ಸರ್ಕಾರಿ ನೌಕರರ ವೇತನ ಶೇ. 17ರಷ್ಟು ಹೆಚ್ಚಳ; ಆದೇಶದಲ್ಲಿ ಏನಿದೆ?
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ವೇತನ ಶೇ 17ರಷ್ಟು ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು, ಮಾರ್ಚ್ 01; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಬಳಿಕ ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಬುಧವಾರದಿಂದ ಸರ್ಕಾರಿ ನೌಕರರು 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ.
ಬುಧವಾರ ಬೆಳಗ್ಗೆ ಹಣಕಾಸು ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣದಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಬಳಿಕ ಮಾತನಾಡಿ, "ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನ ಆಗಿದೆ. ಈ ಕುರಿತು ಅಧಿಕೃತ ಆದೇಶ ಪ್ರಕಟವಾಗಲಿದೆ" ಎಂದು ಹೇಳಿದ್ದರು.

ಈಗ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಶೇ 17ರಷ್ಟು ವೇತನ ಹೆಚ್ಚಳದ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಆದೇಶ 2023ರ ಏಪ್ರಿಲ್ನಿಂದ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆದೇಶದ ವಿವರ
ವಿಷಯ: ರಾಜ್ಯ ಸರ್ಕಾರಿ ನೌಕರರಿಗೆ ತಾತ್ಕಾಲಿಕ ಪರಿಹಾರ ಮಂಜೂರಾತಿ
ಪ್ರಸ್ತಾವನೆ: ಮೇಲೆ ಓದಲಾದ ದಿನಾಂಕ 19/11/2022ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆ. ಅದರಂತೆ, ಈ ಕೆಳಕಂಡ ಅದೇಶವನ್ನು ಹೊರಡಿಸಲಾಗಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.

ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ "ಮೂಲ ವೇತನ" ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, (ಆ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವ್ಯಯಕ್ತಿಕ ವೇತನ, (ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
ಸರ್ಕಾರದ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶವು ಅನ್ವಯಿಸುತ್ತದೆ.
ಸ್ಥಳೀಯ ಸಂಸ್ಥೆಗಳ (ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯ) ನೌಕರರಿಗೆ ಸೌಲಭ್ಯವನ್ನು ಮಂಜೂರು ಮಾಡುವುದರಿಂದ ಉಂಟಾಗುವ ವಚ್ಚವನ್ನು ಅನ್ವಯಿಸುವ ಸ್ಥಳೀಯ ಸಂಸ್ಥೆಗಳೇ ಭರಿಸತಕ್ಕದ್ದು.
ಯುಜಿಸಿ/ ಎಐಸಿಟಿಇ/ ಐಸಿಎಆರ್/ ಎನ್ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್ಜೆಪಿಸಿ ಪಿಂಚಣಿದಾರರಿಗೆ ಈ ಆದೇಶವು ಅನ್ವಯಿಸುವುದಿಲ್ಲ. ತಾತ್ಕಾಲಿಕ ಪರಿಹಾರದ ಕಾರಣದಿಂದ ಸಂದಾಯ ಮಾಡಲು ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಶಗಳನ್ನು ಮುಂದಿನ ರೂಪಾಯಿಗೆ ಪೂರ್ಣಾಂಕಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
ಈ ಆದೇಶದ ಮೂಲಕ ಮಂಜೂರಾದ ತಾತ್ಕಾಲಿಕ ಪರಿಹಾರದ ಮೊತ್ತವು ವಿಶಿಷ್ಠ ಸಂಭಾವನೆಯಾಗಿದ್ದು, ಇದು ನಿವೃತ್ತಿ ಸೌಲಭ್ಯ/ ತುಟ್ಟಿಭತ್ಯೆಯನ್ನು ನಿರ್ಧರಿಸುವಾಗ ಅಥವ ಬೇರೆ ಯಾವುದೇ ಉದ್ದೇಶಗಳಿಗೆ ಪರಿಗಣಿಸತಕ್ಕದ್ದಲ್ಲ. ಈ ತಾತ್ಕಾಲಿಕ ಪರಿಹಾರದ ವೆಚ್ಚವನ್ನು ವೇತನ ವೆಚ್ಚವನ್ನು ಭರಿಸುವಾಗ ಲೆಕ್ಕ ಶೀರ್ಷಿಕೆಯಿಂದಲೇ ಭರಿಸತಕ್ಕದ್ದು.












Click it and Unblock the Notifications