'ಗ್ಯಾರೆಂಟಿ ಸಮಿತಿ ರಚನೆ'ಗೆ ಕೋಟಿ ಕೋಟಿ ಹಣ ಬೇಕು: ಖರ್ಚಿನ ಲೆಕ್ಕ ಕೊಟ್ಟ ಆರ್.ಅಶೋಕ್
ಬೆಂಗಳೂರು, ಜನವರಿ 11: ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಕೋಟ್ಯಂತರು ರೂಪಾಯಿ ಇವರ ಬಳಿ ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಆರ್.ಅಶೋಕ್ ಅವರು, ಬರಗಾಲದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವಾಗಿ ಕಾಂಗ್ರೆಸ್ ಸರ್ಕಾರ 100 ಕೋಟಿ ರೂ.ಬಿಡುಗಡೆಗೊಳಿಸುತ್ತಿದೆ. ನ್ಯಾಯವಾಗಿ 3-4 ಸಾವಿರ ಕೋಟಿ ರೂ. ನೀಡಬೇಕಿತ್ತು ಎಂದರು.

ರೈತರಿಗೆ ಪರಿಹಾರ ನೀಡದ ಸರ್ಕಾರ ಈಗ ಗ್ಯಾರಂಟಿ ಜಾರಿ ಸಮಿತಿಯ 3 ಸಾವಿರ ಕಾಂಗ್ರೆಸ್ ಕಾರ್ಯಕರ್ತರಿಗೆ 25 ಕೋಟಿ ರೂ. ಖರ್ಚು ಮಾಡಲಾಗುತ್ತದೆ. ಅಂದರೆ ಐದು ವರ್ಷಕ್ಕೆ 150 ಕೋಟಿ ರೂ. ಆಗಲಿದೆ. ಕಾಂಗ್ರೆಸ್ ಚೇಲಾಗಳಿಗೆ ಮಜಾ ಮಾಡಲು ಇಷ್ಟು ಹಣ ಖರ್ಚು ಮಾಡಲಾಗುತ್ತಿದೆ. ಅವರಿಗೆ ಕ್ಯಾಬಿನೆಟ್ ದರ್ಜೆ ನೀಡಲಾಗುತ್ತದೆ ಎಂದು ಅರೋಪಿಸಿದರು.
ರೈತರಿಗೆ ಪರಿಹಾರ ಸಿಗುವುದು ಯಾವಾಗ?
ಬರಗಾಲಕ್ಕೆ ತತ್ತರಿಸಿದ ರಾಜ್ಯದ ರೈತರಿಗೆ ಸರ್ಕಾರ ಯಾವಾಗ ಕ್ಯಾಬಿನೆಟ್ ದರ್ಜೆಯ ಗೌರವ ಕೊಟ್ಟು ಪರಿಹಾರ ನೀಡಲಿದೆ ಎಂದು ಅವರು ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದರು.
ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾರ್ಯಕರ್ತರಿಗೆ ಬಿರಿಯಾನಿ, ಮಟನ್ ಊಟ ಹಾಕಲು ಹಣವಿದೆ. ಇದೇ ಹಣವನ್ನು ಶಾಲೆಗಳಿಗೆ ಕೊಡಬಹುದು. ಗ್ಯಾರಂಟಿ ನಿರ್ವಹಣೆಗೆ ಬೇಕಿದ್ದರೆ ಅಧಿಕಾರಿಗಳನ್ನು ಬಳಸಿಕೊಳ್ಳಲಿ. ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿ ತಂತ್ರಾಂಶ ಕೆಲಸ ಮಾಡುತ್ತಿಲ್ಲ. ಇದರ ಬಗ್ಗೆ ಗಮನಹರಿಬೇಕು ಎಂದು ಅವರು ಆಗ್ರಹಿಸಿದರು.

