ಮೊದಲು ಓದಿ: ಗಣೇಶ ಚತುರ್ಥಿ, ಮೊಹರಂ ಹಬ್ಬಕ್ಕೆ ಕೊವಿಡ್-19 ಮಾರ್ಗಸೂಚಿ
ಬೆಂಗಳೂರು, ಆಗಸ್ಟ್ 12: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಎದುರಾಗಿರುವ ಹಬ್ಬಗಳ ಆಚರಣೆ ವೇಳೆ ಕಡ್ಡಾಯವಾಗಿ ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
2021ರ ಆಗಸ್ಟ್ ತಿಂಗಳಿನಿಂದ ಅಕ್ಟೋಬರ್ ತಿಂಗಳ ಅವಧಿಯಲ್ಲಿ ಮೊಹರಂ, ಶ್ರೀಕೃಷ್ಣ ಜನ್ಮಾಷ್ಠಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ ಸೇರಿದಂತೆ ಹಲವು ಹಬ್ಬಗಳನ್ನು ಆಚರಿಸಲಾಗುತ್ತದೆ. ಈ ವೇಳೆಯಲ್ಲಿ ಹೆಚ್ಚು ಜನದಟ್ಟಣೆ ಮತ್ತು ಸಾಮಾಜಿಕ ಅಂತರವನ್ನು ತೊರೆದು ನಡೆದುಕೊಳ್ಳುವಂತಿಲ್ಲ. ಯಾವುದೇ ಕಾರಣಕ್ಕೂ ಕೊವಿಡ್-19 ಮಾರ್ಗಸೂಚಿಗಳ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ. ಮುಂಬರುವ ಹಬ್ಬಗಳ ಆಚರಣೆ ವೇಳೆ ಯಾವೆಲ್ಲ ನಿಯಮಗಳನ್ನು ಪಾಲನೆ ಮಾಡಬೇಕು ಎಂಬುದರ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಿದೆ.
ಲಾಕ್ಡೌನ್ ಆಗಬಾರದೆಂದರೆ ಸರಿಯಾಗಿ ಕೆಲಸ ಮಾಡಿ; ಬಸವರಾಜ ಬೊಮ್ಮಾಯಿ
ಕೊವಿಡ್-19 ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ರಾಜ್ಯ ಸರ್ಕಾರವು ಅಗತ್ಯ ನಿಯಂತ್ರಣ ಕ್ರಮಗಳನ್ನು ತೆಗೆದುಕೊಂಡಿದೆ. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಕೊವಿಡ್-19 ಸಾಂಕ್ರಾಮಿಕ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಈ ಸೋಂಕಿನ ಸರಪಳಿಯನ್ನು ಕತ್ತರಿಸಲು ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಿರುವ ಪ್ರಮುಖ ಅಂಶಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.
ಕೊರೊನಾವೈರಸ್ ಮಾರ್ಗಸೂಚಿಯಲ್ಲಿ ಅಂಶಗಳು
* ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಎಲ್ಲ ರೀತಿಯ ಒಗ್ಗೂಡುವಿಕೆಯ ಸಭೆ ಮತ್ತು ಸಮಾರಂಭಗಳನ್ನು ನಿಷೇಧಿಸಲಾಗಿದೆ.
* ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಮತ್ತು ಇತರೆ ಧಾರ್ಮಿಕ ಸ್ಥಳ ಸೇರಿದಂತೆ ಎಲ್ಲ ಪೂಜಾ ಸ್ಥಳಗಳನ್ನು ತೆರೆಯಲು ಕೊವಿಡ್-19 ನಿಯಮಗಳ ಪಾಲನೆ ಅಡಿಯಲ್ಲಿ ಅನುಮತಿ ನೀಡಲಾಗಿದೆ.
* ದೇವಸ್ಥಾನಗಳಲ್ಲಿ ಹಬ್ಬ ಹರಿದಿನ, ಜಾತ್ರೆ, ಮಹೋತ್ಸವ, ಮೆರವಣಿಗೆ, ಸಭೆ ಮತ್ತು ಸಮಾರಂಭಗಳಿಗೆ ಯಾವುದೇ ಅನುಮತಿ ಇರುವುದಿಲ್ಲ.
* ಹಬ್ಬಗಳ ಸಂದರ್ಭದಲ್ಲಿ ಸಭೆ ಸಮಾರಂಭಗಳು ತೀರಾ ಅಗತ್ಯವಾಗಿದ್ದಲ್ಲಿ ಬಿಬಿಎಂಪಿ ಆಯುಕ್ತರು ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಆದೇಶಿಸಲಾಗಿದೆ.
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಈ ಕೊವಿಡ್-19 ಮಾರ್ಗಸೂಚಿಗಳು ಪಾಲನೆ ಆಗುವಂತೆ ನೋಡಿಕೊಳ್ಳತಕ್ಕದ್ದು.
* ಕೊವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಅಧಿನಿಮಯ, 2005 ಸೆಕ್ಷನ್ 51 ರಿಂದ 60ರ ಅನ್ವಯ ಮತ್ತು ಭಾರತೀಯ ದಂಡ ಸಂಹಿತೆ 188ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದ ಇತರೆ ಕಾನೂನು ಉಪ ಬಂಧಗಳಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮೊಹರಂ ಹಬ್ಬ ಆಚರಣೆಗೆ ಹೊರಡಿಸಿದ ಮಾರ್ಗಸೂಚಿ
* ಸಾರ್ವಜನಿಕ ಸ್ಥಳಗಳಲ್ಲಿ ಅಲಂಗಳನ್ನು/ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ. ಇದರ ಜೊತೆಗೆ ದಿನಾಂಕ ಆಗಸ್ಟ್ 12 ರಿಂದ 20ರವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾಧಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸುವುದು .
