ಕರ್ನಾಟಕದಲ್ಲಿ ಕೊರೊನಾ ಕಡಿವಾಣಕ್ಕೆ ಹೈಕೋರ್ಟ್ ಮಾರ್ಗದರ್ಶನ!
ಬೆಂಗಳೂರು, ಮಾರ್ಚ್ 26: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ರಾಜ್ಯದ ಜನರು ಕೊವಿಡ್-19 ಸೋಂಕಿನ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಬೇಕಿದೆ ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ರಾಜ್ಯದಲ್ಲಿ ಕೊವಿಡ್-19 ಸೋಂಕಿನಿಂದ ಸಾಮಾನ್ಯ ವರ್ಗದ ಜನರು ಅನುಭವಿಸುತ್ತಿರುವ ನರಕಯಾತನೆ ಬಗ್ಗೆ ಎರಡು ಸುಮೋಟೋ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು. ಕೊರೊನಾವೈರಸ್ ಲಸಿಕೆ ವಿತರಣೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತು.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಕೊಳಗೇರಿ ಮತ್ತು ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಪ್ರದೇಶಗಳಲ್ಲಿ ಅರ್ಹ ಫಲಾನುಭವಿಗಳು ಲಸಿಕೆ ಹಾಕಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಮನವೊಲಿಸುವ ಕಾರ್ಯ ಮಾಡಬೇಕಿದೆ ಎಂದು ಕೋರ್ಟ್ ಕಾಳಜಿ ತೋರಿದೆ. ಕೊವಿಡ್-19 ಲಸಿಕೆ ಬಗ್ಗೆ ಹೈಕೋರ್ಟ್ ನೀಡಿದ ಸಲಹೆ ಮತ್ತು ಸರ್ಕಾರ ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ಹಿಂದುಳಿದ, ದುರ್ಬಲರಾದವರಿಗೆ ಲಸಿಕೆ
ರಾಜ್ಯದಲ್ಲಿ ಕಟ್ಟಡ ಕಾರ್ಮಿಕರು, ಕೂಲಿ ಕೆಲಸ ಮಾಡಿಕೊಂಡು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಜನರಿಗೆ ಕೊರೊನಾವೈರಸ್ ಲಸಿಕೆ ನೀಡುವತ್ತ ಸರ್ಕಾರವು ಆದ್ಯತೆ ನೀಡಬೇಕು. ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದರಿಗೂ ಲಸಿಕೆ ತಲುಪಿದಾಗ ಮಾತ್ರ ಕೊವಿಡ್-19 ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ. ಭಾರತೀಯ ಸಂವಿಧಾನದ 21ನೇ ವಿಧಿಯ ಪ್ರಕಾರ, ಜೀವನ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವತ್ತೆ ಸರ್ಕಾರ ಕಾರ್ಯಪ್ರವೃತ್ತವಾಗಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಹೊಸ ಮಾರ್ಗಸೂಚಿ
ರಾಜ್ಯದಲ್ಲಿ ಕೊರೊನಾವೈರಸ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ದುಬಾರಿ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ/ಸ್ಥಳಗಳ ಮಾಲೀಕರಿಗೆ 5,000 ರೂಪಾಯಿ ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ 10,000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಸ್ಕ್ ಹಾಕಿಕೊಳ್ಳದಿದ್ದರೆ 250 ರೂ ದಂಡ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾವೈರಸ್ ಶಿಷ್ಟಾಚಾರ ಪಾಲನೆ ಮಾಡದೇ ಮಾಸ್ಕ್ ಧರಿಸದೇ ಸಂಚರಿಸುವವರಿಗೆ 250 ರೂಪಾಯಿ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಘೋಷಿಸಿದೆ. ಬೆಂಗಳೂರು ಹೊರತಾಗಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುವವರಿಗೆ 100 ರೂಪಾಯಿ ದಂಡ ವಿಧಿಸಲಾಗುವುದು ಎಂದು ಮಾರ್ಗಸೂಚಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಅಂತ್ಯಸಂಸ್ಕಾರಕ್ಕೂ, ಮದುವೆಗೂ ಜನಸಂಖ್ಯೆಯ ಮಿತಿ
ಮದುವೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ 200ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮುಚ್ಚಿದ ಸಭಾಂಗಣದಲ್ಲಿ 200 ಮತ್ತು ತೆರೆದ ಪ್ರದೇಶಗಳಲ್ಲಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಕೇವಲ 500 ಜನರು ಭಾಗವಹಿಸುವುದಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಹುಟ್ಟುಹಬ್ಬದ ಕಾರ್ಯಕ್ರಮಗಳಲ್ಲಿ 50 ರಿಂದ 100 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು, ಅಂತ್ಯಸಂಸ್ಕಾರಕ್ಕೂ ಇಂತಿಷ್ಟೇ ಜನರು ಭಾಗವಹಿಸಲು ನಿಯಮ ಜಾರಿಗೊಳಿಸಲಾಗಿದೆ. ಸಾರ್ವಜನಿಕ ಪ್ರದೇಶದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆದರೆ 100 ಜನರಿಗೆ ಮತ್ತು ನಿಗದಿತ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಸುವುದಾದರೆ 50 ಮಂದಿಯಷ್ಟೇ ಭಾಗವಹಿಸಬೇಕು ಎಂದು ನಿರ್ಬಂಧಿಸಲಾಗಿದೆ.
Recommended Video

ರಾಜ್ಯದಲ್ಲಿ 2500 ಗಡಿ ದಾಟಿದ ಕೊರೊನಾವೈರಸ್
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಕ್ರಮೇಣ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 2523 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, 10 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಪ್ರಕರಣಗಳ ಸಂಖ್ಯೆ 978478ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12471ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 18207 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.












Click it and Unblock the Notifications