ಇವರು ಸಮಾರಂಭಕ್ಕೆ ಬರದಿರುವುದೇ ಲೇಸು
ಕಾಂಗ್ರೆಸ್ನವರ ದುರ್ಬುದ್ಧಿ ಹಿಂದೆಯೇ ಕಂಡಿದ್ದೇವೆ. ರಾಮಾಯಣ ಕಾಲ್ಪನಿಕ, ರಾಮನೇ ಇಲ್ಲ ಎಂದು ಅವರು ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಲಕ್ಷಾಂತರ ದಾಖಲೆಗಳು ಸಿಗುತ್ತದೆ. ಆದರೂ ರಾಮನ ಜನ್ಮ ಪ್ರಮಾಣಪತ್ರವನ್ನು ಕೇಳಿ ಪಾಪ ಕಟ್ಟಿಕೊಂಡ ಕಾಂಗ್ರೆಸ್ ನಾಯಕರು ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಬರದೇ ಇರುವುದು ಲೇಸು ಎಂದು ವಾಗ್ದಾಳಿ ನಡೆಸಿದರು.
ಲಾಲ್ಕೃಷ್ಣ ಅಡ್ವಾಣಿಯವರು ಮಂದಿರ ಕಟ್ಟಲು ಹೋರಾಟ ನಡೆಸಿದಾಗ ಅವರನ್ನು ಕಾಂಗ್ರೆಸ್ ನಾಯಕರು ಹಾಗೂ ಲಾಲೂ ಪ್ರಸಾದ್ ಯಾದವ್ ಜೈಲಿಗೆ ಕಳುಹಿಸಿದ್ದರು. ಆಗ ಜೈಲಿಗೆ ಕಳಿಸಿ ಈಗ ಅವರ ಪರ ಮಾತನಾಡುವ ಈ ನಾಯಕರಿಗೆ ಎರಡು ನಾಲಿಗೆ ಇದೆಯೇ ಎಂದು ದೂರಿದರು.
ಪ್ರತಿಭಟನಾನಿರತ ಶಿಕ್ಷಕರ ಅಹವಾಲು ಕೇಳಿದ ಆರ್.ಅಶೋಕ್
ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟಿಸುತ್ತಿದ್ದ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ಅಹವಾಲು ಆಲಿಸಿ ಮಾತನಾಡಿದ ಆರ್.ಅಶೋಲ್ ಕಾಂಗ್ರೆಸ್ ನಾಯಕರು ಮತಕ್ಕಾಗಿ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ನೇಮಕಾತಿ ಸೇರಿದಂತೆ ಎಲ್ಲ ಬಗೆಯ ನೇಮಕಾತಿಗಳನ್ನು ಮಾಡುತ್ತೇವೆ ಎಂದು ಹೇಳಿದ್ದರು. ಗೆದ್ದ ನಂತರ ಈಗ ಕೈ ಕೊಟ್ಟಿದ್ದಾರೆ. ಕೈ ಕೊಡುವುದರಲ್ಲೇ ಇವರು ಪರಿಣತರಾಗಿದ್ದಾರೆ.
ಶಿಕ್ಷಕರ ಪ್ರತಿಭಟನೆಗೆ ಬಿಜೆಪಿ ಬೆಂಬಲ
ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ ನಡೆಯಬೇಕಿತ್ತು. ಹೊರಗುತ್ತಿಗೆ ಶಿಕ್ಷಕರಿಗೆ ಮೊದಲಿನಂತೆ ನೇರ ಸಂಬಳ ನೀಡುವ ಬೇಡಿಕೆಯನ್ನು ನಾನು ಕೂಡ ಬೆಂಬಲಿಸುತ್ತೇನೆ ಎಂದು ಹೇಳಿದರು.
ಪ್ರತಿಭಟನೆ ಮಾಡುವುದು ಪ್ರತಿ ನಾಗರಿಕರ ಹಕ್ಕು. ಅದನ್ನು ಇಷ್ಟೇ ಸಮಯ ಮಾಡಬೇಕು ಎನ್ನಲು ಯಾರಿಗೂ ಅಧಿಕಾರ ಇಲ್ಲ. ಈ ತುಘಲಕ್ ಸರ್ಕಾರ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವುದೂ ಇಲ್ಲ, ಪ್ರತಿಭಟನೆಗೂ ಅವಕಾಶ ನೀಡುವುದಿಲ್ಲ. ಪೊಲೀಸ್ ಅಧಿಕಾರಿಗಳು ಕಾನೂನು ಪಾಲಿಸಬೇಕೆ ಹೊರತು ಪ್ರತಿಭಟಕಾನಾರರನ್ನು ಓಡಿಸಬಾರದು. ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ಪ್ರವೃತ್ತಿ ಸರ್ಕಾರಕ್ಕೆ ತಿರುಗುಬಾಣವಾಗಲಿದೆ ಎಂದು ಎಚ್ಚರಿಸಿದರು.












Click it and Unblock the Notifications