* ಪಂಜ, ಅಲಂ ಮತ್ತು ತಾಜಿಯತ್ ಅನ್ನು ಸಾರ್ವಜನಿಕರು ಮುಟ್ಟದೇ ದೂರದಿಂದ ನೋಡತಕ್ಕದ್ದು.
* ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗದಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ. ಖಬರಸ್ಥಾನಗಳಲ್ಲಿ ಕೇವಲ ದಫನ ಮಾಡುವುದಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.
* ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು
* 60 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವುದು
* ಕೊವಿಡ್-19 ಮುನ್ನೆಚ್ಚರಿಕೆಗಳೊಂದಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸತಕ್ಕದ್ದು, ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಸಂಖ್ಯೆಯ ಪಾಳೆಯದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸತಕ್ಕದ್ದು.
* ಕೊರೊನಾವೈರಸ್ ಮುನ್ನಚ್ಚರಿಕೆಗೆ ಸಂಬಂಧಿಸಿದಂತೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು. ಆಗಾಗ ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ ನಿಂದ ತೊಳೆದುಕೊಳ್ಳುವುದು. ಮಸೀದಿ ಪ್ರವೇಶಕ್ಕೂ ಮೊದಲು ದೇಹದ ತಾಪಮಾನ ಪರೀಕ್ಷಿಸುವುದು.
* ಭಕ್ತಾಧಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಜನರು ಗುಂಪುಗೂಡುವುದನ್ನು ತಡೆಯುವುದು. ಮುಖ್ಯದ್ವಾರದ ಬಳಿ ಭಕ್ತಾದಿಗಳು ಕುಳಿತುಕೊಳ್ಳುವ ವ್ಯವಸ್ಥೆಯನ್ನು ಆಡಳಿತ ಮಂಡಳಿ ಮಾಡತಕ್ಕದ್ದು.
* ಮಸೀದಿಗಳಲ್ಲಿ ಪ್ರಾರ್ಥನೆಗಳಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದಲೇ ಮುಸಲ್ಲಾವನ್ನು ತರುವುದು ಕಡ್ಡಾಯ. ಇದರ ಜೊತೆಗೆ ಪರಸ್ಪರರು ಹಸ್ತಲಾಘವ ಮತ್ತು ಆಲಿಂಗನವನ್ನು ಮಾಡುವಂತಿಲ್ಲ.
* ಮಸೀದಿ ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಸೇರಿದಂತೆ ಇತರೆ ಸ್ಥಳಗಳಲ್ಲಿ ಮೊಹರಂ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ.
* ಮೊಹರಂ ಪ್ರಯುಕ್ತ ಯಾವುದೇ ರೀತಿ ಮೆರವಣಿಗೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಭಾಷಣಗಳನ್ನು ನಡೆಸುವಂತಿಲ್ಲ.
* ಭಕ್ತಾದಿಗಳು ಯಾವ ರೀತಿಯ ನಡೆದುಕೊಳ್ಳಬೇಕು, ಯಾವ ರೀತಿ ನಡೆದುಕೊಳ್ಳಬಾರದು ಎಂಬುದನ್ನು ಧ್ವನಿವರ್ಧಕದ ಮೂಲಕ ಸೂಚಿಸುವುದು.
ಗಣೇಶ ಚತುರ್ಥಿ ಆಚರಿಸುವುದಕ್ಕೆ ಮಾರ್ಗಸೂಚಿ
* ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಪೂರ್ವಕವಾಗಿ ಸರಳ ರೀತಿಯಲ್ಲಿ ದೇವಸ್ಥಾನಗಳಲ್ಲಿ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನದ ವೇದಿಕೆಗಳನ್ನು ನಿರ್ಮಿಸಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.
* ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜನೆ ಮಾಡುವ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಮತ್ತು ಮನೋರಂಜನೆ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
* ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತಿ ಸಮೀಪದ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕ್ ಗಳಲ್ಲಿ ವಿಸರ್ಜನೆ ಮಾಡುವುದು.
* ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು. ಸಾರ್ವಜನಿಕ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್ ಅಥವಾ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದು.
* ಗಣೇಶ ದರ್ಶನಕ್ಕೆ ಆಗಮಿಸುವ ಭಕ್ತರು ಮಾಸ್ಕ್ ಧರಿಸುವುದರ ಜೊತೆಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಗುರುತು ಹಾಕುವುದು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ವಹಿಸುವುದು.
* ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲ ಆದೇಶ ನಿರ್ದೇಶ ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡತಕ್ಕದ್ದು.
ಸ್ಥಳೀಯ ಆಡಳಿತ ಮಂಡಳಿಗಳು ಹೊರಡಿಸುವ ಮಾರ್ಗಸೂಚಿ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಇದರ ಜೊತೆ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳು ಹೊರಡಿಸುವ ಸೂಚನೆಗಳು, ಮಾರ್ಗಸೂಚಿಗಳು ಅಥವಾ ಪ್ರಮಾಣಿತ ಕಾರ್ಯ ವಿಧಾನಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
Recommended Video
ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿನ ಏರಿಳಿತ ಮುಂದುವರಿದಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.15ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.61ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1857 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1950 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 30 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36911 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2924732ಕ್ಕೆ ಏರಿಕೆಯಾಗಿದೆ. ಒಟ್ಟು 2865067 ಸೋಂಕಿತರು ಗುಣಮುಖರಾಗಿದ್ದು. 22728 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.