ಗರ್ಭಿಣಿಯರಿಗೆ 'ಮಾತೃಪೂರ್ಣ' ಭಾಗ್ಯ ನೀಡಿದ ಸಿದ್ದರಾಮಯ್ಯ!
ಗರ್ಭಿಣಿಯರಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ಹೋಗಲಾಡಿಸಲು ಕರ್ನಾಟಕ ಸರ್ಕಾರವು 'ಮಾತೃಪೂರ್ಣ' ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ.
ಬೆಂಗಳೂರು, ಮಾರ್ಚ್ 14: ಗರ್ಭಿಣಿಯರಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ಹೋಗಲಾಡಿಸಲು ಕರ್ನಾಟಕ ಸರ್ಕಾರವು 'ಮಾತೃಪೂರ್ಣ' ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ.
ಮೊದಲ ಹಂತದಲ್ಲಿ ಈ ಯೋಜನೆಯು ಮೈಸೂರಿನ ಹೆಗಡದೇವನಕೋಟೆ, ತುಮಕೂರಿನ ಮಧುಗಿರಿ, ರಾಯಚೂರು ಜಿಲ್ಲೆಯ ಮಾನ್ವಿ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಕಟಿಸಿದೆ.
ನಂತರ ಈ ಯೋಜನೆಯನ್ನು 30 ಜಿಲ್ಲೆಗಳಿಗೂ ವಿಸ್ತರಣೆ ಮಾಡಲು ಸರ್ಕಾರ ಮುಂದಾಗಿದೆ.

ಗರ್ಭಿಣಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೌಷ್ಟಿಕ ಆಹಾರವನ್ನು ನೀಡುವುದರ ಮೂಲಕ ರಕ್ತ ಹೀನತೆಯನ್ನು ತಡಗಟ್ಟುವುದೇ ಈ ಯೋಜನೆಯ ಮೂಲ ಉದ್ದೇಶವಾಗಿದೆ.
ಗರ್ಭಿಣಿ ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕಾಂಶವುಳ್ಳ ತರಕಾರಿ, ಬೇಳೆ ಹಾಗೂ ಬಿಸಿಯೂಟವನ್ನು ನೀಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇದರ ಉಸ್ತುವಾರಿ ನೋಡಿಕೊಳ್ಳುತ್ತದೆ. ಪೌಷ್ಟಿಕಾಂಶದ ಆಹಾರ ಸೇವಿಸಲು ಇಚ್ಛಿಸುವವರು ಪ್ರತಿ ಊಟಕ್ಕೆ 10 ರೂ. ನೀಡಬೇಕು.
ಇತ್ತೀಚೆಗೆ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ವರದಿಯೊಂದನ್ನು ನೀಡಲಾಗಿತ್ತು. ವಿಶೇಷವಾಗಿ ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ. ಮಹಿಳೆಯರಲ್ಲಿ ಅಪೌಷ್ಟಿಕತೆ ಹೆಚ್ಚುತ್ತಿರುವುದರಿಂದ ಮಕ್ಕಳ ಶಾರೀರಿಕ, ಮಾನಸಿಕ ಬೆಳವಣಿಗೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದರ ಬೆನ್ನಲ್ಲೇ ಈ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ.












Click it and Unblock the Notifications