ಮನೆ ಬಾಗಿಲಿಗೆ ದಾಖಲೆ ತಲುಪಿಸಲಿದೆ ಕರ್ನಾಟಕ ಸರ್ಕಾರ
ಬೆಂಗಳೂರು, ಫೆಬ್ರವರಿ 26 : ಅಗತ್ಯ ದಾಖಲೆಗಳನ್ನು ಪಡೆಯಲು ಜನರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಹೊಸ ಯೋಜನೆಯನ್ನು ಜಾರಿಗೆ ತರಲಿದೆ.
ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಇಂತಹ ಯೋಜನೆಯನ್ನು ಜಾರಿಗೆ ತಂದು ಈಗಾಗಲೇ ಯಶಸ್ವಿಯಾಗಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಯೋಜನೆ ಜಾರಿಗೆ ಬರಲಿದೆ. ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸಿದ್ದು, ಯಶಸ್ವಿಯಾಗಿದೆ.
ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಜನನ ಮತ್ತು ಮರಣ ಪ್ರಮಾಣ ಪತ್ರ, ಹಿರಿಯ ನಾಗರಿಕ ಗುರುತಿನ ಚೀಟಿ ಸೇರಿದಂತೆ 100 ಸೇವೆಗಳನ್ನು ಈ ಯೋಜನೆ ವ್ಯಾಪ್ತಿಗೆ ತರಲಾಗುತ್ತದೆ. ಮೊಬೈಲ್ ಸಹಾಯಕರ ಮೂಲಕ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ.

ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದ್ದು, ಯಶಸ್ವಿಯಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರದಲ್ಲೇ ರಾಜ್ಯವ್ಯಾಪ್ತಿಯಲ್ಲಿ ಯೋಜನೆ ಚಾಲನೆ ನೀಡಲಿದ್ದಾರೆ.
ಸಹಾಯವಾಣಿ : ಈ ಯೋಜನೆ ಜಾರಿಗೆ ಸಹಾಯವಾಣಿಯನ್ನು ಆರಂಭಿಸಲಾಗುತ್ತದೆ. ಜನರು ದೂರವಾಣಿ ಕರೆ ಮಾಡಿ ಯಾವ ಪ್ರಮಾಣ ಪತ್ರ ಬೇಕು ಎಂದು ಹೇಳಬೇಕು. ಅದಕ್ಕೆ ಅಗತ್ಯವಿರುವ ದಾಖಲೆಗಳನ್ನು ಸಹಾಯವಾಣಿಯವರು ತಿಳಿಸುತ್ತಾರೆ.
ಸಹಾಯಕ ನಿಮ್ಮ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಸಂಗ್ರಹಿಸುತ್ತಾನೆ. ಬಳಿಕ ಟ್ಯಾಬ್ ಮೂಲಕ ಸ್ಥಳದಲ್ಲಿಯೇ ಅರ್ಜಿಯನ್ನು ಭರ್ತಿ ಮಾಡಬೇಕು. 110 ರೂ.ಗಳನ್ನು ಜನರು ಪಾವತಿ ಮಾಡಿದರೆ ಅರ್ಜಿಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲಾಗುತ್ತದೆ.
ಪ್ರಮಾಣ ಪತ್ರಗಳು ಸಿದ್ಧವಾದ ಬಳಿಕ ನಿಮ್ಮ ಮನೆಗೆ ಅದನ್ನು ಸಹಾಯಕ ತಲುಪಿಸುತ್ತಾನೆ. ವಿವಿಧ ಸರ್ಕಾರಿ ಇಲಾಖೆಗಳ 100 ಸೇವೆಗಳನ್ನು ಈ ಯೋಜನೆ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ.












Click it and Unblock the Notifications