ಕರ್ನಾಟಕದಲ್ಲಿ ಹೆಚ್ಚಾದ ಕೊರೊನಾ: ಲಾಕ್ಡೌನ್ ಜಾರಿಯಿಲ್ಲ ಆದರೆ ಗಮನಿಸಿ!
ಬೆಂಗಳೂರು, ಸೆ. 30: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹಬ್ಬುತ್ತಿರುವುದು ಸರ್ಕಾರಕ್ಕೆ ಸವಾಲಾಗಿದೆ. ರಾಜ್ಯದಲ್ಲಿ ಲಾಕ್ಡೌನ್ ನಿಯಮಗಳನ್ನು ಸಡಿಲಿಸಿದ ಬಳಿಕ ಸೋಂಕು ಹರಡುವುದು ತೀವ್ರವಾಗಿದೆ. ಇದರಿಂದಾಗಿ ಮರಣ ಪ್ರಮಾಣ ಕೂಡ ಹೆಚ್ಚಾಗುವ ಸಾಧ್ಯತೆಯಿದೆ. ಮರಣ ಪ್ರಮಾಣವನ್ನು ಕಡಿಮೆಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳಿಗೆ ಸೂಚಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತಷ್ಟು ಕಠಿಣಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
ಕೊರೊನಾ ವೈರಸ್ ನಿಯಂತ್ರಣ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ. ಮಾಸ್ಕ್ ಧರಿಸದ, ಭೌತಿಕ ಅಂತರ ಕಾಯ್ದುಕೊಳ್ಳದ, ಸಭೆ ಸಮಾರಂಭ ನೆಪದಲ್ಲಿ ಜನದಟ್ಟಣೆಗೆ ಅವಕಾಶ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಒಂದೆರಡು ದಿನದಲ್ಲಿ ಈ ಬಗ್ಗೆ ಅಧಿಕೃತ ಆದೇಶ ಹೊರಬರಲಿದ್ದು, ಸರ್ಕಾರ ಏನು ಕ್ರಮಕೈಗೊಳ್ಳಲಿದೆ ಎಂಬುದರ ಸಂಪೂರ್ಣ ವಿವರ ಮುಂದಿದೆ.
ಲಾಕ್ಡೌನ್ ಬಳಿಕ ಎಷ್ಟೇ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈಗಿರುವ ಏಕೈಕ ಮಾರ್ಗವೆಂದರೆ ಕಠಿಣ ಕಾನೂನು ಜಾರಿಗೆ ತರುವುದು. ಸರಕಾರದ ಮಾರ್ಗಸೂಚಿ ಅನುಸರಿಸದವರ ವಿರುದ್ಧ ಕಠಿಣ ಶಿಕ್ಷೆ ಹಾಗೂ ದಂಡ ಪ್ರಯೋಗ ಅನಿವಾರ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಸಭೆ ಸಮಾರಂಭಗಳು ಹೆಚ್ಚಾಗಿದ್ದು, ಜನರು ಗುಂಪುಗೂಡಿ ಭಾಗವಹಿಸುತ್ತಿದ್ದಾರೆ. ಇದರಿಂದ ಸೋಂಕು ವೇಗವಾಗಿ ಹರಡುತ್ತಿರುವುದು ಗಮನಕ್ಕೆ ಬಂದಿದೆ. ಇಂಥ ಸಮಾರಂಭಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಸೋಂಕು ಹೆಚ್ಚಿರುವ ಜಿಲ್ಲಾಡಳಿತಗಳ ಜೊತೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈಗಾಗಲೇ ತಜ್ಞರು ಮತ್ತು ಅಧಿಕಾರಿಗಳು ಕೆಲ ಸಲಹೆಗಳನ್ನು ನೀಡಿದ್ದಾರೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.

ಅನುಭವ ಹಂಚಿಕೊಂಡು ಆತಂಕ ನಿವಾರಿಸಿ
ಕೊರೊನಾ ಜತೆಗಿನ ಯುದ್ಧ ಮುಗಿದಿಲ್ಲ. ಸರ್ಕಾರದ ಜತೆ ಸಾರ್ವಜನಿಕರು ಕೈಜೋಡಿಸಿದರೆ ಮಾತ್ರ ಗೆಲುವು ಸಾಧ್ಯ. ಸಮಾಜದ ಎಲ್ಲಾ ಕ್ಷೇತ್ರದ ಗಣ್ಯರು, ವಿಶೇಷವಾಗಿ ಯುವಕರು, ಸಂಘ - ಸಂಸ್ಥೆಗಳು ಹೋರಾಟದಲ್ಲಿ ಕೈ ಜೋಡಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸರ್ಕಾರ ನೀಡುತ್ತಿರುವ ಉಚಿತ ಚಿಕಿತ್ಸೆ ಮತ್ತು ಕೈಗೊಂಡಿರುವ ಕ್ರಮಗಳ ಬಗ್ಗೆ ಗುಣಮುಖ ರಾದವರು ನೆರೆಹೊರೆಯವರ ಜತೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಆತಂಕ ನಿವಾರಿಸಬೇಕು.
ಅಂತ್ಯ ಸಂಸ್ಕಾರ ದಲ್ಲಿ ಮೃತರ ಕುಟುಂಬದ ಸದಸ್ಯರು ಪಿಪಿಇ ಧರಿಸಿ ಪಾಲ್ಗೊಳ್ಳಲು ಅನುಮತಿ ನೀಡುವ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ. ಸುಧಾಕರ್ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

