ಕೆರೆ ಡಿನೋಟಿಫಿಕೇಶನ್ ಕೈಬಿಟ್ಟಿದ್ದೇವೆ : ರಾಜ್ಯಪಾಲರಿಗೆ ಸಿಎಂ ಪತ್ರ
ಬೆಂಗಳೂರು, ಆಗಸ್ಟ್ 30: ಕೆರೆಗಳ ಡಿನೋಟಿಫಿಕೇಷನ್ ಪ್ರಸ್ತಾಪವನ್ನು ಕೈಬಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಈ ಹಿಂದೆ ಹಲವು ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಂಘ ಸಂಸ್ಥೆಗಳು ಕೆರೆ ಡಿನೋಟಿಫಿಕೇಷನ್ ಪ್ರಸ್ತಾಪ ಕೈ ಬಿಡಲು ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ರಾಜ್ಯ ಸರ್ಕಾರದ ತೀರ್ಮಾನವನ್ನು ಕೇಳಿ ರಾಜ್ಯಪಾಲರು ರಾಜ್ಯ ಸರಕಾರಕ್ಕೆ 18 ಆಗಸ್ಟ್ 2017ರಂದು ಪತ್ರ ಬರೆದಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರಕಾರ, 'ಕೆರೆ ಡಿನೋಟಿಫಿಕೇಷನ್ ಪ್ರಸ್ತಾಪ ಕೈ ಬಿಟ್ಟಿರುವುದಾಗಿ' ಹೇಳಿದೆ.
ಈ ಕುರಿತು ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, "1964ರ ಭೂ ಕಂದಾಯ ಕಾಯಿದೆಯ ಸೆಕ್ಷನ್ 68ಕ್ಕೆ ತಿದ್ದುಪಡಿ ತರಲು ರಾಜ್ಯ ಸರಕಾರ ಹೊರಟಿತ್ತು. ಪುನರುಜ್ಜೀವನಗೊಳಿಸಲಾಗದ ಕೆರೆಗಳ ಜಮೀನನ್ನು ಜನರಿಗೆ ಉಪಯೋಗಕ್ಕೆ ಸಿಗುವಂತೆ ಮಾಡುವ ಉದ್ದೇಶದಿಂದ ಈ ತಿದ್ದುಪಡಿಗೆ ಸರಕಾರ ಮುಂದಾಗಿತ್ತು," ಎಂದು ಹೇಳಿದ್ದಾರೆ.

ಈ ಕುರಿತು ಅಭಿಪ್ರಾಯ ಕೋರಿ ಕರಡು ತಿದ್ದುಪಡಿಯನ್ನು ವಿವಿಧ ಇಲಾಖೆಗಳಿಗೆ ಕಳುಹಿಸಿಕೊಡಲಾಗಿತ್ತು. ಇಲಾಖೆಗಳ ಅಭಿಪ್ರಾಯದ ಮೇಲೆ ಡಿನೋಟಿಫಿಕೇಶನ್ ಕೈ ಬಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಪತ್ರದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಯಾವುದೇ ಕಾಯಿದೆಗಳಿಗೆ ತಿದ್ದುಪಡಿ ತರುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications