ಕರ್ನಾಟಕದಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ ಮತ್ತು ಚಿಕಿತ್ಸೆಗೆ ಮಾರ್ಗಸೂಚಿ
ಬೆಂಗಳೂರು, ಮೇ 26: ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾದ ಜನರಲ್ಲಿ ಕಪ್ಪು ಶಿಲೀಂಧ್ರ ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಂಡು ಕರ್ನಾಟಕ ಸರ್ಕಾರ ಕಪ್ಪು ಶಿಲೀಂಧ್ರ ರೋಗಿಗಳ ಚಿಕಿತ್ಸೆಗೆ ಸೂಕ್ತ ನೀತಿಯನ್ನು ರೂಪಿಸುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ದೇಶದ ಎಲ್ಲ ರಾಜ್ಯ ಸರ್ಕಾರಗಳು ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ) ರೋಗಿಗಳ ಪರೀಕ್ಷೆ, ತಪಾಸಣೆ ಮತ್ತು ರೋಗ ನಿರ್ಣಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಈಗಾಗಲೇ ಸಲಹೆ ನೀಡಿದೆ.
ಐಸಿಎಂಆರ್ ನೀಡಿರುವ ಸಲಹೆಯ ಮೇರೆಗೆ ಕೊರೊನಾವೈರಸ್ ಸೋಂಕಿಗೆ ಚಿಕಿತ್ಸೆ ಪಡೆದ ರೋಗಿಗಳಿಗೆ ಮನೆಗಳಲ್ಲೇ ತರಬೇತಿ ನೀಡಲಾಗುವುದು. ಕೊವಿಡ್-19 ಸೋಂಕಿನಿಂದ ಗುಣಮುಖರಾದ ರೋಗಿಗಳ ಆರೋಗ್ಯದ ಮೇಲೆ ನಿಗಾವಹಿಸಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
ಎರಡು ಸಮಿತಿಗಳ ಜೊತೆ ಸಚಿವ ಸುಧಾಕರ್ ಸಭೆ
ಬ್ಲ್ಯಾಕ್ ಫಂಗಸ್ ರೋಗದ ಮೂಲವನ್ನು ಪತ್ತೆ ಮಾಡುವುದು. ಚಿಕಿತ್ಸಾ ವಿಧಾನಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ವಿಕ್ಟೋರಿಯಾ ಆಸ್ಪತ್ರೆಯ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಅಂಬಿಕಾ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ಸಚ್ಚಿದಾನಂದ ಅಧ್ಯಕ್ಷತೆಯ ಎರಡು ಪ್ರತ್ಯೇಕ ಸಮಿತಿಗಳ ಜೊತೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸಮಾಲೋಚನೆ ನಡೆಸಿದರು.
ಕೊವಿಡ್-19 ರೋಗಿಗಳಿಗೆ ಸ್ಟಿರಾಯ್ಡ್ ಮಾತ್ರೆ
ಎರಡು ಸಮಿತಿ ಸದಸ್ಯರು ನೀಡಿರುವ ಅಭಿಪ್ರಾಯದ ಆಧಾರದ ಮೇಲೆ ಕೆಲವು ಸಲಹೆಗಳನ್ನು ನೀಡಲಾಗಿದೆ. ಕೊರೊನಾವೈರಸ್ ಸೋಂಕಿನ ಚಿಕಿತ್ಸೆಗೆ ದಾಖಲಾಗುವ ರೋಗಿಗಳಿಗೆ ಮೊದಲ ವಾರ ಅನಗತ್ಯವಾಗಿ ಸ್ಟಿರಾಯ್ಡ್ ಮಾತ್ರೆಗಳನ್ನು ನೀಡದಂತೆ ವೈದ್ಯರಲ್ಲಿ ಮನವಿ ಮಾಡುತ್ತಿದ್ದೇನೆ. ಚಿಕಿತ್ಸೆ ಆರಂಭಿಸಿದ ಎರಡನೇ ವಾರದಲ್ಲಿ ಅಗತ್ಯವಿದ್ದರೆ ಮಾತ್ರ ವೈದ್ಯರ ನಿಗಾ ವ್ಯವಸ್ಥೆಯಲ್ಲಿ ಸ್ಟಿರಾಯ್ಡ್ ಮಾತ್ರೆ ನೀಡಬಹುದು. ಈ ಕುರಿತು ಎಲ್ಲಾ ವೈದ್ಯರಿಗೂ ಸೂಚನೆ ನೀಡಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದರು.
