ಕಲಬುರಗಿಯಲ್ಲಿ ಉರ್ದು ವಿವಿ ಸ್ಥಾಪಿಸುವ ಪ್ರಸ್ತಾವನೆ ತಿರಸ್ಕಾರ
ಬೆಂಗಳೂರು, ಅಕ್ಟೋಬರ್ 26 : ಕಲಬುರಗಿಯಲ್ಲಿ ಉರ್ದು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ನಿರ್ಧಾರದಿಂದ ಕರ್ನಾಟಕ ಸರ್ಕಾರ ಹಿಂದೆ ಸರಿದಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಪ್ರಸ್ತಾವನೆ ಸಿದ್ಧವಾಗಿತ್ತು.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ಗೆ ಉರ್ದು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಕೆಲವು ದಿನಗಳ ಹಿಂದೆ ನಡೆದ ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯಲ್ಲಿ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ.
ಬಾಗಿಲು ಮುಚ್ಚುತ್ತಿರುವ ಉರ್ದು ಶಾಲೆಗಳು: ತನ್ವೀರ್ ಸೇಠ್ ಕಳವಳ
ಈಗ ವಿಶ್ವವಿದ್ಯಾಲಯಗಳಲ್ಲಿರುವ ಉರ್ದು ಕೋರ್ಸ್ಗಳಿಗೆ ಹೆಚ್ಚಿನ ಬೇಡಿಕೆ ಇಲ್ಲ. ಆದ್ದರಿಂದ, ಪ್ರತ್ಯೇಕ ವಾದ ಉರ್ದು ವಿಶ್ವವಿದ್ಯಾಲವನ್ನು ಸ್ಥಾಪನೆ ಮಾಡುವ ಅಗತ್ಯವಿಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಆದ್ದರಿಂದ, ಪ್ರಸ್ತಾವನೆ ಕೈ ಬಿಡಲಾಗಿದೆ.
ಮೊದಲು ಉರ್ದು ವಿವಿ ಆಮೇಲೆ ಸಂಸ್ಕೃತ ವಿವಿ
ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಹಿಂದಿನ ಸರ್ಕಾರ ಉರ್ದು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಪ್ರಸ್ತಾವನೆ ಮುಂದಿಟ್ಟಿತ್ತು. ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಈ ಪ್ರಸ್ತಾವನೆ ಕೈ ಬಿಡಲಾಗಿದೆ' ಎಂದರು.
ವಿಶ್ವವಿದ್ಯಾಲಯಗಳಲ್ಲಿ ಈಗಿರುವ ಉರ್ದು ಕೋರ್ಸ್ಗಳಿಗೆ ವರ್ಷದಿಂದ ವರ್ಷಕ್ಕೆ ಪ್ರವೇಶಾತಿ ಕಡಿಮೆಯಾಗುತ್ತಿದೆ. ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಬದಲು ಈಗಿರುವ ಕೋರ್ಸ್ಗಳ ಪ್ರವೇಶಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಸೂಚನೆ ನೀಡಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಉರ್ದು ವಿಶ್ವವಿದ್ಯಾಲಯವನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡುವ ಬಗ್ಗೆ ಪ್ರಸ್ತಾವನೆ ಸಿದ್ಧವಾಗಿತ್ತು. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಸಮಯದಾಯದ ಜನರು ಹೆಚ್ಚಾಗಿ ಇರುವುದಿಂದ ಅಲ್ಲಿ ವಿವಿ ಸ್ಥಾಪಿಸಲು ಯೋಚಿಸಲಾಗಿತ್ತು.