದು ಪ್ರಕರಣ ದಾಖಲಿಸಲಾಗಿತ್ತು.
ಈ ಸಂಬಂಧ ಹೊನ್ನಾಳಿ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 231/2018 ಕಲಂನಡಿ 143, 144, 147, 148 ಮತ್ತು 504, 307, 323, 324 ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ.

ಇತರೆ ಸಚಿವ, ಶಾಸಕ ಬೆಂಬಲಿಗರ ವಿರುದ್ಧದ ಕೇಸ್ ವಾಪಸ್
ಸಚಿವ ಬಿ.ಸಿ.ಪಾಟೀಲ್ ಬೆಂಬಲಿಗರ ಮೇಲೆ ಹಾವೇರಿಯ ರಟ್ಟಿಹಳ್ಳಿ ಠಾಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ದೊಂಬಿ ನಡೆಸಿದ ಹಿನ್ನೆಲೆ ದಾಖಲಾದ ಪ್ರಕರಣ ವಾಪಸ್ ಪಡೆಯಲಾಗಿದೆ. ಸರ್ಕಾರಿ ವಾಹನ ಜಖಂ, ಆಸ್ತಿಪಾಸ್ತಿ ನಾಶ, ಅಧಿಕಾರೊಗಳಿಗೆ ಗಾಯ ಮಾಡಿದ ಗಂಭೀರ ಆರೋಪ ಇತ್ತು. ಪ್ರಕರಣ ವಾಪಸು ಪಡೆಯಲು ಸಚಿವರು ಮನವಿ ಮಾಡಿದ್ದರು.
- ಧಾರವಾಡ ಬಿಜೆಪಿ ಶಾಸಕ ಅಮೃತ್ ದೇಸಾಯಿ ಬೆಂಬಲಿಗರಿಂದ 2015ರಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿಗಳಿಗೆ ಕಲ್ಲು ತೂರಾಟ ಮಾಡಿ, ಜೀವ ಬೆದರಿಕೆ ಹಾಕಿದ ಪ್ರಕರಣ ವಾಪಸ್.

ಯಾರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬಹುದಿತ್ತು?
ಪೊಲೀಸ್ ಇಲಾಖೆ, ಕಾನೂನು ಇಲಾಖೆ ಪ್ರಕರಣ ವಾಪಸ್ ರೈತರು, ವಿದ್ಯಾರ್ಥಿಗಳು, ನೀರಿಗಾಗಿ, ವಿದ್ಯುತ್, ಸರ್ಕಾರದ ನಡೆ ಖಂಡಿಸಿ ನಡೆಸುವ ಹೋರಾಟಗಳಿಗೆ ಸೀಮಿತವಾಗಬೇಕಿದ್ದ ಕ್ರಿಮಿನಲ್ ಪ್ರಕರಣಗಳ ವಾಪಸ್ ಪಡೆಯುವ ಪ್ರಕ್ರಿಯೆ, ಪಕ್ಷದವರನ್ನು ಹಾಗೂ ಸಂಘಟನೆ ಕಾರ್ಯಕರ್ತರನ್ನು ರಕ್ಷಿಸುವ ಉದ್ದೇಶಕ್ಕಾಗಿ ವಾಪಸ್ ಪಡೆಯುತ್ತಿರುವುದು ಆತಂಕವನ್ನುಂಟು ಮಾಡಿದೆ.












Click it and Unblock the Notifications