ಶುಗರ್ ಹೊಂದಿರುವ ರೋಗಿಗಳಿಗೆ ಸ್ಟಿರಾಯ್ಡ್ ಮಾತ್ರೆ ಸೂಕ್ತವಲ್ಲ
ಈಗಾಗಲೇ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಾಗ ಅಂಥವರಿಗೆ ಸ್ಟಿರಾಯ್ಡ್ ಮಾತ್ರೆಗಳನ್ನು ನೀಡುವುದು ಅಷ್ಟೊಂದು ಸೂಕ್ತವಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಏಕೆಂದರೆ ಬೆಂಗಳೂರಿನ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗದಿಂದ 95 ಮಂದಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಪೈಕಿ 75ಕ್ಕೂ ಹೆಚ್ಚು ಮಂದಿ ಅತಿಯಾದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅತಿಯಾದ ಸಕ್ಕರೆ ಕಾಯಿಲೆ ಹೊಂದಿರುವ ರೋಗಿಗಳಿಗೆ ಸ್ಟಿರಾಯ್ಡ್ ನೀಡಿದಾಗ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುವ ಅಪಾಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದ ಇತರೆ ಆಸ್ಪತ್ರೆಯ ರೋಗಿಗಳಲ್ಲೂ ಸಾಮಾನ್ಯವಾಗಿ ಈ ಅಂಶವು ಕಂಡು ಬಂದಿದೆ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.
ಮನೆಗೆ ಹಿಂತಿರುಗಿದ ಒಂದು ವಾರದ ನಂತರ ಮತ್ತೆ ಪರೀಕ್ಷೆ
ಸಕ್ಕರೆ ಕಾಯಿಲೆ ಅಥವಾ ಇತರೆ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಕೊವಿಡ್-19 ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಬಿಡುಗಡೆಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿ ರಚಿಸಲಾಗುತ್ತಿದೆ. ಗುಣಮುಖರ ಬಿಡುಗಡೆಗೂ ಮೊದಲು, ಇಎನ್ಟಿ ತಜ್ಞರಿಂದ ಪರಿಶೀಲನೆ, ಅಗತ್ಯವಿದ್ದರೆ ಎಂಆರ್ಐ ಪರೀಕ್ಷೆ ನಡೆಸಲಾಗುವುದು. ಬಿಡುಗಡೆಯಾಗಿ ಒಂದು ವಾರದ ನಂತರ ಜಿಲ್ಲಾಸ್ಪತ್ರೆಯಲ್ಲಿ ಅವರಾಗಿಯೇ ಬಂದು ಕೊವಿಡ್-19 ನಂತರದ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
Recommended Video
ವಿಡಿಯೋ ಕೌನ್ಸಿಲಿಂಗ್ ಬಗ್ಗೆ ಸಚಿವ ಸುಧಾಕರ್ ಪ್ರಸ್ತಾಪ
ಕೊರೊನಾವೈರಸ್ ನಂತರದ ಚಿಕಿತ್ಸಾ ವಾರ್ಡಿನಲ್ಲಿ ತಪಾಸಣೆಗೆ ಆಗಮಿಸಲು ಸಾಧ್ಯವಾಗದ ಪಕ್ಷದಲ್ಲಿ ವಿಡಿಯೋ ಕಾಲ್ ಕೌನ್ಸಿನಿಂಗ್ ಮಾಡಲಾಗುವುದು. ಕೊವಿಡ್-19 ಸೋಂಕಿತರು ಗುಣಮುಖರಾದ ಬಳಿಕ 15 ದಿನಗಳ ಕಾಲ ಪರಿಶೀಲನೆಗೆ ಒಳಪಡಿಸಲಾಗುವುದು. ಒಂದು ವೇಳೆ ಯಾರಿಗಾದರೂ ರೋಗ ಲಕ್ಷಣ ಕಂಡು ಬಂದಲ್ಲಿ ವಿಡಿಯೋ ಕಾಲ್ ಮೂಲಕ ಪರಿಶೀಲಿಸಿ ಅಗತ್ಯವಿದ್ದರೆ ಆಸ್ಪತ್ರೆಗೆ ಕರೆತರಲು ವ್ಯವಸ್ಥೆ ಮಾಡಲಾಗುವುದು. ಈ ಎಲ್ಲಾ ಅಂಶಗಳನ್ನು ಬಿಡುಗಡೆ ನೀತಿಯಲ್ಲಿ ಅಳವಡಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಅಧಿಕ ಸಕ್ಕರೆ ಅಂಶ ಇರುವ ರೋಗಿಗಳಲ್ಲದೆ, ಸಣ್ಣ ಆಸ್ಪತ್ರೆ ಮತ್ತು ಮನೆಗಳಲ್ಲಿ ಚಿಕಿತ್ಸೆ ಪಡೆದವರಲ್ಲೂ ರೋಗ ಕಾಣಿಸಿಕೊಂಡಿದೆ. ದೀರ್ಘ ಕಾಲ ಚಿಕಿತ್ಸೆ ಪಡೆದವರು, ಹೆಚ್ಚು ಅವಧಿ ಮತ್ತು ಡೋಸ್ಗಳ ಸ್ಟಿರಾಯ್ಡ್ ಪಡೆದವರಲ್ಲೂ ರೋಗ ದೃಢಪಟ್ಟಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಚಿಕಿತ್ಸಾ ವಿಧಾನ ಮತ್ತು ಬಿಡುಗಡೆ ನೀತಿ ಸಿದ್ಧಪಡಿಸಲಾಗುವುದು ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.