ಜುಲೈ 25ರಿಂದ ಧಾರ್ಮಿಕ ಸ್ಥಳಗಳಲ್ಲಿ ಪೂಜೆಗೆ ಅವಕಾಶ: ಸರ್ಕಾರ ಆದೇಶ
ಬೆಂಗಳೂರು, ಜುಲೈ 24: ಧಾರ್ಮಿಕ ಸ್ಥಳಗಳಲ್ಲಿ ಜುಲೈ 25ರಿಂದ ಪೂಜೆ ಹಾಗೂ ಸೇವೆಗೆ ಅವಕಾಶ ನೀಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಎಲ್ಲಾ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ಭಾನುವಾರದಿಂದ ಭಕ್ತರು ಪ್ರಾರ್ಥನೆ, ಸೇವೆ ಸಲ್ಲಿಸುವುದಕ್ಕೆ ಕಂದಾಯ ಇಲಾಖೆ ಅನುಮತಿ ನೀಡಿದೆ.
ಶನಿವಾರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ, ಕಾರ್ಯದರ್ಶಿ ಆಗಿರುವ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮಾತನಾಡಿ, ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಭಾನುವಾರದಿಂದ ಧಾರ್ಮಿಕ ಸ್ಥಳಗಳಲ್ಲಿ ಸೇವೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಜಾತ್ರೆ, ದೇವಸ್ಥಾನದ ಹಬ್ಬಗಳು, ಮೆರವಣಿಗೆ, ಸಮಾವೇಶಗಳಿಗೆ ಅನುಮತಿ ಇರುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ರಾಜ್ಯಾದ್ಯಂತ ಮನರಂಜನಾ ಪಾರ್ಕ್ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಜಲ ಕ್ರೀಡೆಗೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೊರೊನಾ ಲಾಕ್ಡೌನ್ ಜಾರಿಯಾದ ನಂತರ ಧಾರ್ಮಿಕ ಸ್ಥಳಗಳಿಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿತ್ತು. ದರ್ಶನಕ್ಕೆ ಸೀಮಿತಗೊಳಿಸಿ ಜುಲೈ ಮೊದಲ ವಾರ ಆದೇಶ ಹೊರಡಿಸಲಾಗಿತ್ತು. ಇದೀಗ ಯಾವುದೇ ರೀತಿಯ ಪೂಜೆ ಅಥವಾ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ.