ನಾನು ಬದುಕಿನಲ್ಲಿ ಅನುಭವಿಸಿದ ಹಸಿವೇ 'ಅನ್ಯಭಾಗ್ಯ'ಕ್ಕೆ ಪ್ರೇರಣೆ: ಸಿಎಂ ಸಿದ್ದರಾಮಯ್ಯ ಭಾವುಕ ಟ್ವೀಟ್
ಬೆಂಗಳೂರು, ಜುಲೈ 10: ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ 'ಅನ್ನಭಾಗ್ಯ' ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ' ಎಂದು ಹೇಳಿದ್ದಾರೆ.

ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು ಎಂದು ಅವರು ಹೇಳಿದ್ದಾರೆ.

ಅಕ್ಕಿಯ ಬದಲಿಗೆ ನೀಡುವ ಹಣ
ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ 'ಅನ್ನಭಾಗ್ಯ' ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಅವರು ಹೇಳಿದ್ದಾರೆ.
'ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ: ಡಿಕೆಶಿ
ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ. ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ 'ಅನ್ನಭಾಗ್ಯ ಯೋಜನೆ'ಯಡಿ 1.28 ಕೋಟಿ ಬಡ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಚಾಲನೆ ನೀಡಲಾಗುವುದು. 'ಹಸಿವು ಮುಕ್ತ ಕರ್ನಾಟಕವೇ ನಮ್ಮ ಗುರಿ' ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಇಂದು ಸಂಜೆ ಅನ್ನಭಾಗ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. 5 ಕೆಜಿ ಅಕ್ಕಿ ಖಾತರಿ ಯೋಜನೆಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನು ಇಂದು ಪ್ರಾರಂಭಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.
ಕೇಂದ್ರ ಸರ್ಕಾರವು ಜೂನ್ನಲ್ಲಿ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮತ್ತು ಗೋಧಿ ಮಾರಾಟವನ್ನು ನಿಲ್ಲಿಸಿದ ನಂತರ ನಗದನ್ನು ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ.
ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಿಂಗಳಿಗೆ ಹತ್ತು ಕೆಜಿ ಉಚಿತ ಅಕ್ಕಿಯನ್ನು ಖಾತರಿಪಡಿಸಲಾಗಿದೆ.












Click it and Unblock the Notifications