ಸೆಲೆಬ್ರಿಟಿಗಳಿಂದ ಜಾಗೃತಿ
ಕೊರೊನಾ ವೈರಸ್ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ಸರ್ಖಾರದೊಂದಿಗೆ ಸಿನಿಮಾ ತಾರೆಯರು, ಧಾರ್ಮಿಕ ಮುಖಂಡರು, ರಾಜಕೀಯ ನಾಯಕರು, ಕಲಾವಿದರು, ವಿಶೇಷ ವ್ಯಕ್ತಿಗಳ ಜೊತೆಗೂಡಿ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಿದ್ದೇವೆ. ಜೊತೆಗೆ ಜನರು ಸಹ ಸ್ವಯಂ ಪ್ರೇರಿತರಾಗಿ ಜಾಗೃತರಾಗಬೇಕು ಎಂದು ಡಾ. ಸುಧಾಕರ್ ಹೇಳಿದ್ದಾರೆ.
ರಾಜ್ಯದ 11 ಜಿಲ್ಲೆಗಳ ಪೈಕಿ 7 ಜಿಲ್ಲೆಗಳಲ್ಲಿ ಶೇ.12 ರಷ್ಟು ಪಾಸಿಟಿವ್ ಸಂಖ್ಯೆ ದಾಖಲಾಗಿದೆ. ಆದರೆ ಸಾವಿನ ಪ್ರಮಾಣದಲ್ಲಿ ರಾಜ್ಯ ಶೇ. 1.5 ರಷ್ಟಿದ್ದು ನಿಯಂತ್ರಣದಲ್ಲಿದೆ. ಈ ಪ್ರಮಾಣವನ್ನು ಶೇ. 1 ಕ್ಕಿಂತ ಕೆಳಗಿಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

ಮಾಧ್ಯಮ ಕಾರ್ಯಾಗಾರ
ಕೊರೊನಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ದೊಡ್ಡದು. ಹೀಗಾಗಿ ಮಾಧ್ಯಮದವರಿಗಾಗಿ ವಿಶೇಷ ಕಾರ್ಯಗಾರವನ್ನು ಆಯೋಸುವ ನಡೆಸುವ ಸಲಹೆ ಸರ್ಕಾರಕ್ಕೆ ಹೋಗಿದೆ. ಮಾಧ್ಯಮದವರಿಗೆ ಈ ವಾರದೊಳಗೆ ಕಾರ್ಯಾಗಾರವನ್ನು ಆಯೋಜನೆ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಸಧ್ಯ ಮಾಸ್ಕ್ ಮಾತ್ರ ಲಸಿಕೆ
ಕೊರೊನಾ ವೈರಸ್ ಸೋಂಕಿಗೆ ಮಾಸ್ಕ್ ಧರಿಸುವುದೇ ಸಧ್ಯಕ್ಕಿರುವ ಲಸಿಕೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಅದರಂತೆ ನಾವೆಲ್ಲರೂ ಮಾಸ್ಕ್ ಧರಿಸುವ ಮೂಲಕ ಕೊರೋನ ನಿಯಂತ್ರಿಸಬೇಕಾಗಿದೆ. ನಾವಿನ್ನೂ ಕೊರೊನಾ ಯುದ್ಧದ ಮಧ್ಯೆ ಭಾಗದಲ್ಲಿದ್ದೇವೆ. ನಮ್ಮ ಬಳಿ ಇರುವ ಶಸ್ತ್ರಾಸ್ತ್ರ ಎಂದರೆ ಮಾಸ್ಕ್ ಮಾತ್ರ.
ಇದನ್ನು ಕೆಳಗಿಡುವುದು ಬೇಡ, ಜನರು ಹೆಚ್ಚಾಗಿ ಜಾಗೃತರಾಗಬೇಕು, ಇದರ ಹೊರತು ಕೊರೊನಾ ನಿಯಂತ್ರಣ ಅಸಾಧ್ಯ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಟೆಸ್ಟಿಂಗ್ ಪ್ರಮಾಣವನ್ನು ಮೂರುಪಟ್ಟು ಹೆಚ್ಚಿಸಲು ಸೂಚನೆ ನೀಡಿದ್ದಾರೆ, ಅಂತೆಯೇ ಎಲ್ಲಾ ಅಧಿಕಾರಿಗಳಿಗೂ ನಿರ್ದೇಶನ ನೀಡಿದ್ದು, ಹಂತಹಂತವಾಗಿ ಹೆಚ್ಚಿಸಲಿದ್ದೇವೆ ಎಂದು ಡಾ. ಸುಧಾಕರ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.












Click it and Unblock the Notifications