ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್ ಆಗಿರುವ ಪ್ರದೇಶಗಳು?
ಬೆಂಗಳೂರು, ಜೂನ್.22: ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಅಟ್ಟಹಾಸ ಮುಂದುವರಿಯುತ್ತಿದ್ದಂತೆ ರಾಜ್ಯ ಸರ್ಕಾರವು ಎಚ್ಚೆತ್ತುಕೊಂಡಿದೆ. ಅತಿಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿರುವ ಪ್ರದೇಶಗಳನ್ನು ಸೀಲ್ ಡೌನ್ ಮತ್ತು ಲಾಕ್ ಡೌನ್ ಮಾಡುವುದಕ್ಕೆ ಸರ್ಕಾರವು ತೀರ್ಮಾನಿಸಿದೆ.
Recommended Video
ಬೆಂಗಳೂರಿನಲ್ಲಿರುವ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
ಕರ್ನಾಟಕದಲ್ಲಿ ಕ್ವಾರೆಂಟೈನ್ ನಿಯಮವೇ ಬದಲು; ಕಾರಣ ಇಲ್ಲಿದೆ
ಬೆಂಗಳೂರಿನಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಮುದಾಯಕ್ಕೆ ಸೋಂಕು ಹರಡುತ್ತಿರುವುದು ಆತಂಕವನ್ನು ಹೆಚ್ಚಿಸಿದೆ. ಇದನ್ನು ತಪ್ಪಿಸುವುದಕ್ಕಾಗಿ ಸಿಲಿಕಾನ್ ಸಿಟಿಯ ನಾಲ್ಕು ಪ್ರದೇಶಗಳನ್ನು ಲಾಕ್ ಡೌನ್ ಹಾಗೂ ಐದು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಸಿಲಿಕಾನ್ ಸಿಟಿಯ ನಾಲ್ಕು ಪ್ರದೇಶಗಳು ಲಾಕ್ ಡೌನ್
ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಅಟ್ಟಹಾಸ ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವವವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದಕ್ಕೆ ಆದೇಶಿಸಲಾಗಿದೆ. ಸಮುದಾಯಕ್ಕೆ ಸೋಂಕು ಹರಡದಂತೆ ಎಚ್ಚರಿಕೆ ವಹಿಸುವುದಕ್ಕಾಗಿ ಬೆಂಗಳೂರಿನ ಜನನಿಬಿಡ ಪ್ರದೇಶ ಎನಿಸಿರುವ ಹಾಗೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿರುವ ಕೃಷ್ಣರಾಜೇಂದ್ರ ಮಾರುಕಟ್ಟೆ, ಚಿಕ್ಕಪೇಟೆ, ಚಾಮರಾಜಪೇಟೆ ಹಾಗೂ ಕಲಾಸಿಪಾಳ್ಯ ಪ್ರದೇಶದ ನಿರ್ದಿಷ್ಟ ವಲಯಗಳನ್ನು ಲಾಕ್ ಡೌನ್ ಮಾಡಲಾಗಿದೆ.
ಸಿಲಿಕಾನ್ ಸಿಟಿ ಐದು ಪ್ರದೇಶಗಳು ಕಂಪ್ಲೀಟ್ ಸೀಲ್ ಡೌನ್
ರಾಜ್ಯ ರಾಜಧಾನಿಯಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ 100ರ ಗಡಿ ದಾಟಿದ್ದು, ಸಮುದಾಯಕ್ಕೆ ಸೋಂಕು ಹರಡಿತಾ ಎಂಬ ಆತಂಕವನ್ನು ಹುಟ್ಟು ಹಾಕಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿದ್ದಾಪುರ, ವಿವಿ ಪುರ, ಕಲಾಸಿಪಾಳ್ಯ, ವಿದ್ಯಾರಣ್ಯಪುರ, ಹಾಗೂ ಧರ್ಮರಾಯ ದೇವಸ್ಥಾನ ವಾರ್ಡ್ ಗಳನ್ನು ಕಂಪ್ಲೀಟ್ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಮೊಬೈಲ್ ಬಿಟ್ಟು ಓಡಾಡಿದರೆ ಕ್ರಿಮಿನಲ್ ಪ್ರಕರಣ
ಕೊರೊನಾವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕಿತರು ಮತ್ತು ಶಂಕಿತರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗುತ್ತದೆ. ಆದರೆ ಸರ್ಕಾರವು ಜಾಪೆ ಕೆಳಗೆ ನುಸುಳಿದರೆ ಕೆಲವರು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಮನೆಯಲ್ಲೇ ಮೊಬೈಲ್ ಗಳನ್ನು ಬಿಟ್ಟು ಬೀದಿ ಬೀದಿ ಸುತ್ತುತ್ತಿದ್ದಾರೆ. ಈ ರೀತಿಯ ವರ್ತನೆಗಳು ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ಚಿಕಿತ್ಸೆಗೆ ದರ ನಿಗದಿ
ಬೆಂಗಳೂರಿನಲ್ಲಿ ಪ್ರತಿನಿತ್ಯ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಷ್ಟೇ ಚಿಕಿತ್ಸೆ ನೀಡುವುದಕ್ಕೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಖಾಸಗಿ ಆಸ್ಪತ್ರೆಗಳಲ್ಲಿನ ಬೆಡ್ ಗಳನ್ನು ಬಳಸಿಕೊಳ್ಳಲಾಗುತ್ತದೆ. ಅದಕ್ಕೆ ಸಂಬಂಧಿಸಿದಂತೆ ನಿಗದಿತ ದರದ ಪಟ್ಟಿಯನ್ನು ಸಂಜೆಯೊಳಗೆ ಪ್ರಕಟಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು.