ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ
ಬೆಂಗಳೂರು, ಆಗಸ್ಟ್ 30: ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.
ಕೇರಳದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಲಸಿಕೆ ಪಡೆದಿರುವ ಪ್ರಮಾಣಪತ್ರವಿರಲಿ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಏನೇ ಇರಲಿ ಕೇರಳದಿಂದ ಬರುವ ಪ್ರಯಾಣಿಕರಿಗೆ ಒಂದು ವಾರದ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿರುತ್ತದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊಡಗು, ಹಾಸನ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಸಡಿಲಗೊಳಿಸಲಾಗಿದೆ ಎಂದು ತಿಳಿಸಿದರು.
ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿದ್ದು, ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ಕೊರೊನಾ ಪರೀಕ್ಷಾ ಕಾರ್ಯತಂತ್ರವನ್ನು ರಾಜ್ಯ ಸರ್ಕಾರ ಬದಲಾಯಿಸಲಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾಜಾರ್ಜ್ ತಿಳಿಸಿದ್ದಾರೆ.
ದೇಶದಲ್ಲಿಯೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಕೇರಳದಲ್ಲಿ ದಾಖಲಾಗಿವೆ. ದೇಶದ ಮುಕ್ಕಾಲು ಪ್ರಕರಣಗಳು ಕೇರಳವೊಂದರಿಂದಲೇ ಪತ್ತೆಯಾಗಿವೆ. ಅಗತ್ಯ ಕ್ರಮಗಳ ಹೊರತಾಗಿಯೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರದೇ ಇರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ರಾಜ್ಯದಲ್ಲಿ ಕೊರೊನಾ ಏರಿಕೆ ಹಿನ್ನೆಲೆಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಕೇಂದ್ರ ಸರ್ಕಾರ ಹೆಚ್ಚು ಪಾಸಿಟಿವಿಟಿ ದರ ಇರುವ ಕಡೆಗಳಲ್ಲಿ ನೈಟ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು.
ಕೇರಳದಲ್ಲಿ ಕೊರೊನಾ ಏರಿಕೆ ಕುರಿತು ಈಚೆಗೆ ಮಾಹಿತಿ ನೀಡಿದ್ದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, 'ರಾಜ್ಯದಲ್ಲಿ ಮನೆಯೊಳಗೇ ಕೊರೊನಾ ಸೋಂಕಿನ ಹರಡುವಿಕೆ ಹೆಚ್ಚಾಗುತ್ತಿದೆ' ಎಂದಿದ್ದಾರೆ.
ಸದ್ಯಕ್ಕೆ ರಾಜ್ಯದ ಕೊರೊನಾ ಅಂಕಿ ಸಂಖ್ಯೆಗಳನ್ನು ಗಮನಿಸಿದರೆ, ಕೊರೊನಾ ಸೋಂಕಿನ ಹರಡುವಿಕೆ ಮನೆಯೊಳಗೇ ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಇಂಥ ಪ್ರಕರಣಗಳು ರಾಜ್ಯದಲ್ಲಿ ಅಧಿಕವಿದೆ ಎಂದಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಈ ಸಂಬಂಧ ಅಧ್ಯಯನ ನಡೆಸಿದ್ದು, ಈ ಮಾಹಿತಿ ಪ್ರಕಾರ 35% ಕೊರೊನಾ ಪ್ರಕರಣಗಳು ಮನೆಯ ಪರಿಧಿಯೊಳಗೇ ಹರಡಿದ್ದಾಗಿದೆ' ಎಂದು ತಿಳಿಸಿದ್ದರು.
ಜಿಲ್ಲೆಗಳಲ್ಲಿ ಲಸಿಕಾ ಸ್ಥಿತಿಯನ್ನು ಆಧರಿಸಿ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹೆಚ್ಚು ಜನರಿಗೆ ಕೊರೊನಾ ಪರೀಕ್ಷೆಗಳನ್ನು ನಡೆಸಲು ಸೂಚಿಸಲಾಗಿದೆ. ಸಮುದಾಯದಲ್ಲಿ ಕೊರೊನಾ ಹರಡುವಿಕೆಯ ನಿಖರ ಪ್ರಮಾಣ ಪತ್ತೆ ಹಚ್ಚಲು ಕರೊನಾ ಪರೀಕ್ಷೆಯನ್ನು ಚುರುಕುಗೊಳಿಸಲಾಗಿದೆ. ಸೆಂಟಿನಲ್ ಹಾಗೂ ರಾಂಡಮ್ ಪರೀಕ್ಷೆ ಆಧಾರದಲ್ಲಿ ಕೊರೊನಾ ಹರಡುವಿಕೆಯನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದರು.
ಲಸಿಕೆಯ ಮೊದಲ ಡೋಸ್ ಅನ್ನು ಶೇ 80ಕ್ಕಿಂತ ಹೆಚ್ಚು ನೀಡಿರುವ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳು, ಅಂದರೆ ಗಂಟಲು ನೋವು, ಕೆಮ್ಮಿನಂಥ ಲಕ್ಷಣಗಳು ಕಂಡುಬಂದ ವ್ಯಕ್ತಿಗಳಿಗೆ ಆರ್ಟಿಪಿಸಿಆರ್ ಪರೀಕ್ಷೆಯನ್ನು ಶಿಫಾರಸು ಮಾಡಲಾಗಿದೆ ಎಂದರು.
ದೇಶದಲ್ಲೇ ಅತಿಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿರುವ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಸೇರಿದಂತೆ ಸೋಂಕು ನಿಯಂತ್ರಣ ಸಲಕ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.
ಕೇರಳದಲ್ಲಿ ಕಳೆದ 3 ದಿನದಿಂದ ನಿತ್ಯ 30 ಸಾವಿರಕ್ಕೂ ಹೆಚ್ಚು ಹಾಗೂ ಮಹಾರಾಷ್ಟ್ರದಲ್ಲಿ ಸುಮಾರು 5 ಸಾವಿರ ಕೇಸುಗಳು ದಾಖಲಾಗುತ್ತಿವೆ. ದೇಶದ ಒಟ್ಟು ಸುಮಾರು 45 ಸಾವಿರ ಪ್ರಕರಣಗಳಲ್ಲಿ ಈ ರಾಜ್ಯಗಳ ಪಾಲೇ ಸುಮಾರು 35 ಸಾವಿರ ಆಗಿದೆ.
ಅತಿಹೆಚ್ಚು ಸೋಂಕು ಪತ್ತೆಯಾಗುತ್ತಿರುವ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯ ಬಗ್ಗೆ ಪರಿಶೀಲನೆ ಹಾಗೂ ಇಂಥ ಪ್ರದೇಶಗಳಲ್ಲಿ ಸೋಂಕಿತರ ಜತೆಗಿನ ಸಂಪರ್ಕಿತರ ಪತ್ತೆ, ಲಸಿಕೆ ಅಭಿಯಾನಕ್ಕೆ ಚುರುಕು, ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಕಟ್ಟುನಿಟ್ಟುಗೊಳಿಸುವಂತೆ ಸಲಹೆ ನೀಡಲಾಗಿದೆ.
ಈ ಸಂಬಂಧ ಎರಡೂ ರಾಜ್ಯಗಳ ಜತೆ ಸಭೆ ನಡೆಸಿದ ಕೇಂದ್ರ ಗೃಹ ಸಚಿವಾಲಯ, ಸೋಂಕು ನಿಯಂತ್ರಣಕ್ಕೆ ಕೇರಳ ಮತ್ತು ಮಹಾರಾಷ್ಟ್ರ ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಪಡೆಯಿತು.
Recommended Video

ಆ ಬಳಿಕ ಸೋಂಕು ನಿಯಂತ್ರಣಕ್ಕೆ ಈ ಎರಡೂ ರಾಜ್ಯಗಳು ಮತ್ತಷ್ಟುಕ್ರಮಗಳನ್ನು ಕೈಗೊಳ್ಳಲೇಬೇಕಿದೆ. ರಾತ್ರಿ ಕರ್ಫ್ಯೂನಂತಹ ನಿಯಮಗಳನ್ನು ಜಾರಿಗೊಳಿಸಬೇಕು ಎಂದಿತು. ಇದರ ಬೆನ್ನಲ್ಲೇ ಶುಕ್ರವಾರ ಆರೋಗ್ಯ ಸಚಿವಾಲಯ ಕೂಡ ಬಿಗಿ ನಿಯಮಗಳನ್ನು ಕೈಗೊಳ್ಳಬೇಕು ಎಂದೂ ನಿರ್ದೇಶಿಸಿದೆ.












Click it and Unblock the Notifications